i
ಪ್ರವರ್ಗ-3ಬಿಗೆ ವೈಶ್ಯ ವಾಣಿ ಸಮಾಜ ಸೇರ್ಪಡೆ…
ಚಂದ್ರವಳ್ಳಿ ನ್ಯೂಸ್, ಬೆಳಗಾವಿ:
ಹಿಂದುಳಿದ ಪ್ರವರ್ಗ-3ಬಿ ವರ್ಗಕ್ಕೆ ವೈಶ್ಯ ವಾಣಿ ಸಮಾಜ ಸೇರ್ಪಡೆ ಮಾಡಲು ರಾಜ್ಯ ಸರಕಾರ ತೀರ್ಮಾನಿಸಿದೆ. ಅಲ್ಲದೆ ವೈಶ್ಯವಾಣಿ ಉಪಜಾತಿಗಳನ್ನು ಕ್ರೂಢೀಕರಿಸಲಾಗುತ್ತದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಹೇಳಿದ್ದಾರೆ.
ಬೆಳಗಾವಿ ನಡೆಯುತ್ತಿರುವ ವಿಧಾನಸಭಾ ಅಧಿವೇಶನದಲ್ಲಿ ಆಡಳಿತ ಪಕ್ಷದ ಸದಸ್ಯ ಹರತಾಳ್ ಹಾಲಪ್ಪ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಆರ್ಥಿಕ ಮತ್ತು ಸಾಮಾಜಿಕವಾಗಿ ಹಿಂದುಳಿದಿರುವ ವೈಶ್ಯವಾಣಿ ಜನಾಂಗವನ್ನು ಪ್ರವರ್ಗ 3ಬಿ ಗೆ ಸೇರ್ಪಡೆ ಮಾಡಬೇಕೆಂದು ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ಸರ್ಕಾರಕ್ಕೆ ಶಿಫಾರಸ್ಸು ಮಾಡಿದ್ದು ಇದರ ಉಪಜಾತಿಗಳಿಗೆ ಅನ್ಯಾಯವಾಗದಂತೆ ಸರ್ಕಾರ ಸೂಕ್ತ ಕ್ರಮ ವಹಿಸಲಿದೆ ಎಂದು ಮಾಹಿತಿ ನೀಡಿದರು.
ಹಿಂದುಳಿದ ವರ್ಗಗಳ ಪ್ರವರ್ಗ-1ರಡಿ ಬರುವ ವಿವಿಧ ಸಮುದಾಯದ ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ಐದು ರೀತಿ ಶುಲ್ಕವನ್ನು ಮರುಪಾವತಿ ಮಾಡಲಾಗುತ್ತಿದೆ ಎಂದು ಆಡಳಿತ ಪಕ್ಷದ ಬಿಜೆಪಿ ಸದಸ್ಯೆ ಕೆ.ಪೂರ್ಣಿಮಾ ಪ್ರಶ್ನೆಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಉತ್ತರಿಸಿದರು.
ಪ್ರವರ್ಗ-1ರಡಿ 95 ಜಾತಿಗಳನ್ನು ಗುರುತಿಸಲಾಗಿದ್ದು, ಈ ವರ್ಗದಲ್ಲಿರುವ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಬೋಧನಾ ಶುಲ್ಕ, ಪ್ರಯೋಗಾಲಯ ಶುಲ್ಕ, ಪರೀಕ್ಷಾ ಶುಲ್ಕ, ಕ್ರೀಡಾ ಶುಲ್ಕ, ಗ್ರಂಥಾಲಯ ಶುಲ್ಕವನ್ನು ಮರುಪಾವತಿ ಮಾಡಲಾಗುತ್ತಿದೆ ಎಂದು ಅವರು ಮಾಹಿತಿ ನೀಡಿದರು.