i
ಸರ್ಕಾರಿ ಪ್ರೌಢಶಾಲೆ, ಡಿಪ್ಲೊಮೋ ಕಾಲೇಜು ಸ್ಥಾಪನೆಗೆ ಪ್ರಸ್ತಾವನೆ-ಜಿಲ್ಲಾಧಿಕಾರಿ ದಿವ್ಯಪ್ರಭು.ಜಿ.ಆರ್.ಜೆ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಮೊಳಕಾಲ್ಮೂರು ತಾಲ್ಲೂಕು ರಾಂಪುರ ಗ್ರಾಮದಲ್ಲಿ ಸರ್ಕಾರಿ ಪ್ರೌಢಶಾಲೆ ಹಾಗೂ ಡಿಪ್ಲೊಮೋ ಕಾಲೇಜು ಸ್ಥಾಪನೆ ಕುರಿತು, ಸಂಬಂಧಪಟ್ಟ ಇಲಾಖೆಯಿಂದ ವರದಿ ಪಡೆದುಕೊಂಡು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವುದಾಗಿ ಜಿಲ್ಲಾಧಿಕಾರಿ ದಿವ್ಯಪ್ರಭು.ಜಿ.ಆರ್.ಜೆ ಹೇಳಿದರು.
ಮೊಳಕಾಲ್ಮುರು ತಾಲ್ಲೂಕಿನ ದೇವಸಮುದ್ರ ಹೋಬಳಿ ರಾಂಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆರೆಕೊಂಡಾಪುರ ಗ್ರಾಮದಲ್ಲಿ ಶನಿವಾರ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸಿ ಅವರು ಮಾತನಾಡಿದರು.
ಗ್ರಾಮದ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ನೀಡುವುದರ ಜೊತೆಗೆ, ಆದ್ಯತೆ ಮೇರೆಗೆ ಸಮಸ್ಯೆಗಳನ್ನು ಪರಿಗಣಿಸಿ, ಯಾವ ಹಂತದ ಅಧಿಕಾರಿ ಅದನ್ನು ಬಗೆಹರಿಸಬೇಕು ಎನ್ನುವುದನ್ನು ನಿರ್ಧರಿಸಿ ಅನುಪಾಲನಾ ಕ್ರಮ ಕೈಗೊಳ್ಳಲಾಗುವುದು. ಅರ್ಜಿ ಸಲ್ಲಿಸಿದ ಎಲ್ಲಾ ಸಮಸ್ಯೆಗಳ ಪರಿಹಾರಕ್ಕೆ ಕ್ರಮವಹಿಸಲಾಗುವುದು ಎಂದರು.
ದೇಶದ ಶೇ.99 ರಷ್ಟು ಜನರ ಸೇವೆ ಮಾಡಲು ಶೇ.1 ರಷ್ಟು ನೌಕರ ವರ್ಗ ಕೆಲಸ ಮಾಡುತ್ತಿದೆ. ಜನರ ಸಮಸ್ಯೆಗಳಿಗೆ ಪರಿಹಾರ ನೀಡುವ ಕೆಲಸ ಅಧಿಕಾರಿಗಳದ್ದಾಗಿದೆ. ಅಧಿಕಾರಿಗಳು ಸಾರ್ವಜನಿಕರು ಸಲ್ಲಿಸುವ ಅಹವಾಲುಗಳನ್ನು ತಮ್ಮ ಹಂತದಲ್ಲೇ ಪರಿಹರಿಸಬೇಕು. ಜನರನ್ನು ಅನಗತ್ಯವಾಗಿ ಕಚೇರಿಗಳಿಗೆ ಅಲೆದಾಡಿಸಬಾರದು ಎಂದು ಸೂಚನೆ ನೀಡಿದರು.
ಸರ್ಕಾರ ಹಾಗೂ ಸಾರ್ವಜನಿಕರ ನಡುವಿನ ಸಂವಹನದ ಅಂತರವನ್ನು ಕಡಿಮೆ ಮಾಡಲು, ಜಿಲ್ಲಾ, ತಾಲೂಕು ಹಾಗೂ ಕೆಳಮಟ್ಟದ ಅಧಿಕಾರಿಗಳು ಗ್ರಾಮಕ್ಕೆ ಆಗಮಿಸಿದ್ದಾರೆ. ಸರ್ಕಾರದ ಯೋಜನೆಗಳ ಕುರಿತು ಮಾಹಿತಿ ಹಾಗೂ ತಿಳುವಳಿಕೆಯನ್ನು ನೀಡಲಾಗುವುದು. ಅಧಿಕಾರಿಗಳು ಸಮಸ್ಯೆಗಳಿಗೆ ಕಾನೂನು ಚೌಕಟ್ಟಿನಲ್ಲಿ ಪರಿಹಾರ ನೀಡಬೇಕೆ ಹೊರತು ಮತ್ತಷ್ಟು ಜಟಿಲಗೊಳಿಸಲಾಬಾರದು. ನೌಕರರು ಸಾರ್ವಜನಿಕರಿಂದ ಅನಗತ್ಯವಾಗಿ ಹಣ ವಸೂಲಿ ಮಾಡುವ ಪ್ರಕರಣ ಕಂಡು ಬಂದರೆ ಗಂಭೀರವಾಗಿ ಪರಿಗಣಿಸಿ, ಶಿಸ್ತು ಕ್ರಮಕೈಗೊಳ್ಳುವುದಾಗಿ ಜಿಲ್ಲಾಧಿಕಾರಿಗಳು ಎಚ್ಚರಿಸಿದರು.
ಆಸ್ಪತ್ರೆಗಳಲ್ಲಿ ಮಾಹಿತಿ ಫಲಕ ಅಳವಡಿಕೆಗೆ ಸೂಚನೆ: ರಾಂಪುರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ರೋಗಿಗಳಿಗೆ ನೀಡುವ ಚಿಕಿತ್ಸೆ ಹಾಗೂ ದೊರೆಯುವ ಸೌಲಭ್ಯಗಳ ಕುರಿತು ಮಾಹಿತಿ ಫಲಕವನ್ನು ಅಳವಡಿಸಬೇಕು. ರೋಗಿಗಳಿಂದ ಯಾವುದೇ ರೀತಿಯ ಶುಲ್ಕ ವಸೂಲಿ ಮಾಡಬಾರದು. ಗ್ರಾಮದ ಎಲ್ಲಾ ಅರ್ಹ ಬಿ.ಪಿ.ಎಲ್ ಪಡಿತರ ಹೊಂದಿರುವ ಕುಟುಂಬಗಳಿಗೆ ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ ಕಾರ್ಡುಗಳನ್ನು ನೀಡಬೇಕು. ಯೋಜನೆಯಡಿ ರೋಗಗಳನ್ನು ದಾಖಲಿಸಿಕೊಂಡು ಹೆಚ್ಚಿನ ಚಿಕಿತ್ಸೆಗಾಗಿ ಉನ್ನತ ಮಟ್ಟದ ಆಸ್ಪತ್ರೆಗಳಿಗೆ ಶಿಫಾರಸ್ಸು ಮಾಡಬೇಕು. ವೈದ್ಯರು ಹಾಗೂ ಸಿಬ್ಬಂದಿ ರೋಗಿಗಳೊಂದಿಗೆ ಉತ್ತಮ ರೀತಿಯಲ್ಲಿ ವ್ಯವಹರಿಸಬೇಕು. ಆಂಬ್ಯುಲೆನ್ಸ್ ಸೇವೆ ನೀಡುವ ಕುರಿತು ಅಳವಡಿಸಿರುವ ಶುಲ್ಕದ ಫಲಕ ಕೂಡಲೇ ತೆರವು ಮಾಡಬೇಕು. ರೋಗಿಗಳಿಗೆ ಆಸ್ಪತ್ರೆ ಔಷಧಾಲಯಗಳಿಂದಲೇ ಅಗತ್ಯ ಔಷಧಿಗಳನ್ನು ವಿತರಿಸಬೇಕು. ಡಿ.ಹೆಚ್.ಒ ಈ ಕುರಿತು ಮೇಲ್ವಿಚಾರಣೆ ನಡೆಸಬೇಕು. ಆಸ್ಪತ್ರೆ ಭೇಟಿ ಸಮಸ್ಯೆಗಳನ್ನು ಪರಿಹರಿಸುವಂತೆ ಅವರು ಸೂಚನೆ ನೀಡಿದರು. ಈ ಕುರಿತು ಪ್ರತಿಕ್ರಿಯಿಸಿದ ಡಿ.ಹೆಚ್.ಓ ಡಾ.ರಂಗನಾಥ, ರಾಂಪುರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಈಗಾಗಲೇ ಉಚಿತವಾಗಿ ಔಷಧಗಳನ್ನು ವಿತರಿಸಲಾಗುತ್ತಿದೆ. ಅಗತ್ಯ ಇರುವ ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿಗಳನ್ನು ನೇಮಿಸಲಾಗಿದೆ. ಹೊಸದಾಗಿ ಪ್ರಸೂತಿ ತಜ್ಞರನ್ನು ನೇಮಿಸಲಾಗಿದೆ. ಬಿ.ಪಿ.ಎಲ್.ಕಾರ್ಡು ಹೊಂದಿರುವ ರೋಗಿಗಳಿಗೆ ಉಚಿತವಾಗಿ ಆಂಬ್ಯುಲೆನ್ಸ್ ಸೇವೆ ನೀಡಲಾಗುತ್ತಿದೆ. ಎ.ಪಿ.ಎಲ್ ಅಥವಾ ಇತರೆ ರೋಗಿಗಳಿಗೆ ಕಿ.ಮೀ. ರೂ.6 ಗಳಂತೆ ಸರ್ಕಾರ ನಿರ್ದೇಶನದ ಅನುಸಾರ ಶುಲ್ಕ ವಿಧಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.
ಪಾರದರ್ಶಕವಾಗಿ ಫಲಾನುಭವಿಗಳ ಆಯ್ಕೆಗೆ ನಿರ್ದೇಶನ: ರಾಂಪುರ ರೈತ ಸಂಪರ್ಕ ಕೇಂದ್ರದಲ್ಲಿ ರಜಾ ದಿನ ಭಾನುವಾರದಂದು ನಿಯಮಬಾಹಿರವಾಗಿ ಶೇಂಗಾ ಕಿಟ್ಗಳನ್ನು ವಿತರಿಸಲಾಗಿದೆ ಎಂದು ಗ್ರಾಮದ ರೈತರು ಜಿಲ್ಲಾಧಿಕಾರಿಗಳಿಗೆ ದೂರು ನೀಡಿದರು.
ಈ ಕುರಿತು ಕೃಷಿ ಇಲಾಖೆ ಅಧಿಕಾರಿಗಳಿಂದ ಮಾಹಿತಿ ಪಡೆದ ಜಿಲ್ಲಾಧಿಕಾರಿಗಳು, ಉಚಿತ ಕಿಟ್ಗಳನ್ನು ನೀಡುವಾಗ ನಿಗದಿತ ಗುರಿಗಿಂತ ಹೆಚ್ಚಿನ ಜನರು ಅರ್ಜಿ ಸಲ್ಲಿಸಿದರೆ, ಲಾಟರಿ ಮೂಲಕ ಫಲಾನುಭವಿಗಳನ್ನು ಆಯ್ಕೆ ಮಾಡಬೇಕು. ಈ ಕುರಿತು ಹೋಬಳಿಯಲ್ಲಿ ವ್ಯಾಪಕ ಪ್ರಚಾರ ಕೈಗೊಳ್ಳಬೇಕು. ಪಾರದರ್ಶಕವಾಗಿ ಫಲಾನುಭವಿಗಳ ಆಯ್ಕೆ ಮಾಡಬೇಕು. ಯಾವುದೇ ವೈಯಕ್ತಿಕ ಹಿತಾಸಕ್ತಿ ಸಾಧನೆಗೆ ಅಧಿಕಾರಿಗಳು ಪ್ರಯತ್ನಿಸಬಾರದು ಎಂದರು.
ವಸತಿ ಯೋಜನೆ ಭೂಮಿ ಮಂಜೂರು: ರಾಂಪುರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ನಿವೇಶನ ರಹಿತರಿಗೆ, ನಿವೇಶನ ಹಂಚಿಕೆ ಮಾಡಲು ಸರ್ಕಾರ ಜಾಗವನ್ನು ಮಂಜೂರು ಮಾಡುವುದಾಗಿ ಜಿಲ್ಲಾಧಿಕಾರಿಗಳು ಆಶ್ವಾಸನೆ ನೀಡಿದರು. ಗ್ರಾಮದಲ್ಲಿ 13 ಎಕರೆ ಸರ್ಕಾರಿ ಜಮೀನು ಲಭ್ಯವಿದೆ. ಇದರಲ್ಲಿ ನಿವೇಶನ ಮಂಜೂರಾತಿ ಅಗತ್ಯ ಇರುವ ಭೂಮಿಯನ್ನು ಗುರುತಿಸಿ, ನಕಾಶೆ ಸಿದ್ದಪಡಿಸಿ ತಹಶೀಲ್ದಾರು ಶೀಘ್ರವೇ ವರದಿ ನೀಡಬೇಕು. 4 ಹೆಕ್ಟೇರ್ ವರೆಗಿನ ಭೂಮಿಯನ್ನು ನಿವೇಶನಕ್ಕಾಗಿ ಕಾಯ್ದಿರಿಸಲು ಹಾಗೂ ಹಂಚಿಕೆ ಮಾಡಲು ಜಿಲ್ಲಾಧಿಕಾರಿಗಳಿಗೆ ಸರ್ಕಾರ ಅಧಿಕಾರ ನೀಡಿದೆ. ಇದನ್ನು ಬಳಸಿ ಭೂಮಿಯನ್ನು ಮಂಜೂರು ಮಾಡುವುದಾಗಿ ಹೇಳಿದರು.
ಗ್ರಾಮ ವಾಸ್ತವ್ಯದಲ್ಲಿ ಭಾಗವಹಿಸಿ ಮಾತನಾಡಿದ ಜಿ.ಪಂ.ಸಿಇಓ ಎಂ.ಎಸ್.ದಿವಾಕರ್ ರಾಂಪುರ ಗ್ರಾಮ ಪಂಚಾಯತಿಯಲ್ಲಿ ಈಗಾಗಲೇ ರೂ.3.47 ಕೋಟಿಗಳ ಕೆಲಸವನ್ನು ಉದ್ಯೋಗ ಖಾತ್ರಿ ಯೋಜನೆಯಲ್ಲಿ ನಿರ್ವಹಿಸಲಾಗಿದೆ. ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸದಿರುವ ಜಾಬ್ ಕಾರ್ಡುಗಳನ್ನು ಕೂಡ ಚಾಲನೆಗೊಳಿಸಿ ಕೆಲಸ ನಿರ್ವಹಿಸಬೇಕು. ರೈತರ ಕೃಷಿ ಸಂಬಂಧಿ ಕೆಲಸಗಳು ಪೂರ್ಣಗೊಂಡಿದ್ದು, ಉದ್ಯೋಗ ಖಾತ್ರಿಗಾಗಿ ಅರ್ಜಿ ಸಲ್ಲಿಸುತ್ತಾರೆ. ಈಗಲೂ ಪಂಚಾಯತಿಯಿಂದ ನಿಯಮಾನುಸಾರ ಉದ್ಯೋಗ ಖಾತ್ರಿ ಯೋಜನೆಗಳನ್ನು ಕೈಗೊಂಡರೆ ಜಿಲ್ಲಾ ಪಂಚಾಯತಿಯಿಂದ ಅನುಮೋದನೆ ನೀಡಲಾಗುವುದು. 52 ವಸತಿ ರಹಿತರಿಗೆ ಮನೆ ನಿವೇಶನ ಮಂಜೂರು ಮಾಡಿ ಪ್ರಸ್ತಾವನೆ ಕಳುಹಿಸಿದರೆ. ರಾಜೀವ್ ಗಾಂಧಿ ವಸತಿ ನಿಗಮದಿಂದ ಮನೆಗಳನ್ನು ಮಂಜೂರು ಮಾಡಿಸಲು ಕ್ರಮ ವಹಿಸಲಾಗುವುದು ಎಂದರು.
ತಹಶೀಲ್ದಾರ್ ಸುರೇಶ್ ಮಾತನಾಡಿ, ಕೆರೆಕೊಂಡಾಪುರ ಗ್ರಾಮದಲ್ಲಿ ಸಾಮಾಜಿಕ ಭದ್ರತಾ ಯೋಜನೆಗಳಾದ ಸಂಧ್ಯಾಸುರಕ್ಷಾ, ವಿಧವಾ ಅಂಗವಿಕಲ, ಮನಸ್ವಿನಿ ಸೇರಿದಂತೆ ಒಟ್ಟು 224 ಜನ ಸರ್ಕಾರದ ವತಿಯಿಂದ ಪಿಂಚಣಿ ಸೌಲಭ್ಯ ಪಡೆಯುತ್ತಿದ್ದಾರೆ. ರಾಷ್ಟ್ರೀಯ ಕುಟುಂಬ ಯೋಜನೆಯಡಿ 8 ಫಲಾನುಭವಿಗಳಿಗೆ ರೂ.20 ಸಾವಿರ ರೂಪಾಯಿಗಳಂತೆ ವಿತರಣೆ ಮಾಡಲಾಗಿದೆ ಎಂದರು.
ಗ್ರಾಮ ಸರ್ವೆನಂ 65ರಲ್ಲಿ ಐದು ಎಕೆರೆ ರುದ್ರಭೂಮಿಗೆ ಕಾಯ್ದಿರಿಸಲಾಗಿದೆ. ಗ್ರಾಮದಲ್ಲಿ ಯಾವುದೇ ಪಹಣಿ ತಿದ್ದುಪಡಿ ಇರುವುದಿಲ್ಲ. ಇಲ್ಲಿರುವ ಎಲ್ಲಾ ಪಹಣಿಗಳು ಸರಿಯಾಗಿವೆ ಎಂದರು.
200ಕ್ಕೂ ಅಧಿಕ ಅರ್ಜಿ ಸ್ವೀಕಾರ: ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ನೇತೃತ್ವದಲ್ಲಿ ಜರುಗಿದ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಕೆರೆಕೊಂಡಾಪುರ ಗ್ರಾಮ ಸೇರಿದಂತೆ ರಾಂಪುರ ಗ್ರಾಮ ಪಂಚಾಯಿತಿ ವಿವಿಧ ಗ್ರಾಮಗಳ ಗ್ರಾಮಸ್ಥರಿಂದ ಸುಮಾರು 200ಕ್ಕೂ ಅಧಿಕ ಅರ್ಜಿಗಳು ಸ್ವೀಕಾರಗೊಂಡವು. ಖಾಲಿ ನಿವೇಶನ, ಸ್ವಯಂ ಉದ್ಯೋಗ, ಸಾಲ-ಸೌಲಭ್ಯ, ಬೆಳೆಹಾನಿ ಸೇರಿದಂತೆ ವಿವಿಧ ಸಮಸ್ಯೆಗಳ ಮನವಿ ಸಲ್ಲಿಸಲಾಯಿತು.
ಎತ್ತಿನ ಗಾಡಿಯಲ್ಲಿ ಮೆರವಣಿಗೆ: ಗ್ರಾಮ ವಾಸ್ತವ್ಯದ ಅಂಗವಾಗಿ ಕೆರೆಕೊಂಡಾಪುರ ಗ್ರಾಮದಲ್ಲಿ ಸಂಭ್ರಮ ಮನೆ ಮಾಡಿತ್ತು. ಪೂರ್ಣಕುಂಭ ಹೊತ್ತ ಮಹಿಳೆಯರು ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ಅವರನ್ನು ಪ್ರೀತಿಯಿಂದ ಸ್ವಾಗತಿಸಿ, ಸಿಂಗಾರಗೊಂಡ ಎತ್ತಿನ ಗಾಡಿಯಲ್ಲಿ ಮೆರವಣಿಗೆ ಮೂಲಕ ಗ್ರಾಮಕ್ಕೆ ಬರಮಾಡಿಕೊಂಡರು.
ವಸತಿ ಶಾಲೆಯಲ್ಲಿ ಡಿಸಿ ವಾಸ್ತವ್ಯ: ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ಗ್ರಾಮ ವಾಸ್ತವ್ಯದ ಅಂಗವಾಗಿ ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ಅವರು ಒಂದು ದಿನ ಮುಂಚಿತವಾಗಿಯೇ ಅಂದರೆ ಶುಕ್ರವಾರ ರಾತ್ರಿಯೇ ಕೆರೆಕೊಂಡಾಪುರಕ್ಕೆ ಆಗಮಿಸಿ, ಸ್ಥಳೀಯರಿಂದ ಸಮಸ್ಯೆಗಳ ಬಗ್ಗೆ ಮಾಹಿತಿ ಪಡೆದುಕೊಂಡರು, ಇದೇ ಗ್ರಾಮದ ಸಮೀಪದ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ವಾಸ್ತವ್ಯ ಮಾಡಿದರು. ಈ ವೇಳೆ ಇಂದಿರಾ ಗಾಂಧಿ ವಸತಿ ಶಾಲೆಯ ವಿದ್ಯಾರ್ಥಿಗಳೊಂದಿಗೆ, ವಸತಿ ಶಾಲೆಯ ಮೂಲ ಸೌಕರ್ಯಗಳ ಪರಿಶೀಲನೆ ನಡೆಸಿದರು. ನಂತರ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ, ವಿದ್ಯಾರ್ಥಿಗಳು ಉತ್ತಮ ವ್ಯಾಸಂಗ ಮಾಡಿ, ಉನ್ನತ ಸ್ಥಾನಕ್ಕೇರುವಂತೆ ಪ್ರೇರೇಪಿಸಿದರು, ಅಲ್ಲದೆ ವಿದ್ಯಾರ್ಥಿಗಳೊಟ್ಟಿಗೆ ಸಾಲಿನಲ್ಲಿ ನೆಲದಲ್ಲಿಯೇ ಕುಳಿತು ಊಟ ಮಾಡಿದರು. ವಿದ್ಯಾರ್ಥಿಗಳು ಕೂಡ ಜಿಲ್ಲಾಧಿಕಾರಿಗಳು ತಮ್ಮೊಟ್ಟಿಗೆ ಕುಳಿತು ನಡೆಸಿದ ಕುಶಲೋಪರಿ ಹಾಗೂ ಸಹಭೋಜನ ಕಂಡು ಪುಳಕಿತರಾದರು.
ಸೀಮಂತ, ಅನ್ನಪ್ರಾಶನ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಕೆರೆಕೊಂಡಾಪುರ ಗ್ರಾಮ ಗರ್ಭೀಣಿ ಮಹಿಳೆಯರಿಗೆ ಉಡಿ ತುಂಬುವ ಮೂಲಕ ಸೀಮಂತ ಕಾರ್ಯಕ್ರಮ ನಿರ್ವಹಿಸಿದರು. ಶಿಶುಗಳಿಗೆ ಅನ್ನಪ್ರಾಶನ ಮಾಡಿದರು.
ಇದೇ ಸಂದರ್ಭದಲ್ಲಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಗ್ರಾಮದ ಮೂರು ಮಂದಿ ವಿಕಲಚೇತನ ಫಲಾನುಭವಿಗಳಿಗೆ ವೀಲ್ ಚೇರ್ ಹಾಗೂ 6 ಮಂದಿ ವಿಕಲಚೇತನ ಫಲಾನುಭವಿಗಳಿಗೆ ಶ್ರವಣ ಸಾಧನ ವಿತರಿಸಲಾಯಿತು. ಕಂದಾಯ ಇಲಾಖೆ ವತಿಯಿಂದ ಸಾಮಾಜಿಕ ಭದ್ರತಾ ಯೋಜನೆಯ ಫಲಾನುಭವಿಗಳಿಗೆ ಮಂಜೂರಾತಿ ಆದೇಶ ಪತ್ರ ನೀಡಲಾಯಿತು.
ಕಾರ್ಯಕ್ರಮದಲ್ಲಿ ರಾಂಪುರ ಗ್ರಾಮ ಪಂಚಾಯಿತಿ ಅಧ್ಯಕ್ಷ ಪರಮೇಶ್ವರಪ್ಪ, ಸದಸ್ಯ ಲೋಕೇಶ್ ರೆಡ್ಡಿ, ಮಹಿಳಾ ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ಭಾರತಿ ಬಣಕಾರ್, ಜಂಟಿ ಕೃಷಿ ನಿರ್ದೇಶಕ ಪಿ.ರಮೇಶ್ ಕುಮಾರ್, ವಿಕಲಚೇತನ ಕಲ್ಯಾಣ ಅಧಿಕಾರಿ ವೈಶಾಲಿ, ಸೇರಿದಂತೆ ವಿವಿಧ ಇಲಾಖೆಗಳ ತಾಲ್ಲೂಕು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.