i
ಜೆಡಿಎಸ್ ಅಭ್ಯರ್ಥಿ ರವೀಶ್ ವತಿಯಿಂದ ಮಹಿಳೆಯರಿಗೆ ತಿಮ್ಮಪ್ಪನ ದರ್ಶನ ಭಾಗ್ಯ…
ಚಂದ್ರವಳ್ಳಿ ನ್ಯೂಸ್, ಚಳ್ಳಕೆರೆ:
ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ರವೀಶ್ ವತಿಯಿಂದ ತಾಲ್ಲೂಕಿನ ವಿವಿಧ ಗ್ರಾಮಗಳ ಮಹಿಳಾ ಸಂಘಟನೆಗಳ ಪ್ರತಿನಿಧಿಗಳಿಗೆ ತಿರುಪತಿ ತಿಮ್ಮಪ್ಪನ ಪ್ರವಾಸ ಭಾಗ್ಯ ಕಲ್ಪಿಸಿದ್ದಾರೆ.
ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷವು ಹೆಚ್ಚಿನ ಮತಗಳನ್ನು ಸೆಳೆಯುವ ಉದ್ದೇಶದಿಂದ ಕೆಎಸ್ಆರ್ಟಿಸಿ ಬಸ್ಗಳಲ್ಲಿ ತಿರುಪತಿ ಪ್ರವಾಸಕ್ಕೆ ಉಚಿತವಾಗಿ ತೆರಳಲು ಚಾಲನೆ ನೀಡಿದ್ದಾರೆ.
ಪಕ್ಷದ ಮುಖಂಡರ ಆಶಯದಂತೆ ಚಳ್ಳಕೆರೆ ತಾಲೂಕಿನ ನಗರಂಗೆರೆ, ದಾಸನಾಯಕನಹಟ್ಟಿ, ಗಾನಪ್ಪನಹಟ್ಟಿ, ಉಪ್ಪಾರಹಟ್ಟಿ, ಕೆಂಚವೀರನಹಳ್ಳಿ ಗ್ರಾಮಗಳ ಮಹಿಳಾ ಸಂಘಟನೆಗಳ ನೂರಾರು ಪ್ರತಿನಿಧಿಗಳಿಗೆ ತಿರುಪತಿ ಪ್ರವಾಸವನ್ನು ಉಚಿತವಾಗಿ ಕಲ್ಪಿಸಲಾಗಿದೆ. ಕ್ಷೇತ್ರದ ಇತರೆ ಮಹಿಳೆಯರನ್ನು ದೇವರ ದರ್ಶನಕ್ಕೆ ಪ್ರವಾಸ ಕಳುಹಿಸಲಾಗುತ್ತದೆ. ಮಾಜಿ ಶಾಸಕ ಬಸವರಾಜ ಮಂಡಿಮಠ ಅವರ ಸೇರ್ಪಡೆಯಿಂದ ಪಕ್ಷಕ್ಕೆ ಆನೆ ಬಲ ಬಂದತಾಗಿದೆ ಎಂದು ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಎಂ. ರವೀಶ್ ತಿಳಿಸಿದರು.
ಇದೇ ಸಂದರ್ಭದಲ್ಲಿ ಮಾತನಾಡಿದ ಮಾಜಿ ಶಾಸಕ ಬಸವರಾಜ ಮಂಡಿಮಠ್, ಚಳ್ಳಕೆರೆ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ರವೀಶ್ ಅವರನ್ನು ಗೆಲ್ಲಿಸುವುದೇ ನಮ್ಮ ಗುರಿ, ಇದಕ್ಕಾಗಿ ತಾಲೂಕಿನಾದ್ಯಂತ ಸಂಘಟಿತ ಹೋರಾಟ ಮಾಡಲಾಗುತ್ತದೆ ಎಂದು ಹೇಳಿದರು.
ಜೆಡಿಎಸ್ ತಾಲ್ಲೂಕು ಘಟಕದ ಅಧ್ಯಕ್ಷ ಪಿ. ತಿಪ್ಪೇಸ್ವಾಮಿ ಮಾತನಾಡಿ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಡಿಮೆ ಅಂತರದಲ್ಲಿ ಸೋಲು ಕಂಡಿದ್ದೇವು. ಈ ಸಲ ಹೆಚ್ಚಿನ ಮತಗಳ ಅಂತರದಲ್ಲಿ ಜೆಡಿಎಸ್ ಗೆಲ್ಲಲಿದೆ ಎಂದರು.
ಪಕ್ಷದ ಮುಖಂಡರಾದ ಶ್ರೀಧರಾಚಾರ್, ಏಕಾಂತ, ಶ್ರೀನಿವಾಸ್ ಮತ್ತಿತರರು ಇದ್ದರು.