i
ಮಕ್ಕಳ ಗ್ರಾಮ ಸಭೆಯಲ್ಲಿ ಅಹವಾಲು ಸಲ್ಲಿಸಿದ ವಿದ್ಯಾರ್ಥಿಗಳು…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗ ತಾಲ್ಲೂಕಿನ ಗೋನೂರು ಗ್ರಾಮ ಪಂಚಾಯಿತಿ ವತಿಯಿಂದ ಬಚ್ಚಬೋರನಹಟ್ಟಿ ಗ್ರಾಮದ ಶ್ರಿ ಹೋ.ಚಿ.ಬೋರಯ್ಯ ಸ್ಮಾರಕ ಪ್ರೌಢಶಾಲೆಯ ಆವರಣದಲ್ಲಿ ಬುಧವಾರ ನಡೆದ ಮಕ್ಕಳ ಗ್ರಾಮ ಸಭೆಯಲ್ಲಿ ಗೋನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಶಾಲೆಗಳ 300ಕ್ಕೂ ಅಧಿಕ ವಿದ್ಯಾರ್ಥಿಗಳು ಭಾಗವಹಿಸಿ ಅಹವಾಲುಗಳನ್ನು ಸಲ್ಲಿಸಿದರು.
“ ಶಾಲೆಗೆ ಶೌಚಾಲಯ, ಕಟ್ಟಡ ದುರಸ್ತಿ, ವಿದ್ಯುತ್ ವ್ಯವಸ್ಥೆ ಕಲ್ಪಿಸುವುದು” ಸೇರಿದಂತೆ ಇನ್ನೂ ಹಲವಾರು ಅಹವಾಲುಗಳನ್ನು ಗೋನೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಅಧಿಕಾರಿಗಳು, ಜನಪ್ರತಿನಿಧಿಗಳ ಎದುರಿಗೆ ತಮ್ಮ ಸಮಸ್ಯೆಗಳನ್ನು ತೆರೆದಿಟ್ಟರು. ಇದಕ್ಕೆ ಪ್ರತಿಕ್ರಿಯಿಸಿದ ಗೋನೂರು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹೆಚ್.ಯರ್ರಿಸ್ವಾಮಿ, ಗೋನೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರೂ.2 ಲಕ್ಷ ವೆಚ್ಚದಲ್ಲಿ ಶೌಚಾಲಯ ನಿರ್ಮಾಣ, ರೂ.3.50 ಲಕ್ಷ ವೆಚ್ಚದಲ್ಲಿ ಅಡುಗೆ ಕೋಣೆ, 2.50 ಲಕ್ಷ ವೆಚ್ಚದಲ್ಲಿ ಹೈಮಾಸ್ಟ್ ದೀಪ ಅಳವಡಿಕೆಗೆ ಈಗಾಗಲೇ ಕ್ರಿಯಾ ಯೋಜನೆ ತಯಾರಿಸಿ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ತಿಳಿಸಿದ ಅವರು, ಪರಿಶಿಷ್ಟ ಪಂಗಡದ ಜನರು ಹೆಚ್ಚಿನ ಸಂಖ್ಯೆಯಲ್ಲಿರುವ ಗೋನೂರು ಹಾಗೂ ಕಲ್ಲೇನಹಳ್ಳಿ ಗ್ರಾಮಗಳಲ್ಲಿ ಮೂಲಭೂತ ಸೌಕರ್ಯ ಒದಗಿಸುವ ನಿಟ್ಟಿನಲ್ಲಿ ಪ್ರಧಾನ ಮಂತ್ರಿ ಆದಿ ಆದರ್ಶ ಗ್ರಾಮ ಯೋಜನೆಯಡಿಯಲ್ಲಿ ರೂ.20.38 ಲಕ್ಷದ ಕ್ರಿಯಾ ಯೋಜನೆ ತಯಾರಿಸಲಾಗಿದೆ ಎಂದು ತಿಳಿಸಿದರು.
ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ತಲುಪಿಸುವಲ್ಲಿ ಶಿಕ್ಷಕರು, ಸಮಾಜ, ಸಾರ್ವಜನಿಕರು, ಗ್ರಾಮ ಪಂಚಾಯಿತಿ ಸೇರಿದಂತೆ ಪ್ರತಿಯೊಬ್ಬರ ಸಹಕಾರ ಅಗತ್ಯವಾಗಿದೆ. ಮಕ್ಕಳ ಹಕ್ಕುಗಳ ರಕ್ಷಣೆಗೆ ಸಂಬಂಧಪಟ್ಟಂತೆ ಪ್ರತಿ ಮಗುವಿಗೂ ಗುರುತಿನ ಚೀಟಿ ವಿತರಿಸಬೇಕು. ಶಿಕ್ಷಕರು ಗುರುತಿನ ಚೀಟಿ ಧರಿಸಬೇಕು. ಶಾಲಾ ಕರ್ತವ್ಯಕ್ಕೆ ನಿಗದಿತ ಸಮಯಕ್ಕಿಂತ 15 ನಿಮಿಷಗಳ ಮುಂಚಿತವಾಗಿ ಹಾಜರಿರಬೇಕು. ಶಾಲಾ ಕೊಠಡಿಗಳನ್ನು ಬೀಗ ಹಾಕುವಾಗ ಕೊಠಡಿಯಲ್ಲಿ ಮಕ್ಕಳು ಇಲ್ಲದೇ ಇರುವುದನ್ನು ಖಾತ್ರಿ ಪಡಿಸಿಕೊಂಡು ಶಾಲಾ ಕೊಠಡಿಗಳಿಗೆ ಬೀಗಹಾಕಬೇಕು. ಶಾಲೆಯ ಶೌಚಾಲಯಗಳನ್ನು ಸಮರ್ಪಕವಾಗಿ ಬಳಕೆ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಚಿತ್ರಡಾನ್ ಬಾಸ್ಕೋ ಸಂಸ್ಥೆಯ ಮಂಜುನಾಥ್ ಅವರು, ಮಕ್ಕಳ ಹಕ್ಕುಗಳ ರಕ್ಷಣೆಯಲ್ಲಿ ಗ್ರಾಮ ಪಂಚಾಯಿತಿಯ ಪಾತ್ರದ ಕುರಿತು ವಿವರಿಸಿದರು.
ಆರೋಗ್ಯ ನಿರೀಕ್ಷಕ ಮಹೇಶ್ ಅವರು, ಉತ್ತಮ ಆರೋಗ್ಯ ಕಾಪಾಡಿಕೊಳ್ಳುವ ವಿಧಾನ, ಮಾರಕ ರೋಗಗಳ ವಿರುದ್ಧ ನೀಡುವ ಎಲ್ಲಾ ಲಸಿಕೆಗಳ ಬಗ್ಗೆ ತಿಳಿಸಿಕೊಟ್ಟರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೇಲ್ವಿಚಾರಕಿ ವಿನೋದಮ್ಮ, ಬಾಲ್ಯವಿವಾಹ ನಿಷೇಧ ಕುರಿತು ಹಾಗೂ ಪೂರಕ ಪೌಷ್ಠಿಕ ಆಹಾರದ ಕುರಿತು ಮಾಹಿತಿ ನೀಡಿದರು. ಆರೋಗ್ಯ ಇಲಾಖೆಯ ಅಧಿಕಾರಿ ಹನುಮಂತಪ್ಪ ಮಕ್ಕಳ ಆರೋಗ್ಯದ ಬಗ್ಗೆ ವಿವರಿಸಿದರು.
ಕಾರ್ಯಕ್ರಮದಲ್ಲಿ ಗೋನೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗೀತಾ, ಸದಸ್ಯರಾದ ರಾಘವೇಂದ್ರ, ಗಂಗಮ್ಮ ಪಾಪಣ್ಣ, ಅನಿತಾ ಬಸವರಾಜ್, ಕೃಷ್ಣಮೂರ್ತಿ, ಸಾವಿತ್ರಮ್ಮ, ಎಸ್ಡಿಎಂಸಿ ಅಧ್ಯಕ್ಷೆ ನಿರ್ಮಲಾ, ಉಪಾಧ್ಯಕ್ಷೆ ಗಾಯತ್ರಿ, ಶಿಕ್ಷಣ ಇಲಾಖೆಯ ಸಿಆರ್ಪಿ ಕಿಶೋರ್ ಸೇರಿದಂತೆ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಇದ್ದರು.