i
ಒಳ ಮೀಸಲಾತಿ ವಿರೋಧಿ ನಾನಲ್ಲ, ಅನ್ಯಾಯ ಆಗಿದ್ದರೆ ನ್ಯಾಯ ಸಿಗಲಿ-ಪರಮೇಶ್ವರ್ ನಾಯ್ಕ್…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಒಳ ಮೀಸಲಾತಿ ವಿರೋಧಿ ನಾನಲ್ಲ, ಅನ್ಯಾಯ ಆಗಿದ್ದರೆ ನ್ಯಾಯ ಸಿಗಲಿ ಎಂದು ಪ್ರಚಾರ ಸಮಿತಿ ಅಧ್ಯಕ್ಷ ಹಾಗೂ ಸಮಾವೇಶದ ಉಸ್ತುವಾರಿ ಮಾಜಿ ಸಚಿವ ಪಿ.ಟಿ.ಪರಮೇಶ್ವರ್ ನಾಯ್ಕ ಮಾಧ್ಯಮದವರು ಕೇಳಿದ ಪ್ರಶ್ನಿಗೆ ಉತ್ತರಿಸಿದರು.
ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಗುರುವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಈಗಾಗಲೇ ಸಿದ್ದರಾಮಯ್ಯನವರು ಟ್ವೀಟ್ ಮಾಡಿ ತಮ್ಮ ವೈಯಕ್ತಿಕ ಅಭಿಪ್ರಾಯ ವ್ಯಕ್ತ ಪಡಿಸಿದ್ದಾರೆ. ಈ ಕುರಿತು ಕಾಂಗ್ರೆಸ್ ಇನ್ನೂ ತೀರ್ಮಾನ ಮಾಡಿಲ್ಲಷ ಬಹುಶಃ ಜನವರಿ-8 ರಂದು ಎಸ್ಸಿ ಎಸ್ಟಿ ಬೃಹತ್ ಐಕ್ಯತಾ ಸಮಾವೇಶದಲ್ಲಿ ಒಳ ಮೀಸಲಾತಿ ಕುರಿತು ತೀರ್ಮಾನ ಮಾಡುವ ಸಾಧ್ಯತೆ ಇದೆ ಎಂದು ಅವರು ಸ್ಪಷ್ಟಪಡಿಸಿದರು.
ಒಳ ಮೀಸಲಾತಿ ಅನುಷ್ಠಾನ ಕುರಿತು ಮುಂಬರುವ ವಿಧಾನಸಭಾ ಚುನಾವಣಾ ಪ್ರನಾಳಿಕೆಯಲ್ಲೇ ಪಕ್ಷವು ಸೇರ್ಪಡೆ ಮಾಡುವ ಸಾಧ್ಯತೆ ಇದೆ. ಎಸ್ಸಿ, ಎಸ್ಟಿ ಸಮುದಾಯಗಳಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಕಾಂಗ್ರೆಸ್ ಪಕ್ಷವೇ ನಾಗಮೋಹನ್ ದಾಸ್ ಸಮಿತಿಯನ್ನು ನೇಮಿಸಿತ್ತು. ಹಾಗಾಗಿ ಕಾಂಗ್ರೆಸ್ ಪಕ್ಷ ಎಸ್ಸಿ, ಎಸ್ಟಿ ಮೀಸಲಾತಿ ಹೆಚ್ಚಳ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿದೆ. ಅದೇ ರೀತಿ ನ್ಯಾಯಮೂರ್ತಿ ಸದಾಶಿವ ಆಯೋಗ ರಚನೆ ಮಾಡಿದ್ದು ಕೂಡಾ 2002ರಲ್ಲಿ ಎಸ್.ಎಂ.ಕೃಷ್ಣ ಮುಖ್ಯಮಂತ್ರಿಗಳಾಗಿದ್ದ ಸಂದರ್ಭದಲ್ಲಿ ಎನ್ನುವುದು ಮುಖ್ಯ. ಕೇವಲ ಕಾಂಗ್ರೆಸ್ ಅಲ್ಪಸಂಖ್ಯಾತರನ್ನ ಓಲೈಕೆ ಮಾಡುತ್ತಿಲ್ಲ. ಕಾಂಗ್ರೆಸ್ ಪಕ್ಷ ಸರ್ವ ಜಾತಿಗಳ, ಸರ್ವ ಧರ್ಮದ ಶಾಂತಿಯ ತೋಟ ಇದ್ದಂತೆ, ಹಾಗಾಗಿ ಕಾಂಗ್ರೆಸ್ ಪಕ್ಷದಿಂದ ಸರ್ವರಿಗೂ ಸಾಮಾಜಿಕ ನ್ಯಾಯ ದೊರೆಯಲಿದೆ ಎಂದು ಪರಮೇಶ್ವರ್ ನಾಯ್ಕ್ ತಿಳಿಸಿದರು.