i
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಜೆಡಿಎಸ್ ಪಕ್ಷ ಮಾಡು ಇಲ್ಲವೇ ಮಡಿ ಎನ್ನುವ ಲೆಕ್ಕಾಚಾರದಲ್ಲಿ ಆಟ ಕಟ್ಟಿದ್ದು ರಾಜ್ಯ ವಿವಿಧ ಮತ ಕ್ಷೇತ್ರಗಳಲ್ಲಿ ಮುಸ್ಲಿಂ ಮತಗಳು ಹೆಚ್ಚಿರುವಂತ 40 ಕ್ಷೇತ್ರಗಳಲ್ಲಿ ಜೆಡಿಎಸ್ ಪ್ರತ್ಯೇಕ ಕಾರ್ಯತಂತ್ರ ರೂಪಿಸಲು ಮುಂದಾಗಿದೆ. ಈ ನಿಟ್ಟಿನಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಅವರು ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂಗೆ ಮುಸ್ಲಿಂ ಸಮುದಾಯ ಹೆಚ್ಚಾಗಿರುವ ಕ್ಷೇತ್ರಗಳ ಹೊಣೆಗಾರಿಕೆ ನೀಡಲು ತೀರ್ಮಾನಿಸಿದ್ದಾರೆ ಎನ್ನಲಾಗುತ್ತಿದೆ.
ಕಾಂಗ್ರೆಸ್ ಪಕ್ಷ ಮುಸ್ಲಿಂ ಸಮುದಾಯಕ್ಕೆ ರಾಜ್ಯಾಧ್ಯಕ್ಷ ಸ್ಥಾನ ನೀಡಿಲ್ಲ. ಕೇವಲ ಮತಗಳಿಕೆ ಸೀಮಿತ ಮಾಡಿಕೊಂಡಿದೆ, ಕನಿಷ್ಠ ಪಕ್ಷ ರಾಜ್ಯದಲ್ಲಿ ಒಂದು ಉಪ ಮುಖ್ಯಮಂತ್ರಿ ಸ್ಥಾನವನ್ನೂ ನೀಡಲಿಲ್ಲ. ಜೊತೆಯಲ್ಲಿ ಸಿ.ಎಂ.ಇಬ್ರಾಹಿಂ ಅವರಿಗೆ ವಿಧಾನ ಪರಿಷತ್ ವಿಪಕ್ಷ ಸ್ಥಾನ ಕೊಡಲು ನಿರಾಕರಿಸಲಾಯಿತು. ಕಾಂಗ್ರೆಸ್ ಪಕ್ಷ ಬರೀ ಮೊಸಳೆ ಕಣ್ಣೀರು ಸುರಿಸುತ್ತಿದೆ. ದೇವೇಗೌಡರು ಮುಸ್ಲಿಂ ಅವರಿಗೆ ಪ್ರತ್ಯೇಕ ಮೀಸಲಾತಿ ಕಲ್ಪಿಸಿದ್ದರು. ಅಲ್ಲದೆ ಈಗ ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನ ನೀಡಿದ್ದು, ಉಪ ಮುಖ್ಯಮಂತ್ರಿಯ ಭರವಸೆ ಕೂಡಾ ಕೊಟ್ಟಿದೆ ಎಂದು ಸಮುದಾಯದ ವಿಶ್ವಾಸ ಗಳಿಸಲು ಸೂಚಿಸಲಾಗಿದೆ ಎಂದು ತಿಳಿದು ಬಂದಿದೆ.
ಜೆಡಿಎಸ್ ಪಕ್ಷದ ವತಿಯಿಂದ ಇತ್ತೀಚೆಗೆ ನಡೆಸಿರುವ ಸಮೀಕ್ಷೆಯಲ್ಲಿ ಮುಸ್ಲಿಂ ಸಮುದಾಯದಲ್ಲಿ ವಿಶ್ವಾಸ ಮೂಡಿಸ ಬೇಕಿದೆ ಎಂಬ ಅಂಶ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಸಿ.ಎಂ. ಇಬ್ರಾಹಿಂ ಅವರಿಗೆ ಹೆಚ್ಚಿನ ಹೊಣೆಗಾರಿಯ ಜವಾಬ್ದಾರಿ ನೀಡಲು ನಿರ್ಧರಿಸಲಾಗಿದೆ ಎಂದು ಹೇಳಲಾಗುತ್ತಿದೆ.
ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ, ಬಿ.ಎಂ. ಫಾರೂಕ್ ನೇತೃತ್ವದಲ್ಲಿ ತಂಡ ರಚನೆ ಮಾಡಿ ಮುಸ್ಲಿಂ ಸಮುದಾಯದ ಪ್ರಾಬಲ್ಯ ಇರುವ 40 ಕ್ಷೇತ್ರಗಳಲ್ಲಿ ಸಭೆ ಹಾಗೂ ಇತರೆ ಕಾರ್ಯಕ್ರಮ ಆಯೋಜಿಸುವುದು ಸೇರಿದಂತೆ ಸಾಮಾಜಿಕ ಜಾಲತಾಣಗಳ ಮೂಲಕ ಮುಸ್ಲಿಂ ಸಮುದಾಯದ ವಿಶ್ವಾಸಗಳಿಸಲು ಜೆಡಿಎಸ್ ನಿರ್ಧರಿಸಿದೆ ಎಂದು ಹೇಳಲಾಗುತ್ತಿದೆ.
ಇದೇ ಸಂದರ್ಭದಲ್ಲಿ ಮುಸ್ಲಿಂ ಸಮುದಾಯದ ಪರ ಆ ಸಮುದಾಯದ ಸಮಗ್ರ ಕಲ್ಯಾಣಕ್ಕಾಗಿ ಏನೇನು ಕಾರ್ಯಕ್ರಮ ನೀಡಲಾಗುತ್ತದೆ ಎನ್ನುವುದನ್ನು ಪ್ರಣಾಳಿಕೆಯಲ್ಲಿ ಅಳವಡಿಸಿಕೊಳ್ಳಲು ನಿರ್ಧರಿಸಲಾಗಿದೆ ಎಂದು ತಿಳಿದು ಬಂದಿದೆ.