i
ಪರಿಶಿಷ್ಟ ಪಂಗಡದ ನವಶಕ್ತಿ ಸಮಾವೇಶಕ್ಕೆ 70 ಬಸ್ ವ್ಯವಸ್ಥೆ-ಶಾಸಕ ತಿಪ್ಪಾರೆಡ್ಡಿ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗ ವಿಧಾನ ಸಭಾ ಕ್ಷೇತ್ರದಿಂದ ಬಳ್ಳಾರಿಯಲ್ಲಿ ನಡೆಯುತ್ತಿರುವ ಪರಿಶಿಷ್ಟ ಪಂಗಡದ ನವಶಕ್ತಿ ಸಮಾವೇಶಕ್ಕೆ 60 ರಿಂದ 70 ಬಸ್ ಗಳನ್ನು ವ್ಯವಸ್ಥೆ ಮಾಡಲಾಗಿದೆ ಎಂದು ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ತಿಳಿಸಿದ್ದಾರೆ.
ನಗರದ ಬಿಜೆಪಿ ಕಚೇರಿಯಲ್ಲಿ ನವಶಕ್ತಿ ಸಮಾವೇಶದ ಬಸ್ ವ್ಯವಸ್ಥೆಯ ಸಭೆಯ ನಂತರ ಮಾತನಾಡಿ ಶಾಸಕರು, ಬಳ್ಳಾರಿ ನಗರದಲ್ಲಿ ಹಮ್ಮಿಕೊಂಡಿರುವ ಭಾರತೀಯ ಜನತಾ ಪಾರ್ಟಿಯ ಎಸ್ಟಿ ಮೋರ್ಚಾದ ನವಶಕ್ತಿ ಸಮಾವೇಶ ಟಿ.ಬಿ.ಸ್ಯಾನಿಟೇರಿಯಂ ಬಳಿಯ 130 ಎಕರೆ ಪ್ರದೇಶವನ್ನು ಬಳಕೆ ಮಾಡಿಕೊಳ್ಳಲಾಗಿದೆ. ನವೆಂಬರ್-20ರಂದು ಭಾನುವಾರ ನಡೆಯಲಿರುವ ಬೃಹತ್ ಸಮಾವೇಶಕ್ಕೆ ಚಿತ್ರದುರ್ಗದಿಂದಲೂ ಸಾಕಷ್ಟು ಸಂಖ್ಯೆಯಲ್ಲಿ ಪಾಲ್ಗೊಳ್ಳಲಿದ್ದಾರೆಂದು ಅವರು ತಿಳಿಸಿದ್ದಾರೆ.
ವೇದಿಕೆಯ ಒಳಾಂಗಣದಲ್ಲಿ 60ಕ್ಕೂ ಹೆಚ್ಚು ಹೊರಾಂಗಣದಲ್ಲಿ 32ಕ್ಕೂ ಹೆಚ್ಚು ಎಲ್.ಇ.ಡಿ ಪರದೆ ವ್ಯವಸ್ಥೆ ಮಾಡಲಾಗುತ್ತಿದೆ. ಇದರಿಂದ ರಾಜ್ಯದ ವಿವಿಧಡೆಯಿಂದ ಬರುವ ಲಕ್ಷಾಂತರ ಜನ ಕಾರ್ಯಕ್ರಮ ವೀಕ್ಷಿಸಲು ಅನುಕೂಲವಾಗಲಿದೆ. ವಾಲ್ಮೀಕಿ ಸಮಾಜಕ್ಕೆ ಬಿಜೆಪಿ ಸರ್ಕಾರ ಮೀಸಲಾತಿ ಹೆಚ್ಚಳ ಮಾಡಿರುವ ಹಿನ್ನಲೆಯಲ್ಲಿ ಬಳ್ಳಾರಿಯಲ್ಲಿ ಪರಿಶಿಷ್ಟ ಪಂಗಡದ ಬೃಹತ್ ಸಮಾವೇಶ ಬಿಜೆಪಿ ಪಕ್ಷದ ಎಸ್ಟಿ ಮೋರ್ಚಾದಿಂದ ಏರ್ಪಡಿಸಲಾಗಿದೆ ಎಂದರು.
70 ಬಸ್ ಗಳಲ್ಲದೆ ಇನ್ನು ಅಗತ್ಯ ಬಿದ್ದರೆ ಹೆಚ್ಚಿನ ಬಸ್ ವ್ಯವಸ್ಥೆ ಮಾಡಲಾಗುತ್ತದೆ. ಪರಿಶಿಷ್ಟ ಪಂಗಡದ ಸಮಾವೇಶಕ್ಕೆ ಆಗಮಿಸಿ ಯಶಸ್ವಿಗೊಳಿಸಬೇಕೆಂದು ತಿಪ್ಪಾರೆಡ್ಡಿ ಮನವಿ ಮಾಡಿದರು.