i
ಲೋಕಾಯುಕ್ತ ದಾಳಿ, ಲಂಚ ಪಡೆಯುವಾಗ ಬೆಳಗಟ್ಟ ಪಿಡಿಒ ಬಂಧನ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಗ್ರಾಮ ಪಂಚಾಯಿತಿ ಪಿಡಿಒನೊಬ್ಬ ಇ-ಸ್ವತ್ತು ಮಾಡಿಕೊಡಲು ಲಂಚಕ್ಕೆ ಬೇಡಿಕೆ ಇಟ್ಟು 10 ಸಾವಿರ ಲಂಚ ಪಡೆಯುವಾಗ ಲೋಕಾಯುಕ್ತ ಪೊಲೀಸರು ದಾಳಿ ಮಾಡಿ ಲಂಚದ ಹಣ ಸಮೇತ ಆರೋಪಿ ಪಿಡಿಒನನ್ನು ಬಂಧಿಸಿದ್ದಾರೆ.
ಚಿತ್ರದುರ್ಗ ತಾಲೂಕಿನ ಬೆಳಗಟ್ಟ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸುರೇಶ್ ಎಂಬಾತನನ್ನು ಲೋಕಾಯುಕ್ತ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಒಪ್ಪಿಸಿದ್ದಾರೆ.
ಬೆಳಗಟ್ಟ ನಿವಾಸಿ ತಿಪ್ಪೇಸ್ವಾಮಿ ಎಂಬುವರು ಗ್ರಾಮದಲ್ಲಿ 2020ರ ಫೆಬ್ರುವರಿಯಲ್ಲಿ ನಿವೇಶನ ಖರೀದಿಸಿ ಇ-ಸ್ವತ್ತು ನೀಡುವಂತೆ ಅರ್ಜಿ ಸಲ್ಲಿಸಿದ್ದರು. ಆದರೆ ಗ್ರಾಪಂ ಪಿಡಿಒ ಸುರೇಶ್ ಇ ಸ್ವತ್ತು ಮಾಡಿಕೊಡಲು 10 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದು ಈ ಸಂಬಂಧ ತಿಪ್ಪೇಸ್ವಾಮಿ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು.
ಕಾರ್ಯಾಚರಣೆಗೆ ಇಳಿದ ಲೋಕಾಯುಕ್ತರು ಬೆಳಗಟ್ಟ ಗ್ರಾಮ ಪಂಚಾಯಿತಿ ಆವರಣದಲ್ಲಿ ಆರೋಪಿ ಸುರೇಶ್ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಬಂಧಿಸಿದಲ್ಲದೆ ಲಂಚದ ರೂಪದಲ್ಲಿ ಪಡೆದ ಹಣವನ್ನು ಜಪ್ತಿ ಮಾಡಿದ್ದಾರೆ. ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿ ಎನ್. ವಾಸುದೇವರಾಮ ನೇತೃತ್ವದಲ್ಲಿ ದಾಳಿ ನಡೆಸಲಾಗಿತ್ತು.