i
ಜಡ್ಜ್ ಹುದ್ದೆಗೆ ರಾಜೀನಾಮೆ ನೀಡಿ ಜೆಡಿಎಸ್ ಸೇರಿದ ಡಾ. ಸುಭಾಶ್ಚಂದ್ರ ರಾಠೋಡ ಖರ್ಗೆ ಎದುರಾಳಿ…
ಚಂದ್ರವಳ್ಳಿ ನ್ಯೂಸ್, ಕಲಬುರಗಿ:
ಉತ್ತಮ ಜಡ್ಜ್ ಎನ್ನುವ ಹೆಗ್ಗಳಿಕೆ ಪಡೆದಿದ್ದ ವಿಜಯಪುರದ ವ್ಯಕ್ತಿಯೊಬ್ಬರು ತನ್ನ ಜಡ್ಜ್ ಹುದ್ದೆಗೆ ರಾಜೀನಾಮೆ ನೀಡಿ ರಾಜಕೀಯಕ್ಕೆ ಪಾದಾರ್ಪಣೆ ಮಾಡಿದ್ದಾರೆ. ಅಷ್ಟೇ ಅಲ್ಲ ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ, ಜೆಡಿಎಸ್ ರಾಜ್ಯಾಧ್ಯಕ್ಷ ಸಿ. ಎಂ. ಇಬ್ರಾಹಿಂ ಸಮ್ಮುಖದಲ್ಲಿ ಜೆಡಿಎಸ್ ಪಕ್ಷ ಸೇರ್ಪಡೆಗೊಂಡಿದ್ದಾರೆ.
ಚಿತ್ತಾಪುರ ಕಿರಿಯ ನ್ಯಾಯಾಲಯದ ಸಿವಿಲ್ ನ್ಯಾಯಾಧೀಶರಾಗಿ ಉತ್ತಮವಾಗಿ ಸೇವೆ ಸಲ್ಲಿಸಿ ಪ್ರಸಿದ್ಧಿಯಾಗಿದ್ದ ಡಾ.ಸುಭಾಶ್ಚಂದ್ರ ರಾಠೋಡ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಕಲಬುರಗಿ ಜಿಲ್ಲೆಯ ಚಿತ್ತಾಪುರ ಕ್ಷೇತ್ರದಿಂದ ಅವರು ಜೆಡಿಎಸ್ ಅಭ್ಯರ್ಥಿಯಾಗಿ ಚುನಾವಣೆಗೆ ಸ್ಪರ್ಧೆ ಮಾಡಲಿದ್ದಾರೆ.
ಜಡ್ಜ್ ಹುದ್ದೆಗೆ ರಾಜೀನಾಮೆ ನೀಡಿ ರಾಜಕೀಯಕ್ಕೆ ಎಂಟ್ರಿಯಾಗಿರುವುದು ಅಚ್ಚರಿ ಉಂಟು ಮಾಡಿದೆ. ಚಿತ್ತಾಪುರದ ಹಾಲಿ ಶಾಸಕರು ಕಾಂಗ್ರೆಸ್ನ ಪ್ರಿಯಾಂಕ್ ಖರ್ಗೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪುತ್ರನಿಗೆ ಈ ಬಾರಿಯ ಚುನಾವಣೆಯಲ್ಲಿಯೂ ಟಿಕೆಟ್ ಸಿಗುವುದರಲ್ಲಿ ಯಾವುದೇ ಅನುಮಾನ ಇಲ್ಲ.
ಡಾ. ಸುಭಾಶ್ಚಂದ್ರ ರಾಠೋಡ 2023ರ ಜನವರಿ 18ರಂದು ಕಿರಿಯ ನ್ಯಾಯಾಧೀಶ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಫೆಬ್ರವರಿ 3ರಂದು ಎಚ್. ಡಿ. ಕುಮಾರಸ್ವಾಮಿ, ಸಿ. ಎಂ. ಇಬ್ರಾಹಿಂ ಸಮ್ಮುಖದಲ್ಲಿ ಜೆಡಿಎಸ್ ಪಕ್ಷ ಸೇರಿದರು.
ವಿಧಾನಸಭಾ ಚುನಾವಣೆಗೆ ಚಿತ್ತಾಪುರದಿಂದ ಕಣಕ್ಕಿಳಿಯಲು ತಯಾರಿ ನಡೆಸಿರುವ ಅವರು ಕಂಬಳೇಶ್ವರ ಮಠಕ್ಕೆ ಭೇಟಿ ನೀಡಿ ಸೋಮಶೇಖರ ಶಿವಾಚಾರ್ಯರ ಆಶೀರ್ವಾದ ಪಡೆದು ಈಗಾಗಲೇ ಚುನಾವಣಾ ಪ್ರಚಾರ ಸಹ ಆರಂಭಿಸಿರುವುದಲ್ಲದೆ ಬಾಡಿಗೆ ಮನೆ, ಪಕ್ಷದ ಕಚೇರಿ ಓಪನ್ ಮಾಡಿರುವ ಡಾ. ಸುಭಾಶ್ಚಂದ್ರ ರಾಠೋಡ ಮೂಲತಃ ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಸಂಕನಾಳ ಗ್ರಾಮದವರು. ಕಾರ್ಮಿಕರ ಕಾನೂನು ವಿಷಯದಲ್ಲಿ ಪಿಎಚ್ಡಿ ಪದವಿ ಪಡೆದ ಕರ್ನಾಟಕದ ಮೊದಲ ಲಂಬಾಣಿಗ ಎಂಬ ಹೆಗ್ಗಳಿಕೆ ಪಡೆದಿದ್ದಾರೆ. 2016ರಲ್ಲಿ ಸಿವಿಲ್ ನ್ಯಾಯಾಧೀಶರಾಗಿ ಸೇವೆ ಆರಂಭಿಸಿದ್ದರು.
ಜೆಡಿಎಸ್ ಪಕ್ಷದ ಕಾರ್ಯಕರ್ತರು, ಮುಖಂಡರು, ಅಭಿಮಾನಿಗಳನ್ನು ಮತ್ತು ಬೇರೆ ಪಕ್ಷಕ್ಕೆ ಹೋಗಿದ್ದವರನ್ನು ಸಂಪರ್ಕಿಸಿ ಮತ್ತೆ ಪಕ್ಷಕ್ಕೆ ಕರೆತರುವ ಪ್ರಯತ್ನ ಮಾಡುತ್ತೇನೆ ಎಂದು ಅವರು ಹೇಳಿದ್ದಾರೆ.
ಚಿತ್ತಾಪುರ ಕ್ಷೇತ್ರದಲ್ಲಿ ಜನ ಬದಲಾವಣೆ ಬಯಸುತ್ತಿದ್ದಾರೆ. ಜನಸಾಮಾನ್ಯರಿಗೆ ಸರ್ಕಾರದ ಸೌಲಭ್ಯಗಳು ಸಿಗುವುದು ಜೆಡಿಎಸ್ನಿಂದ ಮಾತ್ರ ಸಾಧ್ಯ, ನನಗೊಂದು ಅವಕಾಶ ಕೊಡಿ, ಭ್ರಷ್ಟಾಚಾರ ಮುಕ್ತ ಸಮರ್ಥ ಸಮಾಜ ನಿರ್ಮಿಸಿಕೊಡುತ್ತೇನೆ ಎಂದು ಮತ ಕೇಳುತ್ತೇನೆ ಎಂದು ಅವರು ಹೇಳಿದ್ದಾರೆ.