i
ಪಕ್ಷಾಂತರ ಮಾಡುವುದಿಲ್ಲ ಎಂದು ಪ್ರಮಾಣ ಮಾಡುವವರಿಗೆ ಜೆಡಿಎಸ್ ಟಿಕೆಟ್-ಎಚ್.ಡಿ.ಕುಮಾರಸ್ವಾಮಿ…
ಚಂದ್ರವಳ್ಳಿ ನ್ಯೂಸ್, ಕೋಲಾರ/ಮುಳಬಾಗಿಲು:
2023ರ ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಗೆಲ್ಲುವಂತ, ಪಕ್ಷಕ್ಕೆ ನಿಷ್ಠೆ ಹೊಂದಿರುವಂತ ಆಕಾಂಕ್ಷಿಗಳಿಗೆ ಜೆಡಿಎಸ್ ಟಿಕೆಟ್ ನೀಡಲಾಗುತ್ತದೆ. ಜೊತೆಯಲ್ಲಿ ಯಾವುದೇ ಕಾರಣಕ್ಕೂ ಪಕ್ಷಾಂತರ ಮಾಡುವುದಿಲ್ಲ ಎಂದು ಪ್ರಮಾಣ ಮಾಡಿಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು.
ಅವರು ಕೋಲಾರ ಜಿಲ್ಲೆಯ ಮುಳಬಾಗಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2023ರ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಅಧಿಕಾರಕ್ಕೆ ತರಲು ಎಲ್ಲ ರೀತಿಯ ಹೋರಾಟ ಮಾಡುತ್ತೇವೆ. ಈಗಾಗಲೆ 100 ಅಭ್ಯರ್ಥಿಗಳ ಪಟ್ಟಿ ಸಿದ್ದವಿದೆ. ದೇವೇಗೌಡರ ಸಲಹೆ ಪಡೆದು ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದರಲ್ಲದೆ ಬಹುಮುಖ್ಯವಾಗಿ ಜೆಡಿಎಸ್ ಪಕ್ಷದ ಶಕ್ತಿ ಬಳಸಿಕೊಂಡು ಅಭ್ಯರ್ಥಿಗಳು ಚುನಾವಣೆಯಲ್ಲಿ ಗೆದ್ದ ನಂತರ ಯಾವುದೇ ಆಸೆ ಆಮೀಷಕ್ಕೆ ಒಳಗಾಗಿ ಪಕ್ಷಾಂತರ ಮಾಡುವುದಿಲ್ಲ ಎಂದು ಪ್ರಮಾಣ ವಚನ ಮಾಡಿಸಲು ಉದ್ದೇಶಿಸಲಾಗಿದೆ ಎಂದು ಕುಮಾರಸ್ವಾಮಿ ತಿಳಿಸಿದರು.
ಇಂದಿನ ಸಮಾರಂಭದಲ್ಲೇ ಅಭ್ಯರ್ಥಿಗಳು ಪ್ರಮಾಣವಚನ ಸ್ವೀಕರಿಸಬೇಕಿತ್ತು. ಆದರೆ ಕನ್ನಡ ರಾಜ್ಯೋತ್ಸವ ಅಂಗವಾಗಿ ಕನ್ನಡ ಬಾವುಟ ಅಭಿಯಾನ ಹಮ್ಮಿಕೊಂಡಿರುವುದರಿಂದ ಎಲ್ಲರೂ ಸಮಾರಂಭಕ್ಕೆ ಬರಲು ಸಾಧ್ಯವಾಗಿಲ್ಲ. ಹೀಗಾಗಿ ಎರಡುಮೂರು ದಿನಗಳ ಬಳಿಕ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಬೇಕೆ ಅಥವಾ ಇಂದೇ ಮಾಡಬೇಕೆ ಎಂಬುದರ ಬಗ್ಗೆ ಗೌಡರ ಸಲಹೆ ಪಡೆಯಲಾಗುವುದು ಎಂದು ಕುಮಾರಸ್ವಾಮಿ ತಿಳಿಸಿದರು.
2023ರ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ 123 ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ಗುರಿ ಇಟ್ಟುಕೊಂಡು ಹೋರಾಟ ಮಾಡುತ್ತಿದ್ದೇವೆ. ಇದರಲ್ಲಿ ಯಾವುದೇ ರೀತಿಯ ಬದಲಾವಣೆ ಇಲ್ಲ. ಜೆಡಿಎಸ್ ಪಕ್ಷ 2023ರಲ್ಲಿ ಅಧಿಕಾರಕ್ಕೆ ಬಂದೇ ಬರಲಿದೆ ಎಂದು ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದರು.
ಕೋಲಾರ ಜಿಲ್ಲೆಯಲ್ಲಿ ಅಭ್ಯರ್ಥಿಗಳ ಕೊರತೆ ಇಲ್ಲ. ಆರು ವಿಧಾನಸಭಾ ಕ್ಷೇತ್ರಗಳ ಪೈಕಿ ಐದು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ. ಪಕ್ಷದ ಮುಖಂಡರು ಕಾರ್ಯಕರ್ತರು ನನಗೆ ಕೋಲಾರದಿಂದಲೇ ಸ್ಪರ್ಧೆ ಮಾಡುವಂತೆ ಒತ್ತಾಯ ಮಾಡುತ್ತಿದ್ದಾರೆ. ಆದರೆ ಸೂಕ್ತ ಸಮಯದಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಎರಡು ರಾಷ್ಟ್ರೀಯ ಪಕ್ಷಗಳಿಂದ ರಾಜ್ಯಕ್ಕೆ ಸಾಕಷ್ಟು ಅನ್ಯಾಯವಾಗಿದೆ. ಜೆಡಿಎಸ್ ಪಕ್ಷದ ಪ್ರಮುಖ ಉದ್ದೇಶ ಎಂದರೆ ಪಂಚರತ್ನ ರಥಯಾತ್ರೆಯೊಂದಿಗೆ ಜನಪರ ಸರ್ಕಾರ ಮಾಡುವುದಾಗಿದೆ. ಅದಕ್ಕಾಗಿ ಇಂದಿನಿಂದ ಪಂಚರತ್ನ ರಥಯಾತ್ರೆಯ ಮೂಲಕ ಪಕ್ಷದ ಭರವಸೆಯ ಜೊತೆಗೆ ಜನರ ಅಭಿಪ್ರಾಯ ಸಂಗ್ರಹಿಸಲಾಗುವುದು ಎಂದು ಕುಮಾರಸ್ವಾಮಿ ತಿಳಿಸಿದರು.