i
ಎರಡು ಮೂರು ದಿನದಲ್ಲಿ ಜಿಲ್ಲೆಯ ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ಅಂತಿಮ, ಸಣ್ಣತನದ ರಾಜಕಾರಣಿ ನಾನಲ್ಲ-ಯಶೋಧರ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಮುಂಬರುವ 2023ರ ವಿಧಾನಸಭಾ ಚುನಾವಣೆಯಲ್ಲಿ ಚಿತ್ರದುರ್ಗ ಜಿಲ್ಲೆಯಿಂದ ಕನಿಷ್ಠ ಮೂರು ಸ್ಥಾನಗಳನ್ನು ಗೆದ್ದು ಕುಮಾರಸ್ವಾಮಿ ಮುಖ್ಯಮಂತ್ರಿ ಆಗಲು ಕೋಟೆ ನಾಡಿನ ಜನತೆ ಕೈಜೋಡಿಸಬೇಕಾಗಿದೆ ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಡಿ.ಯಶೋಧರ ಮನವಿ ಮಾಡಿದರು.
ಚಿತ್ರದುರ್ಗ ಜಿಲ್ಲಾ ಜೆಡಿಎಸ್ ಕಚೇರಿಯಲ್ಲಿ ವಿಧಾನಸಭೆ ಚುನಾವಣೆ ದೃಷ್ಠಿಯಿಂದ ಸೋಮವಾರ ಕರೆಯಲಾಗಿದ್ದ ಸಮಾಲೋಚನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಪಕ್ಷವನ್ನು ಉಳಿಸಿಕೊಳ್ಳುವುದು ಸವಾಲಿನ ಕೆಲಸ ಎನ್ನುವುದು ನನಗೆ ಅರಿವಿದೆ. ಆದರೂ ಜಿಲ್ಲೆಯಲ್ಲಿ ನಿಷ್ಠಾವಂತ ಕಾರ್ಯಕರ್ತರ ಪಡೆ ಇದೆ. ಆದ್ದರಿಂದ ಆರು ತಾಲ್ಲೂಕಿನ ಅಧ್ಯಕ್ಷರುಗಳು ಇನ್ನೆರಡು ಮೂರು ದಿನಗಳಲ್ಲಿ ಅಭ್ಯರ್ಥಿಗಳ ಹೆಸರುಗಳನ್ನು ಅಂತಿಮಗೊಳಿಸಿದರೆ ಜಿಲ್ಲೆಗೆ ಉಸ್ತುವಾರಿಯಾಗಿರುವ ಮೀನಳ್ಳಿ ತಾಯಣ್ಣರವರಿಗೆ ವರದಿ ನೀಡಲು ಅನುಕೂಲವಾಗಲಿದೆ. ಈ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡುವಂತೆ ಅವರು ವಿನಂತಿಸಿದರು.
ಜಿಲ್ಲೆಯಲ್ಲಿ ಪಕ್ಷ ಸಂಕಷ್ಠದಲ್ಲಿದೆ. ಪಕ್ಷದ ವರಿಷ್ಠರು ಯಾರನ್ನೇ ಅಭ್ಯರ್ಥಿಯನ್ನಾಗಿ ಘೋಷಿಸಲಿ ಅವರ ಪರವಾಗಿ ಕಾರ್ಯಕರ್ತರು ಹಾಗೂ ಮುಖಂಡರುಗಳು ಕೆಲಸ ಮಾಡಬೇಕು. ಚಳ್ಳಕೆರೆ ಕ್ಷೇತ್ರಕ್ಕೆ ರವೀಶ್ ಹಾಗೂ ಹೊಸದುರ್ಗ ಕ್ಷೇತ್ರಕ್ಕೆ ತಿಪ್ಪೇಸ್ವಾಮಿ ಇವರುಗಳನ್ನು ಅಭ್ಯರ್ಥಿಗಳನ್ನಾಗಿ ಘೋಷಿಸಲಾಗಿದೆ. ಇನ್ನು ಉಳಿದಂತೆ ಚಿತ್ರದುರ್ಗ, ಹಿರಿಯೂರು, ಮೊಳಕಾಲ್ಮುರು, ಹೊಳಲ್ಕೆರೆ ಕ್ಷೇತ್ರಗಳ ಅಭ್ಯರ್ಥಿಗಳನ್ನು ಘೋಷಿಸಬೇಕಿದೆ. ಜನತಾಪಕ್ಷದ ಹೆಬ್ಬಾಗಿಲಿನಂತಿರುವ ಹಿರಿಯೂರು ಕ್ಷೇತ್ರದಲ್ಲಿ ಅಭ್ಯರ್ಥಿಯನ್ನು ಘೋಷಿಸುವ ಸಂಬಂಧ ಕುಮಾರಣ್ಣನವರು ಆರು ಸಾರಿ ಸಭೆ ನಡೆಸಿದ್ದಾರೆ. ಇದೇ ತಿಂಗಳ 24 ಇಲ್ಲವೆ 25 ರೊಳಗೆ ಅಭ್ಯರ್ಥಿಗಳನ್ನು ಘೋಷಿಸುವಂತೆ ಕೇಳಿಕೊಂಡಿದ್ದೇನೆ. ಕಾಂಗ್ರೆಸ್ನಿಂದ ಯಾರು, ಬಿಜೆಪಿ.ಯಿಂದ ಯಾರು ಅಭ್ಯರ್ಥಿಗಳಾಗುತ್ತಾರೆಂದು ಕಾಯುತ್ತ ಕುಳಿತರೆ ಆಗಲ್ಲ. ನಲವತ್ತು ವರ್ಷಗಳ ಕಾಲ ಪಕ್ಷಕ್ಕಾಗಿ ದುಡಿದ್ದೇನೆ. ರಾಷ್ಟ್ರೀಯ ಪಕ್ಷಗಳನ್ನು ಸೋಲಿಸುವ ತಂತ್ರಗಾರಿಕೆ ಮಾಡುವಲ್ಲಿ ಯಶಸ್ವಿಯಾಗುತ್ತೇವೆಂಬ ನಂಬಿಕೆಯಿದೆ. ಇಂತಹವರಿಗೆ ಟಿಕೇಟ್ ಕೊಡಿ ಎಂದು ವರಿಷ್ಠರುಗಳಿಗೆ ಶಿಫಾರಸ್ಸು ಮಾಡುವ ಸಣ್ಣತನದ ರಾಜಕಾರಣಿ ನಾನಲ್ಲ ಎಂದು ಸಮಾಲೋಚನಾ ಸಭೆಯಲ್ಲಿ ಸ್ಪಷ್ಠಪಡಿಸಿದರು.
ಚುನಾವಣೆ ಸಂಬಂಧ ವರಿಷ್ಠರುಗಳು ತೆಗೆದುಕೊಳ್ಳುವ ತೀರ್ಮಾನಕ್ಕೆ ನಾನು ಬದ್ದನಾಗಿದ್ದೇನೆ. ಪಂಚರತ್ನ ರಥಯಾತ್ರೆ ಇನ್ನು ಜಿಲ್ಲೆಗೆ ಆಗಮಿಸಿಲ್ಲ. ವೈಮನಸ್ಸು, ದ್ವಂದ್ವ ನಿಲುವುಗಳು ಬೇಡ. ಮಡಿವಂತಿಕೆ ಬಿಟ್ಟು ಪಕ್ಷದ ಸೇನಾನಿಗಳಂತೆ ಕೆಲಸ ಮಾಡಬೇಕಿದೆ. ಮತ್ತೊಬ್ಬರ ಮನಸ್ಸಿಗೆ ನೋವಾಗದಂತೆ ಸೂಕ್ಷ್ಮವಾಗಿ ನಿಮ್ಮ ಅಭಿಪ್ರಾಯಗಳನ್ನು ಉಸ್ತುವಾರಿ ಮೀನಳ್ಳಿ ತಾಯಣ್ಣರವರಿಗೆ ತಿಳಿಸಿ ಎಂದು ಕಾರ್ಯಕರ್ತರಲ್ಲಿ ಕೋರಿದರು.