i
ಚಿತ್ರದುರ್ಗ:
ಭದ್ರಾ ಮೇಲ್ದಂಡೆ ಯೋಜನೆಯಡಿ ತುಮಕೂರು ಮತ್ತು ಚಿಕ್ಕಮಗಳೂರು ಜಿಲ್ಲೆಯಲ್ಲಿ ಭೂಸ್ವಾಧೀನ ಪ್ರಕ್ರಿಯೆಯಲ್ಲಿ ಯಾವುದೇ ಪ್ರಗತಿಯಾಗಿಲ್ಲ. ಹೀಗಾಗಿ ಭೂಸ್ವಾಧೀನ ಪ್ರಕ್ರಿಯೆಗೆ ಇರುವ ಸಮಸ್ಯೆಗಳನ್ನು ನಿವಾರಿಸಲು ಶೀಘ್ರದಲ್ಲಿಯೇ ಉಭಯ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಹಾಗೂ ಭೂಸ್ವಾಧೀನ ಅಧಿಕಾರಿಗಳು ಸೇರಿದಂತೆ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಪ್ರತ್ಯೇಕವಾಗಿ ಸಭೆ ನಡೆಸಲಾಗುವುದು ಎಂದು ಸಂಸದ ಎ. ನಾರಾಯಣಸ್ವಾಮಿ ಹೇಳಿದರು.
ನಗರದ ಭದ್ರಾ ಮೇಲ್ದಂಡೆ ಯೋಜನಾ ಕಚೇರಿ ಸಭಾಂಗಣದಲ್ಲಿ ಬುಧವಾರ ಏರ್ಪಡಿಸಲಾಗಿದ್ದ ಭದ್ರಾ ಮೇಲ್ದಂಡ ಯೋಜನೆ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಭದ್ರಾ ಮೇಲ್ದಂಡೆ ಯೋಜನೆಯಡಿ ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ ಹಾಗೂ ತುಮಕೂರು ಜಿಲ್ಲೆಗಳಲ್ಲಿ 2.25 ಲಕ್ಷ ಹೆ. ಕ್ಷೇತ್ರಕ್ಕೆ ಹನಿ ನೀರಾವರಿ ಹಾಗೂ ಒಟ್ಟು 367 ಕೆರೆಗಳಿಗೆ ನೀರು ತುಂಬಿಸಿ ಅಂತರ್ಜಲ ಅಭಿವೃದ್ಧಿ ಮತ್ತು ರೈತ ಕೃಷಿಕರ ಅಭಿವೃದ್ಧಿ ಕೈಗೊಳ್ಳುವುದು ಸರ್ಕಾರದ ಉದ್ದೇಶವಾಗಿದೆ.
ಭದ್ರಾದಿಂದ ವಿವಿ ಸಾಗರಕ್ಕೆ ನೀರು ಹರಿಸಲು ಅಜ್ಜಂಪುರ ಬಳಿಯ ರೈಲ್ವೆ ಕೆಳ ಸೇತುವೆ ನಿರ್ಮಾಣಕ್ಕೆ ಇದ್ದಂತಹ ಅಡ್ಡಿಯನ್ನು ನಿವಾರಿಸಲಾಗಿದೆ. ಯೋಜನೆಗೆ ಸಂಬಂಧಿಸಿದಂತೆ ಚಿಕ್ಕಮಗಳೂರು ಹಾಗೂ ತುಮಕೂರು ಜಿಲ್ಲೆಯಲ್ಲಿ ಭೂಸ್ವಾಧೀನ ಪ್ರಕ್ರಿಯೆಯಲ್ಲಿ ಯಾವುದೇ ಪ್ರಗತಿಯಾಗಿಲ್ಲ. ಹೀಗಾಗಿ ಈ ಪ್ರಕ್ರಿಯೆಗೆ ಇರುವ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಶೀಘ್ರದಲ್ಲಿಯೇ ಉಭಯ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಹಾಗೂ ಭೂಸ್ವಾಧೀನ ಅಧಿಕಾರಿಗಳು ಸೇರಿದಂತೆ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಪ್ರತ್ಯೇಕವಾಗಿ ಸಭೆ ನಡೆಸಲಾಗುವುದು ಎಂದು ಸಂಸದ ಎ. ನಾರಾಯಣಸ್ವಾಮಿ ಹೇಳಿದರು.
ತುಂಗಾದಿಂದ 17.40 ಟಿಎಂಸಿ ನೀರು ಪಡೆಯುವ ಕಾಮಗಾರಿಗೆ ಸಂಬಂಧಿಸಿದಂತೆ ಯಾವುದೇ ಪ್ರಗತಿಯಾಗುತ್ತಿಲ್ಲ. ಕಾಮಗಾರಿ ಕೈಗೊಳ್ಳುತ್ತಿರುವ ಗುತ್ತಿಗೆದಾರರಿಗೆ ಹಲವು ಬಾರಿ ತಿಳಿಸಿದಾಗ್ಯೂ ಕಾಮಗಾರಿಯಲ್ಲಿ ವೇಗ ಕಾಣುತ್ತಿಲ್ಲ. ಹೀಗಾಗಿ ಇಲ್ಲಿನ ಗುತ್ತಿಗೆದಾರರನ್ನು ಬದಲಾಯಿಸುವ ಸ್ಥಿತಿ ನಿರ್ಮಾಣವಾಗಿದ್ದು, ಹೊಸ ಟೆಂಡರ್ ಕರೆದು, ಒಳ್ಳೆಯ ಗುತ್ತಿಗೆದಾರರಿಗೆ ಕಾಮಗಾರಿಯ ಹೊಣೆ ವಹಿಸುವುದು ಅನಿವಾರ್ಯವಾಗಲಿದೆ. ಭದ್ರಾ ಜಲಾಶಯದಿಂದ ನೀರು ಪಡೆಯುವುದಕ್ಕೆ ಸಂಬಂಧಿಸಿದಂತೆ ಅಜ್ಜಂಪುರದವರೆಗಿನ ಕಾಲುವೆ ಹಾಗೂ ಪಂಪ್ಹೌಸ್ ಕಾಮಗಾರಿಗಳು ಪೂರ್ಣಗೊಂಡಿವೆ.
ಆದರೆ ವೈ ಜಂಕ್ಷನ್ನಿಂದ ಮುಂದೆ 02 ಕಿ.ಮೀ. ಅಂದರೆ 44 ಹೆ. ಭೂಸ್ವಾಧೀನ ಪ್ರಕ್ರಿಯೆ ಹಾಗೆಯೇ ಉಳಿದಿದೆ. ಅಬ್ಬಿನಹೊಳಲು ಗ್ರಾಮ ಭಾಗದ ರೈತರ ಭೂಮಿ ಸ್ವಾಧಿನ ಪಡಿಸಿಕೊಳ್ಳುವುದಕ್ಕೆ ಸಂಬಂಧಿಸಿದಂತೆ ಭೂಸ್ವಾಧೀನ ನಿಯಮವನ್ನು ಮೀರಿ ಹೆಚ್ಚಿನ ಪರಿಹಾರ ನೀಡುವಂತೆ ಅಲ್ಲಿನ ರೈತರು ಪಟ್ಟು ಹಿಡಿದಿರುವುದು ಸಮಸ್ಯೆಯಾಗಿದೆ.
ಸರ್ಕಾರದ ಭೂಸ್ವಾಧೀನ ಪ್ರಕ್ರಿಯೆಯಲ್ಲಿ ಪರಿಹಾರ ಮೊತ್ತ ನಿಗದಿಪಡಿಸುವ ವಿಚಾರ ತಾಲ್ಲೂಕು ಹಾಗೂ ಜಿಲ್ಲೆಗಳಿಗೆ ನಿಯಮಗಳು ಬೇರೆ ಬೇರೆ ಮಾಡಲು ಬರುವುದಿಲ್ಲ. ಹೀಗಾಗಿ ಕಾನೂನು ಪರಿಮಿತಿಯಲ್ಲಿ ಹೆಚ್ಚಿನ ಪರಿಹಾರ ನೀಡಲು ಸಾಧ್ಯವಿಲ್ಲ.
ಈಗಾಗಲೆ ಹಲವು ಬಾರಿ ರೈತರೊಂದಿಗೆ ಚರ್ಚೆ ಮಾಡಲಾಗಿದೆ. ಅಲ್ಲಿನ ರೈತರು ಮತ್ತು ಜನಪ್ರತಿನಿಧಿಗಳೊಂದಿಗೆ ಮತ್ತೊಮ್ಮೆ ಸಭೆ ನಡೆಸಿ ಸಮಾಲೋಚನೆ ಮಾಡಲಾಗುವುದು. ನಿಯಮಗಳಿಗೆ ಅನುಗುಣವಾಗಿ ರೈತರು ಪರಿಹಾರವನ್ನು ಪಡೆಯಬೇಕಾಗುತ್ತದೆ.
ಇಲ್ಲದಿದ್ದಲ್ಲಿ ನ್ಯಾಯಾಲಯದ ಹಂತದಲ್ಲಿ ತೀರ್ಮಾನವಾಗಬೇಕಾಗುತ್ತದೆ. ರೈತರಿಗೆ ತೊಂದರೆ ಅಥವಾ ಅನ್ಯಾಯ ಆಗಬೇಕೆನ್ನುವ ಮನಸ್ಥಿತಿ ನಮ್ಮದಲ್ಲ ಎಂದು ಸಂಸದರು ಹೇಳಿದರು.
ಚಳ್ಳಕೆರೆ, ಮೊಳಕಾಲ್ಮೂರು ತಾಲ್ಲೂಕುಗಳ ಕೆರೆಗಳನ್ನು ತುಂಬಿಸಲು 538.71 ಕೋಟಿ ರೂ., ಪಾವಗಡ ತಾಲ್ಲೂಕಿನಲ್ಲಿ 30 ಕೆರೆಗಳನ್ನು ತುಂಬಿಸುವ 6321.45 ಕೋಟಿ ರೂ. ಹಾಗೂ ಇಲ್ಲಿನ ರಾಣಿಕೆರೆ-108.21, ಸಾಣೆಕೆರೆ-58.95 ಕೋಟಿ ರೂ. ವೆಚ್ಚದ ಕಾಮಗಾರಿಗೆ ಟೆಂಡರ್ ಪ್ರಕ್ರಿಯೆ ಆಗಿದ್ದು, ಕಾಮಗಾರಿ ಪ್ರಗತಿಯಲ್ಲಿದೆ. ಕೆರೆಗಳನ್ನು ತುಂಬಿಸುವುದಕ್ಕೆ ಮೊದಲ ಆದ್ಯತೆ ನೀಡಲಾಗುತ್ತಿದ್ದು, ಆ ಬಳಿಕವೇ ಹನಿ ನೀರಾವರಿ ಯೋಜನೆಗೆ ಸಂಬಂಧಿಸಿದಂತೆ ಕಾಮಗಾರಿ ಕೈಗೊಳ್ಳಲಾಗುವುದು ಎಂದು ಸಂಸದ ಎ. ನಾರಾಯಣಸ್ವಾಮಿ ಅವರು ಹೇಳಿದರು.
ಸಭೆಯಲ್ಲಿ ಭದ್ರಾ ಮೇಲ್ದಂಡೆ ಯೋಜನೆಯ ಮುಖ್ಯ ಇಂಜಿನಿಯರ್ ವೇಣುಗೋಪಾಲ್ ಸೇರಿದಂತೆ ಚಿತ್ರದುರ್ಗ, ಚಳ್ಳಕೆರೆ, ಹಿರಿಯೂರು, ಹೊಸದುರ್ಗ, ಹೊಳಲ್ಕೆರೆ, ಮೊಳಕಾಲ್ಮೂರು, ಸಿರಾ, ಪಾವಗಡ, ತರೀಕರೆ ತಾಲ್ಲೂಕುಗಳ ತಹಶೀಲ್ದಾರರು, ಯೋಜನೆಯ ವಿವಿಧ ಇಂಜಿನಿಯರ್ಗಳು ಪಾಲ್ಗೊಂಡಿದ್ದರು.