i
ರೈತರ ವಿರುದ್ಧ ಯಾವುದೇ ರೀತಿಯ ಕ್ರಿಮಿನಲ್ ಪ್ರಕರಣ ದಾಖಲಿಸುವಂತಿಲ್ಲ- ಸಚಿವ ಅಶೋಕ್…
ಚಂದ್ರವಳ್ಳಿ ನ್ಯೂಸ್. ಮೈಸೂರು:
ಯಾವುದೇ ರೈತರು ಸರ್ಕಾರಿ ಜಮೀನಿನಲ್ಲಿ ಉಳುಮೆ ಮಾಡುತ್ತಿದ್ದರೆ ಅವರ ವಿರುದ್ಧ ಯಾವುದೇ ರೀತಿಯ ಕ್ರಿಮಿನಲ್ ಪ್ರಕರಣ ದಾಖಲಿಸುವಂತಿಲ್ಲ ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ.
ಮೈಸೂರು ಜಿಲ್ಲೆಯ ಹೆಚ್.ಡಿ. ಕೋಟೆ ತಾಲೂಕಿನ ಭೀಮನಕೊಲ್ಲಿಯಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, ರೈತರು ಸರ್ಕಾರಿ ಜಮೀನುಗಳಲ್ಲಿ ಉಳುಮೆ ಮಾಡುದ್ದರೆ ಕಾನೂನಿನಡಿ ಭೂಕಬಳಿಕೆದಾರರು ಎಂದು ಕ್ರಿಮಿನಲ್ ಪ್ರಕರಣ ದಾಖಲಿಸಲಾಗುತ್ತಿತ್ತು ಇದರಿಂದ ರೈತರು ಕೋರ್ಟ್ ಗೆ ಅಲೆಯುವಂತಾಗಿತ್ತು. ರೈತರ ಅನುಕೂಲಕ್ಕಾಗಿ ಕೋರ್ಟ್ ಗೆ ಅಲೆಯುವುದನ್ನು ತಪ್ಪಿಸಲು ಕಾಯ್ದೆಗಳನ್ನು ಸಡಿಲ ಮಾಡಲಾಗಿದ್ದು ರೈತರ ಮೇಲೆ ಭೂ ಒತ್ತುವರಿ ಕೇಸ್ ಹಾಕುವುದಿಲ್ಲ. ಡೀಮ್ಡ್ ಅರಣ್ಯದ ನಿಯಮವನ್ನು ಸಡಿಲಿಕೆ ಮಾಡಲಾಗಿದೆ. ನಗರ ಪ್ರದೇಶ ಹೊರತುಪಡಿಸಿ ಉಳಿದೆಡೆ ರೈತರ ಮೇಲೆ ಯಾವುದೇ ಭೂ ಒತ್ತುವರಿ ಪ್ರಕರಣ ದಾಖಲಿಸಿದಂತೆ ಸಂಬಂಧಿಸಿದವರಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು ಸಚಿವರು ತಿಳಿಸಿದರು.
ಈಗಾಗಲೇ ಭೂ ಪರಿವರ್ತನೆ ಕಾಯ್ದೆ ನಿಯಮ ಸಡಿಲಿಕೆ ಮಾಡಲಾಗಿದೆ. ಭೂ ಪರಿವರ್ತನೆ ಮಾಡಿಸಿಕೊಳ್ಳಲು ನೋಂದಣಿಯಾದ 7 ದಿನದೊಳಗೆ ಪ್ರಕ್ರಿಯೆ ಪೂರ್ಣಗೊಳಿಸಲು ಆದೇಶಿಸಲಾಗಿದೆ. ನಿಯಮ ಸರಳೀಕರಣ ಮಾಡಿ 7 ದಿನಗಳಲ್ಲಿ ಭೂ ಪರಿವರ್ತನೆ ಮಾಡಿಕೊಡಲಾಗುವುದು. ಸರ್ಕಾರಿ ಜಮೀನುಗಳಲ್ಲಿ ಮನೆ ನಿರ್ಮಿಸುವವರಿಗೆ ಜಾಗದ ಮಾಲೀಕತ್ವ 94 ಸಿ ಅಡಿ ನೀಡಲಾಗುವುದು ಎಂದು ಸಚಿವ ಅಶೋಕ್ ತಿಳಿಸಿದರು.