i
ಉಪವಿಭಾಗಾಧಿಕಾರಿಗಳಿಂದ ಮತಗಟ್ಟೆ ಪರಿಶೀಲನೆ
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗ ನಗರ ವ್ಯಾಪ್ತಿಯಲ್ಲಿನ ವಿವಿಧ ಮತಗಟ್ಟೆಗಳಿಗೆ ಸೋಮವಾರ ಉಪವಿಭಾಗಾಧಿಕಾರಿ ಆರ್.ಚಂದ್ರಯ್ಯ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಚಿತ್ರದುರ್ಗ ನಗರದ ಸಂತಜೋಸೆಫೆರ ಕಾನ್ವೆಂಟ್ ಕನ್ನಡ ಹಿರಿಯ ಪ್ರಾಥಮಿಕ ಶಾಲೆ, ವಿ.ಪಿ.ಬಡಾವಣೆ ಸರ್ಕಾರಿ ಪ್ರಾಥಮಿಕ ಶಾಲೆ, ಬಾರ್ಲೈನ್ ಸರ್ಕಾರಿ ಪ್ರಾಥಮಿಕ ಶಾಲೆ, ಕೆಳಗೋಟೆ ಸಿ.ಕೆ.ಪುರ ಸರ್ಕಾರಿ ಶಾಲೆ, ಬಾಪೂಜಿ ಶಾಲೆ, ಐಯುಡಿಪಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಹೌಸಿಂಗ್ ಬೋರ್ಡ್, ಪಟ್ಟದ ಪರಮೇಶ್ವರಿ ಶಾಲೆ ಸೇರಿದಂತೆ ಜೋಗಿಮಟ್ಟಿ ರಸ್ತೆಯ ಕರುವಿನಕಟ್ಟೆ ವೃತ್ತದ ಸಮೀಪದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ ಮತಗಟ್ಟೆಗಳಲ್ಲಿನ ಮೂಲಸೌಕರ್ಯಗಳನ್ನು ಪರಿಶೀಲನೆ ನಡೆಸಿದರು.
ಈ ವೇಳೆ ಮಾತನಾಡಿದ ಉಪವಿಭಾಗಾಧಿಕಾರಿ ಆರ್.ಚಂದ್ರಯ್ಯ, ಸದ್ಯದಲ್ಲಿಯೇ ವಿಧಾನಸಭೆ ಚುನಾವಣೆ ಬರಲಿದ್ದು, ಈ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಮತಗಟ್ಟೆಗಳಲ್ಲಿ ಶೌಚಾಲಯ, ನೀರು, ವಿದ್ಯುತ್, ಸ್ವಚ್ಚತೆ ಸೇರಿದಂತೆ ಅಗತ್ಯ ಮೂಲಸೌಕರ್ಯಗಳನ್ನು ಸುಸ್ಥಿತಿಯಲ್ಲಿಟ್ಟುಕೊಳ್ಳಬೇಕು ಎಂದು ಬಿಎಲ್ಒ ಹಾಗೂ ಮುಖ್ಯ ಶಿಕ್ಷಕರಿಗೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ನಗರಸಭೆ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಗೀರೆಡ್ಡಿ, ಕಂದಾಯ ನಿರೀಕ್ಷಕ ಗೋಪಾಲಕೃಷ್ಣ, ನಗರಸಭೆ ಸಿಬ್ಬಂದಿ ಗೋವಿಂದರಾಜು ಸೇರಿದಂತೆ ಮತ್ತಿತರರು ಇದ್ದರು.