i
ನವೆಂಬರ್ 14 ರಿಂದ ಪಂಚರತ್ನ ರಥಯಾತ್ರೆ ಆರಂಭ, 3 ಹಂತದಲ್ಲಿ ಟಿಕೆಟ್ ಘೋಷಣೆ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
2023ರ ವಿಧಾನಸಭೆ ಚುನಾವಣೆ ಯಲ್ಲಿ 123 ಕ್ಷೇತ್ರಗಳಲ್ಲಿ ಗೆಲ್ಲಬೇಕು ಎಂಬ ಗುರಿ ಹೊಂದಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರ ಸ್ವಾಮಿ ಅವರು, ನಿರಂತರ ಸಭೆ, ಸಮಾಲೋಚನೆ ಮೂಲಕ ಚುನಾವಣೆ ಸಿದ್ಧತೆಯಲ್ಲಿ ತೊಡಗಿದ್ದಾರೆ.
ಮಳೆಯಿಂದಾಗಿ ಮುಂದೂಡಿದ್ದ ಬಹು ನಿರೀಕ್ಷಿತ ಜೆಡಿಎಸ್ ಪಕ್ಷದ ಪಂಚರತ್ನ ರಥಯಾತ್ರೆ ನವೆಂಬರ್.14ರಿಂದ ಆರಂಭವಾಗಿ ಡಿಸೆಂಬರ್ 6ರವರೆಗೆ 23 ದಿನಗಳ ಕಾಲ ಮೊದಲ ಹಂತದಲ್ಲಿ ನಡೆಯಲಿದೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ.
ಮೊದಲೇ ನಿರ್ಧರಿಸಿದಂತೆ ಕೋಲಾರ ಜಿಲ್ಲೆಯ ಮುಳಬಾಗಿಲು ವಿಧಾನಸಭಾ ಕ್ಷೇತ್ರದಿಂದ ಪಂಚರತ್ನ ರಥಯಾತ್ರೆ ನ.14ರಿಂದ ಆರಂಭಗೊಳ್ಳಲಿದೆ. ಅಂದೇ ಜೆಡಿಎಸ್ ಸಂಭವನೀಯ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಸಾಧ್ಯತೆ ಇದ್ದು ಅಂದು ಮಧ್ಯಾಹ್ನ ನಡೆಯುವ ಬಹಿರಂಗ ಸಮಾವೇಶದಲ್ಲಿ ವಿಧಾನಸಭೆ ಚುನಾವಣೆಯ ಸಂಭವನೀಯ ಅಭ್ಯರ್ಥಿಗಳಿಂದ ಪಕ್ಷಾಂತರ ಮಾಡುವುದಿಲ್ಲ ಎಂಬ ಪ್ರಮಾಣವನ್ನು ಮಾಡಿಸಲು ತೀರ್ಮಾನಿಸಲಾಗಿದೆ.
ಪಂಚರತ್ನ ಯಾತ್ರೆ ಸಂದರ್ಭದಲ್ಲೇ ಮಾಜಿ ಸಿಎಂ ಕುಮಾರಸ್ವಾಮಿ ಅವರು ಗ್ರಾಮ ವಾಸ್ತವ್ಯ ಮಾಡಲಿದ್ದಾರೆ. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬಹುಮತ ಗಳಿಸಿ ಸ್ವಂತ ಶಕ್ತಿಯ ಮೇಲೆ ರಾಜ್ಯದ ಅಧಿಕಾರದ ಚುಕ್ಕಾಣಿ ಹಿಡಿಯಬೇಕು ಎಂಬ ಗುರಿ ಹೊಂದಿರುವ ಜೆಡಿಎಸ್ ಮೂರು ಹಂತಗಳಲ್ಲಿ ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲು ಉದ್ದೇಶಿಸಿದೆ ಎನ್ನಲಾಗಿದೆ.
ಈಗಾಗಲೇ ವಿಧಾನಸಭೆ ಚುನಾವಣೆಯ 126 ಸಂಭವನೀಯ ಅಭ್ಯರ್ಥಿಗಳಿಗೆ ರಹಸ್ಯ ತರಬೇತಿ ನೀಡಿ ಚುನಾವಣೆ ಸಿದ್ಧತೆಯ ಬಗ್ಗೆ ಮಾರ್ಗದರ್ಶನ ಮಾಡಲಾಗಿದೆ. ಆದರೆ ಮೊದಲ ಪಟ್ಟಿಯಲ್ಲಿ 80-90 ಅಭ್ಯರ್ಥಿಗಳ ಹೆಸರನ್ನ ಮಾತ್ರ ಘೋಷಣೆ ಮಾಡಲು ನಿರ್ಣಯಿಸಲಾಗಿದೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ.
ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ, ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ, ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸೇರಿದಂತೆ ಪಕ್ಷದ ಎಲ್ಲ ನಾಯಕರು, ಮುಖಂಡರು ಹಾಗೂ ಶಾಸಕರು ಪಂಚರತ್ನ ರಥಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ.