i
ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ತನ್ನಿ-ಮಯೂರ್ ಜೈಕುಮಾರ್…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದ್ದಾಗ ಜನತೆಗೆ ನೀಡಿದ ಮಹಾತ್ವಾಕಾಂಕ್ಷಿ ಯೋಜನೆ ಹಾಗೂ ಬಿಜೆಪಿ.ಯ ಭ್ರಷ್ಟಾಚಾರವನ್ನು ಪ್ರತಿ ಮನೆ ಮನೆಗೆ ಮುಟ್ಟಿಸಿ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರುವಂತೆ ಎ.ಐ.ಸಿ.ಸಿ.ಕಾರ್ಯದರ್ಶಿ ಮಯೂರ್ ಜೈಕುಮಾರ್ ಕಾರ್ಯಕರ್ತರಿಗೆ ಸೂಚಿಸಿದರು.
ರಾಷ್ಟ್ರೀಯ ಹೆದ್ದಾರಿ ನಾಲ್ಕರ ಹೊರವಲಯದಲ್ಲಿರುವ ಓಜಾಸ್ ಹೋಟೆಲ್ನಲ್ಲಿ ಚಿತ್ರದುರ್ಗ ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ನಡೆದ ಬ್ಲಾಕ್ ಮತ್ತು ಪಂಚಾಯಿತಿ ಪದಾಧಿಕಾರಿಗಳ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.
ಕೇಂದ್ರದಲ್ಲಿ ಬಿಜೆಪಿ.ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಭ್ರಷ್ಟಾಚಾರ ತಾಂಡವವಾಡುತ್ತಿದ್ದು, ನಲವತ್ತು ಪರ್ಸೆಂಟ್ ಕಮೀಷನ್, ಅಗತ್ಯ ವಸ್ತುಗಳ ಬೆಲೆ ಏರಿಕೆ, ನಿರುದ್ಯೋಗ ಸಮಸ್ಯೆ ಇವುಗಳೆ ಕೋಮುವಾದಿ ಸಾಧನೆ. ೨೦೨೩ ರಲ್ಲಿ ನಡೆಯುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಅಧಿಕಾರಕ್ಕೆ ಬರುವುದಿಲ್ಲ ಎನ್ನುವುದು ಗೊತ್ತಾಗಿ ಹಿಂಬಾಗಿಲಿನಿಂದ ವಿಧಾನಸಭೆ ಪ್ರವೇಶಿಸಲು ಕುತಂತ್ರ ನಡೆಸುತ್ತಿದೆ. ಈ ನಿಟ್ಟಿನಲ್ಲಿ ಬ್ಲಾಕ್ ಮತ್ತು ಪಂಚಾಯಿತಿ ಮಟ್ಟದಲ್ಲಿ ಪಕ್ಷವನ್ನು ಬಲಪಡಿಸುವ ಜವಾಬ್ದಾರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಮತ್ತು ಪದಾದಿಕಾರಿಗಳ ಮೇಲಿದೆ. ಪಕ್ಷದಲ್ಲಿ ಹುದ್ದೆಗಳನ್ನು ಪಡೆಯುವುದು ಮುಖ್ಯವಲ್ಲ. ಹೊಣೆಗಾರಿಕೆ ಅರಿತು ಕೆಲಸ ಮಾಡಬೇಕು ಎಂದು ಕಾರ್ಯಕರ್ತರು ಹಾಗೂ ಮುಖಂಡರುಗಳಿಗೆ ಕಿವಿಮಾತು ಹೇಳಿದರು.
ಬ್ಲಾಕ್ ಕಮಿಟಿ ಮತ್ತು ಪಂಚಾಯಿತಿ ಮಟ್ಟದಲ್ಲಿ ಸಮಿತಿ ರಚಿಸಿ ಪದಾಧಿಕಾರಿಗಳಿಗೆ ಆದೇಶ ಪತ್ರಗಳನ್ನು ವಿತರಿಸಬೇಕು. ಇಲ್ಲದಿದ್ದರೆ ನೋಟಿಸ್ ನೀಡುವುದಾಗಿ ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರನ್ನು ಎಚ್ಚರಿಸಿದ ಮಯೂರ್ ಜೈಕುಮಾರ್ ಕಮಿಟಿಗಳು ಬಲವಾಗಿದ್ದರೆ ಮುಂದೆ ಎದುರಾಗುವ ಎಲ್ಲಾ ಚುನಾವಣೆಗಳಲ್ಲಿಯೂ ಪಕ್ಷಕ್ಕೆ ಗೆಲುವು ಸುಲಭವಾಗಲಿದೆ. ಬಿಜೆಪಿ.ಯವರು ಮತದಾರರ ಪಟ್ಟಿಯಲ್ಲಿ ಕಾಂಗ್ರೆಸ್ನವರ ಹೆಸರುಗಳನ್ನು ಡಿಲಿಟ್ ಮಾಡಿಸಿ ಪಕ್ಷಕ್ಕೆ ಅನುಕೂಲವಾಗಲೆಂದು ತಮ್ಮ ಕಡೆಯವರ ಹೆಸರುಗಳನ್ನು ಸೇರ್ಪಡೆಗೊಳಿಸುವ ತಂತ್ರಗಾರಿಕೆ ನಡೆಸುತ್ತಿರುವುದರ ವಿರುದ್ದ ನಮ್ಮ ಕಾರ್ಯಕರ್ತರು ಎಚ್ಚರಿಕೆಯಿಂದಿದ್ದು, ಮತಪಟ್ಟಿಗಳನ್ನು ಪರಿಶೀಲಿಸಿ ಹೆಸರುಗಳು ಇದೆಯೋ ಇಲ್ಲವೋ ಎನ್ನುವುದನ್ನು ಖಾತ್ರಿ ಪಡಿಸಿಕೊಳ್ಳಬೇಕು ಎಂದು ತಿಳಿಸಿದರು.
ಚುನಾವಣೆಯಲ್ಲಿ ಸೋಲು-ಗೆಲುವು ಸಹಜ. ರಾಹುಲ್ಗಾಂಧಿರವರ ಭಾರತ್ ಜೋಡೋ ಐಕ್ಯತಾ ಯಾತ್ರೆಗೆ ದೇಶದೆಲ್ಲೆಡೆ ಲಕ್ಷಾಂತರ ಜನ ಬೆಂಬಲಿಸಿರುವುದು ಬಿಜೆಪಿ.ಗೆ ನಡುಕ ಉಂಟಾಗಿದೆ. ವಿಶೇಷವಾಗಿ ಚಿತ್ರದುರ್ಗ ಜಿಲ್ಲೆಗೆ ಪಾದಯಾತ್ರೆ ಆಗಮಿಸಿದಾಗ ಅಪಾರ ಸಂಖ್ಯೆಯ ಕಾರ್ಯಕರ್ತರು ಹಾಗೂ ಜನಸಾಮಾನ್ಯರು ಪಾಲ್ಗೊಂಡು ಶಕ್ತಿ ಪ್ರದರ್ಶಿಸಿರುವುದು ನನಗೆ ಅತ್ಯಂತ ಖುಷಿ ಕೊಟ್ಟಿದೆ. ಮುಂದಿನ ವಿಧಾನಸಭೆ ಹಾಗೂ ೨೦೨೪ ರಲ್ಲಿ ನಡೆಯುವ ಲೋಕಸಭೆ ಚುನಾವಣೆಯಲ್ಲಿ ಕೋಮುವಾದಿ ಬಿಜೆಪಿ.ಯನ್ನು ತೊಲಗಿಸಿ ಬಡವರ ಪರವಾಗಿರುವ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತನ್ನಿ ಎಂದು ಕಾರ್ಯಕರ್ತರಲ್ಲಿ ಮನವಿ ಮಾಡಿದರು.
ಕೆ.ಪಿ.ಸಿ.ಸಿ.ಉಪಾಧ್ಯಕ್ಷ ಮಾಜಿ ಸಚಿವ ಹೆಚ್.ಆಂಜನೇಯ, ಮಾಜಿ ಸಂಸದ ಬಿ.ಎನ್.ಚಂದ್ರಪ್ಪ, ಹನುಮಲಿ ಷಣ್ಮುಖಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್ಪೀರ್, ಕಾರ್ಯಾಧ್ಯಕ್ಷ ಹಾಲಸ್ವಾಮಿ, ಚಿತ್ರದುರ್ಗ ನಗರಾಭಿವೃದ್ದಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಆರ್.ಕೆ.ಸರ್ದಾರ್, ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷ ಜಿ.ಎಸ್.ಮಂಜುನಾಥ್, ಮಾಜಿ ಶಾಸಕ ಎ.ವಿ.ಉಮಾಪತಿ, ಮುರಳಿಧರ ಹಾಲಪ್ಪ, ಡಾಕ್ಟರ್ ವಿಭಾಗದ ರಾಘವೇಂದ್ರ, ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಶ್ರೀಮತಿ ಗೀತ ನಂದಿನಿಗೌಡ, ಜೆ.ಜೆ.ಹಟ್ಟಿಯ ಡಾ.ಬಿ.ತಿಪ್ಪೇಸ್ವಾಮಿ, ಲಿಡ್ಕರ್ ಮಾಜಿ ಚೇರ್ಮನ್ ಓ.ಶಂಕರ್, ವೇದಿಕೆಯಲ್ಲಿದ್ದರು.
ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ಕೆ.ಪಿ.ಸಂಪತ್ಕುಮಾರ್, ಡಿ.ಎನ್.ಮೈಲಾರಪ್ಪ, ಬಿ.ಟಿ.ಜಗದೀಶ್, ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಆರ್.ಪ್ರಕಾಶ್, ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮುನಿರಾ ಎ.ಮಕಾಂದಾರ್, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷೆ ನಜ್ಮತಾಜ್, ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷ ಎನ್.ಡಿ.ಕುಮಾರ್, ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷ ಜಯಣ್ಣ, ನ್ಯಾಯವಾದಿಗಳಾದ ಸುದರ್ಶನ್, ಬಾಲಕೃಷ್ಣಸ್ವಾಮಿ, ಮರುಳಾರಾಧ್ಯ, ಮಮತ ನೇರ್ಲಗಿ, ವಿವಿಧ ಮುಂಚೂಣಿ ಘಟಕಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.