i
ಕೊರೊನಾ ಎಫೆಕ್ಟ್, ಶಾಲಾ ಮಕ್ಕಳ ಕಲಿಕಾಂಶ ಕೊರತೆ ನಿವಾರಣೆಗೆ ಕ್ರಮ ವಹಿಸಿ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಕೋವಿಡ್ ಕಾರಣದಿಂದಾಗಿ ಕಳೆದ ಎರಡು ವರ್ಷಗಳಿಂದ ಮಕ್ಕಳು ಸರಿಯಾಗಿ ಶಾಲೆಗೆ ಹೋಗಿಲ್ಲದಿರುವುದರಿಂದ ಸಮರ್ಪಕವಾಗಿ ಕಲಿಕೆಯಾಗಿಲ್ಲ. ಹಾಗಾಗಿ ಪಠ್ಯಕ್ರಮ ಪೂರ್ಣಗೊಳಿಸುವುದಕ್ಕಿಂತ ಮುಖ್ಯವಾಗಿ ವಿದ್ಯಾರ್ಥಿಗಳಿಗೆ ಕಲಿಕಾಂಶಗಳ ಕೊರತೆ ನಿವಾರಣೆಗೆ ಹೆಚ್ಚಿನ ಗಮನ ಹರಿಸಬೇಕು ಎಂದು ಆರ್ಥಿಕ ಇಲಾಖೆ (ವೆಚ್ಚ) ಸರ್ಕಾರದ ಕಾರ್ಯದರ್ಶಿ ಮತ್ತು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಹಾಗೂ ಜಿಲ್ಲಾ ಪಂಚಾಯಿತಿ ಆಡಳಿತಾಧಿಕಾರಿ ಡಾ.ಪಿ.ಸಿ.ಜಾಫರ್ ಸೂಚನೆ ನೀಡಿದರು.
ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಜಿಲ್ಲಾ ಪಂಚಾಯತ್ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕಳೆದ ಎರಡು ವರ್ಷಗಳಿಂದ ಮಕ್ಕಳು ಶಾಲೆಯಿಂದ ಹೊರಗುಳಿದ್ದು, ಈ ವರ್ಷ ಭೌತಿಕ ತರಗತಿಗಳು ಆರಂಭವಾಗಿದೆ. ಹಾಗಾಗಿ ಕಳೆದ ಎರಡು ವರ್ಷಗಳ ಕಲಿಕೆಯ ಅಂಶಗಳನ್ನು ಕಲಿಸುವ ಬಗ್ಗೆ ಕ್ರಮ ವಹಿಸಬೇಕು. ಶೈಕ್ಷಣಿಕ ವರ್ಷದ ಸಿಲಬಸ್ ಪೂರ್ಣಗೊಳಿಸುವುದಕ್ಕೆ ಆದ್ಯತೆ ನೀಡುವ ಬದಲು, ಕಳೆದೆರಡು ವರ್ಷಗಳಲ್ಲಿನ ಕಲಿಕಾಂಶದ ಕೊರತೆ ನೀಗಿಸಲು ಗಮನ ಕೊಡಬೇಕು. ಈ ನಿಟ್ಟಿನಲ್ಲಿ ಶಿಕ್ಷಣ ಇಲಾಖೆಯ ಅಧಿಕಾರಿಗಳು ಶಾಲೆಗಳಿಗೆ ಖುದ್ದಾಗಿ ಭೇಟಿ ನೀಡಿ, ಪರಿಹಾರ ಬೋಧನೆ ಕುರಿತು ಪರಿಶೀಲನೆ ನಡೆಸಬೇಕು ಎಂದು ಹೇಳಿದರು. ಇದಕ್ಕೆ ಪ್ರತಿಕ್ರಿಯಿಸಿದ ಡಿಡಿಪಿಐ ಕೆ.ರವಿಶಂಕರ್ ರೆಡ್ಡಿ, ಕಲಿಕಾ ಚೇತರಿಕೆಯ ಉಪಕ್ರಮಗಳನ್ನು ಪ್ರತಿ ಮಾಹೆವಾರು ಪರಾಮರ್ಶೆ ಮಾಡಲಾಗುತ್ತಿದೆ. ಕಲಿಕಾ ಚೇತರಿಕೆಯ ಜೊತೆಗೆ ಪಠ್ಯಕ್ರಮ ಬೋಧನೆಯು ಮಾಡಲಾಗುತ್ತಿದೆ ಎಂದರು. ಆದರ್ಶ ವಿದ್ಯಾಲಯಗಳಲ್ಲಿ ಉತ್ತಮ ಗುಣಮಟ್ಟದ ಕಟ್ಟಡ, ಪ್ರಯೋಗದ ಸೌಲಭ್ಯ ಸೇರಿದಂತೆ ಎಲ್ಲ ಮೂಲಸೌಕರ್ಯಗಳು ಲಭ್ಯವಿವೆ ಹಾಗಾಗಿ ಜಿಲ್ಲೆಯಲ್ಲಿ ಮೂಲಭೂತ ಸೌಲಭ್ಯ ಇಲ್ಲದೇ ಇರುವ ಸರ್ಕಾರಿ ಪದವಿಪೂರ್ವ ಕಾಲೇಜುಗಳ ಪಟ್ಟಿ ತಯಾರಿಸಿ, ಇಂತಹ ಕಾಲೇಜುಗಳನ್ನು ಆದರ್ಶ ವಿದ್ಯಾಲಯಕ್ಕೆ ಶಿಫ್ಟ್ ಮಾಡಲು ಡಿಡಿಪಿಯು ಹಾಗೂ ಡಿಡಿಪಿಐ ಕ್ರಮವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಹೇಳಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಂ.ಎಸ್.ದಿವಾಕರ್, ಜಿ.ಪಂ. ಉಪಕಾರ್ಯದರ್ಶಿ ಡಾ. ರಂಗಸ್ವಾಮಿ, ಅಪರ ಜಿಲ್ಲಾಧಿಕಾರಿ ಇ. ಬಾಲಕೃಷ್ಣ, ಉಪವಿಭಾಗಾಧಿಕಾರಿ ಚಂದ್ರಯ್ಯ ಸೇರಿದಂತೆ ವಿವಿಧ ಇಲಾಖೆಯ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಇದ್ದರು.