i
ಡಯಾಲಿಸಿಸ್, ಕ್ಯಾನ್ಸರ್ ರೋಗಗಳ ಚಿಕಿತ್ಸೆಗೆ ದಾನಿಗಳ ನೆರವು ಪಡೆಯಿರಿ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಡಯಾಲಿಸಿಸ್ ಹಾಗೂ ಕ್ಯಾನ್ಸರ್ ರೋಗಗಳಿಗೆ ಚಿಕಿತ್ಸೆ ನೀಡಲು ಉಪಕರಣಗಳು ಅಗತ್ಯವಿದೆ. ಸರ್ಕಾರದ ಅನುದಾದನ ಜೊತೆಗೆ ದಾನಿಗಳ ನೆರವು ಪಡೆದು ಡಯಾಲಿಸಿಸ್ ಉಪಕರಣಗಳನ್ನು ಖರೀದಿ ಮಾಡಬೇಕು ಎಂದು ಆರ್ಥಿಕ ಇಲಾಖೆ (ವೆಚ್ಚ) ಸರ್ಕಾರದ ಕಾರ್ಯದರ್ಶಿ ಮತ್ತು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಹಾಗೂ ಜಿಲ್ಲಾ ಪಂಚಾಯಿತಿ ಆಡಳಿತಾಧಿಕಾರಿ ಡಾ.ಪಿ.ಸಿ.ಜಾಫರ್ ಸೂಚನೆ ನೀಡಿದರು.
ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಜಿಲ್ಲಾ ಪಂಚಾಯತ್ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಒಬ್ಬ ಡಯಾಲಿಸಿಸ್ ರೋಗಿಯು ವಾರಕ್ಕೆ ಮೂರು ಬಾರಿ ಡಯಾಲಿಸಿಸ್ಗೆ ಒಳಗಾಗಬೇಕು. ಇದರಿಂದ ಬಡವರಿಗೆ ಸಾಕಷ್ಟು ಅನುಕೂಲವಾಗಲಿದೆ ಎಂದರು.
ಜಿಲ್ಲಾ ಆರೋಗ್ಯಾಧಿಕಾರಿ ಡಾ.ರಂಗನಾಥ್ ಮಾತನಾಡಿ, ಪದೇ ಪದೇ ಉಪಕರಣಗಳು ಕೆಟ್ಟು ಹೋಗುತ್ತಿರುವುದರಿಂದ ಸಮಸ್ಯೆಯಾಗುತ್ತಿದೆ. ಜಿಲ್ಲಾ ಪಂಚಾಯಿತಿ ಅನುದಾನದಡಿ ಡಯಾಲಿಸಿಸ್ ಉಪಕರಣ ಖರೀದಿಗೆ ಪ್ರಸ್ತಾವ ಸಲ್ಲಿಸಲಾಗಿದೆ ಎಂದು ಹೇಳಿದರು.
ರಾಷ್ಟ್ರೀಯ ಮಟ್ಟದ ಸ್ಪರ್ಧಾತ್ಮಕ ಪರೀಕ್ಷೆಗೆ ಸಜ್ಜುಗೊಳಿಸಿ:
ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಅಡಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಸತಿ ಶಾಲೆಯ ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇ.100ರಷ್ಟು ಫಲಿತಾಂಶ ಪಡೆದರೆ ಸಾಕಾಗುವುದಿಲ್ಲ. ಇದರ ಜೊತೆಗೆ ವಸತಿ ಶಾಲೆಯ ವಿದ್ಯಾರ್ಥಿಗಳನ್ನು 6ನೇ ತರಗತಿಯಿಂದಲೇ ಸೂಕ್ತ ತರಬೇತಿ, ಮಾರ್ಗದರ್ಶನ ನೀಡುವುದರ ಮೂಲಕ ಐಎಟಿ, ಜೆಇಇ, ನೀಟ್ ಸೇರಿದಂತೆ ರಾಷ್ಟ್ರೀಯ ಮಟ್ಟದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಜ್ಜುಗೊಳಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಮಮತಾ ಅವರಿಗೆ ಸೂಚನೆ ನೀಡಿದರು.
ವಸತಿ ಶಾಲೆಯ ವಿದ್ಯಾರ್ಥಿಗಳು ಎನ್ಎಂಎಂಸ್ ಹಾಗೂ ಎನ್ಟಿಎಸ್ ಪರೀಕ್ಷೆಗಳಲ್ಲಿ ಉತ್ತೀರ್ಣಗೊಳ್ಳಲು ವಿಶೇಷ ಗಮನ ಹರಿಸಬೇಕು. ಈ ನಿಟ್ಟಿನಲ್ಲಿ ಸೂಕ್ತ ಯೋಜನೆ ರೂಪಿಸಬೇಕು ಎಂದು ತಾಕೀತು ಮಾಡಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಂ.ಎಸ್.ದಿವಾಕರ್, ಜಿ.ಪಂ. ಉಪಕಾರ್ಯದರ್ಶಿ ಡಾ. ರಂಗಸ್ವಾಮಿ, ಅಪರ ಜಿಲ್ಲಾಧಿಕಾರಿ ಇ. ಬಾಲಕೃಷ್ಣ, ಉಪವಿಭಾಗಾಧಿಕಾರಿ ಚಂದ್ರಯ್ಯ ಸೇರಿದಂತೆ ವಿವಿಧ ಇಲಾಖೆಯ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಇದ್ದರು.