i
ಚಂದ್ರವಳ್ಳಿ ನ್ಯೂಸ್, ಮೈಸೂರು/ಎಚ್.ಡಿ.ಕೋಟೆ:
ಮುಂಬರುವ 2023ರ ವಿಧಾನಸಭಾ ಚುನಾವಣೆಯಲ್ಲಿ ಚಿತ್ರದುರ್ಗದಿಂದ ವಿಧಾನ ಪರಿಷತ್ ಮಾಜಿ ಸದಸ್ಯ ರಘು ಆಚಾರ್ ಅವರಿಗೆ ಕಾಂಗ್ರೆಸ್ ಟಿಕೆಟ್ ಸಿಗುವ ಸುಳಿವನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದ್ದಾರೆ.
ಮೈಸೂರು ಜಿಲ್ಲೆಯ ಎಚ್.ಡಿ.ಕೋಟೆ ನಗರದಲ್ಲಿ ನಡೆದ ವಿಶ್ವಕರ್ಮ ಜಯಂತ್ಯುತ್ಸವ ಉದ್ಘಾಟಿಸಿ ಮಾತನಾಡಿದ ಸಿದ್ದರಾಮಯ್ಯ ಅವರು, ರಘು ಆಚಾರ್ ಚಿತ್ರದುರ್ಗ ವಿಧಾನಸಭಾ ಕ್ಷೇತ್ರದಿಂದ ಟಿಕೆಟ್ ಕೇಳಿದ್ದಾರೆ. ಆಯ್ತು ನೋಡೋಣ ಎಂದು ಭರವಸೆ ನೀಡಿದ್ದೇನೆ ಎಂದು ಹೇಳಿದರು.
ಮಾಜಿ ವಿಧಾನ ಪರಿಷತ್ ಸದಸ್ಯ ರಘು ಆಚಾರ್ ಆರ್ಥಿಕವಾಗಿ ಪ್ರಬಲರಾಗಿದ್ದು ಯಾವುದೇ ಕ್ಷೇತ್ರದಲ್ಲಿ ಯಾರ ವಿರುದ್ಧವಾದರೂ ಸ್ಪರ್ಧಿಸಿ ಗೆಲ್ಲುವ ಸಾಮರ್ಥ್ಯ ಹೊಂದಿದ್ದಾರೆಂದರಲ್ಲದೆ, 2023ರ ವಿಧಾನಸಭಾ ಚುನಾವಣೆಗೆಯಲ್ಲಿ ಸ್ಪರ್ಧಿಸಲು ಟಿಕೆಟ್ ಕೇಳಿದ್ದು ಟಿಕೆಟ್ ನೀಡಿದರೆ ಗೆಲ್ಲುವ ವಿಶ್ವಾಸವನ್ನೂ ರಘು ಆಚಾರ್ ವ್ಯಕ್ತಪಡಿಸಿದ್ದಾರೆ. ಈಗಾಗಲೇ ಚಿತ್ರದುರ್ಗ ಕ್ಷೇತ್ರದಿಂದ ಸ್ಪರ್ಧಿಸಿ ಎರಡು ಬಾರಿ ಗೆದ್ದು 12 ವರ್ಷ ಎಂಎಲ್ಸಿಯಾಗಿದ್ದಾರೆ. ಅವರು ನಾಮನಿರ್ದೇಶನ ಆದವರಲ್ಲ. ಚುನಾವಣೆಗೆ ನಿಂತು ಗೆದ್ದಿದ್ದಾರೆ ಎಂದು ಸಿದ್ದರಾಮಯ್ಯ ತಿಳಿಸಿದರು. ವಿಶ್ವಕರ್ಮ ಸಮಾಜದವರು ಹೇಳಿದ್ದನ್ನು ಕೇಳಿಸಿಕೊಂಡಿದ್ದೇನೆ. ನಮಗೆ ಅವಕಾಶ ಸಿಕ್ಕರೆ ನಿಮಗೆ ಶಕ್ತಿ ತುಂಬುವ ಕೆಲಸ ಮಾಡುತ್ತೇವೆ. ಈ ಬಗ್ಗೆ ಯಾವ ಅನುಮಾನ, ಸಂಶಯ ಬೇಡ. ನೀವು ಕೇಳಬೇಕು. ನಾವು ಕೊಡುತ್ತೇವೆ. ನೀವು ಕೇಳದಿದ್ದರೂ ಕೊಟ್ಟೇ ಕೊಡುತ್ತೇವೆ ಎಂದು ಸಿದ್ದರಾಮಯ್ಯ ಅವರು ಹೇಳಿದರು.
ಸಿದ್ದರಾಮಯ್ಯನವರ ಭಾಷಣ ಮಾಡಲು ಬರುತ್ತಿದ್ದಂತೆ ವಿಶ್ವಕರ್ಮ ಮಹಾಸಭಾ ರಾಜ್ಯಾಧ್ಯಕ್ಷ ಕೆ.ಪಿ.ನಂಜುಂಡಿ ಅವರು ಚೀಟಿಯೊಂದನ್ನು ಬರೆದು ರಘು ಆಚಾರ್ ಅವರಿಗೆ ಚಿತ್ರದುರ್ಗದ ಟಿಕೆಟ್ ನೀಡುವಂತೆ ಕೋರಿದರು. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿದ್ದರಾಮಯ್ಯ, ಏ ನಂಜುಂಡಿ ಸುಮ್ನಿರಯ್ಯ, ಈಗಾಗಲೇ ನಾನು ರಘು ಆಚಾರ್ ಗೆ ಹೇಳಿದ್ದೇನೆ, ಸ್ವಾಮೀಜಿಗೂ ಹೇಳಿದ್ದೇನೆ ನೀನು ವೈಯಕ್ತಿಕವಾಗಿ ಸಿಗು ನಿನಗೂ ಹೇಳುತ್ತೇನೆ ಎಂದು ಸಿದ್ದರಾಮಯ್ಯ ಮಾರ್ಮಿಕವಾಗಿ ನುಡಿದರು.