i
ಬಿಜೆಪಿ ಕಾಂಗ್ರೆಸ್ ಪಕ್ಷಗಳ ನಾಯಕರು ಜೆಡಿಎಸ್ ಸೇರ್ಪಡೆಗೆ ತೆರೆ ಮರೆಯಲ್ಲಿ ಮಾತುಕತೆ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
2023ರ ವಿಧಾನಸಭಾ ಚುನಾವಣೆಗೆ ಮೂರು ರಾಜಕೀಯ ಪಕ್ಷಗಳು ಸಿದ್ದತೆ ಮಾಡಿಕೊಳ್ಳುತ್ತಿರುವ ಬೆನ್ನಲ್ಲೆ ಕಾಂಗ್ರೆಸ್ ಮತ್ತು ಬಿಜೆಪಿಯ ರಾಷ್ಟ್ರೀಯ ಪಕ್ಷಗಳಿಂದ ಹಲವು ನಾಯಕರು ಜೆಡಿಎಸ್ ಸೇರ್ಪಡೆಗೆ ಸಿದ್ಧತೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ. 2023ರ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷವು ಸ್ವಂತ ಶಕ್ತಿಯ ಮೇಲೆ ಅಧಿಕಾರ ಹಿಡಿಯಬೇಕೆಂಬ ಮಹದಾಸೆ ಹೊಂದಿದ್ದು 123 ಕ್ಷೇತ್ರಗಳಲ್ಲಿ ಗೆಲ್ಲಬೇಕು ಎಂಬ ಗುರಿ ಹೊಂದಿದೆ.
ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಹಲವು ಕಾರಣಗಳಿಂದ ಕಾಂಗ್ರೆಸ್ ಮತ್ತು ಬಿಜೆಪಿಯಿಂದ ಸ್ಪರ್ಧಿಸಲು ಅವಕಾಶ ಸಿಗುವುದಿಲ್ಲ ಎನ್ನುವುದನ್ನು ಖಾತ್ರಿ ಮಾಡಿಕೊಂಡಿರುವ ಕೆಲ ಮುಖಂಡರು ಜೆಡಿಎಸ್ ಪಕ್ಷದತ್ತ ಮುಖ ಮಾಡಿದ್ದಾರೆ. ರಾಷ್ಟ್ರೀಯ ಪಕ್ಷಗಳಿಂದ ವಲಸೆ ಬರುವ ನಾಯಕರೊಂದಿಗೆ ಜೆಡಿಎಸ್ ನಾಯಕರು ನಿಕಟ ಸಂಪರ್ಕದಲ್ಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗುತ್ತಿದೆ.
ಉತ್ತರ ಕರ್ನಾಟಕದ ಬೆಳಗಾವಿ, ಬಳ್ಳಾರಿ, ಕೊಪ್ಪಳ, ಧಾರವಾಡ ಸೇರಿದಂತೆ ಬೆಂಗಳೂರು ಜಿಲ್ಲೆಗಳಲ್ಲಿನ ಕೆಲವು ಕಾಂಗ್ರೆಸ್-ಬಿಜೆಪಿಯ ನಾಯಕರು ಜೆಡಿಎಸ್ ಸೇರ್ಪಡೆಯಾಗಲು ಉತ್ಸಾಹ ತೋರುತ್ತಿದ್ದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರೊಂದಿಗೆ ಈಗಾಗಲೇ ಒಂದು ಸುತ್ತಿನ ಮಾತುಕತೆ ನಡೆದಿದೆ ಎಂದು ಜೆಡಿಎಸ್ ಪಕ್ಷದ ಆಪ್ತ ಮೂಲಗಳು ತಿಳಿಸಿವೆ.
ಜೆಡಿಎಸ್ ಪಕ್ಷವು ಈಗಾಗಲೇ ನೂರಕ್ಕೂ ಹೆಚ್ಚಿನ ಅಭ್ಯರ್ಥಿಗಳ ಪಟ್ಟಿ ಸಿದ್ಧ ಮಾಡಿಕೊಂಡಿತ್ತು. ಬಿಜೆಪಿ-ಕಾಂಗ್ರೆಸ್ ನಾಯಕರು ಜೆಡಿಎಸ್ ಸೇರಲು ಒಲವು ತೋರಿಸುತ್ತಿರುವುದರಿಂದಾಗಿ ಪಟ್ಟಿ ಬಿಡುಗಡೆ ಮಾಡಲು ಜೆಡಿಎಸ್ ನಾಯಕರು ವಿಳಂಬ ಮಾಡುತ್ತಿದ್ದಾರೆ ಎನ್ನುವ ಅಂಶವು ಹೊರ ಬಿದ್ದಿದೆ.