i
ಜಿಪಂ, ತಾಪಂ ಚುನಾವಣೆಗೆ ಮೊದಲ ಹೆಜ್ಜೆ ಇಟ್ಟ ಸರ್ಕಾರ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ನೆನೆಗುದಿಗೆ ಬಿದ್ದಿದ್ದ ಜಿಪಂ ಹಾಗೂ ತಾಪಂ ಚುನಾವಣೆಗೆ ರಾಜ್ಯ ಸರ್ಕಾರ ಮೊದಲ ಹೆಜ್ಜೆ ಇಟ್ಟಂತೆ ಕಾಣುತ್ತಿದೆ.
ಜಿಪಂ, ತಾಪಂ ಕ್ಷೇತ್ರಗಳ ಪುನರ್ ವಿಂಗಡಣೆಗೆ ಸಂಬಂಧಿಸಿದಂತೆ ರಾಜ್ಯ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗ ಸಲ್ಲಿಸಿರುವ ವರದಿಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅನುಮೋದನೆ ನೀಡಿ ಗೆಜೆಟ್ ಅಧಿಸೂಚನೆ ಹೊರಡಿಸಲಾಗಿದೆ ಎಂದು ರಾಜ್ಯ ಸರ್ಕಾರ ಹೈಕೋರ್ಟ್ಗೆ ಮಾಹಿತಿ ನೀಡಿದೆ.
ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಪಿ.ಬಿ. ವರಾಳೆ ನೇತೃತ್ವದ ವಿಭಾಗೀಯ ನ್ಯಾಯಪೀಠವು ರಾಜ್ಯ ಚುನಾವಣಾ ಆಯೋಗ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಸಂದರ್ಭದಲ್ಲಿ ಸರ್ಕಾರದ ಪರ ವಕೀಲರು ನ್ಯಾಯಪೀಠಕ್ಕೆ ಅನುಪಾಲನಾ ವರದಿ ಸಲ್ಲಿಸಿದ್ದಾರೆ.
ಹೈಕೋರ್ಟ್ 2022ರ ಡಿಸೆಂಬರ್ 14ರಂದು ಹೊರಡಿಸಿದ ಆದೇಶ ಪಾಲಿಸಲಾಗಿದೆ. ಆದೇಶದ ಅನುಸಾರ ಗೆಜೆಟ್ ಅಧಿಸೂಚನೆ ಹೊರಡಿಸಲಾಗಿದೆ ಎಂದು ವಕೀಲರು ಹೇಳಿದರು.
ರಾಜ್ಯ ಸರ್ಕಾರ ಜಿಪಂ, ತಾಪಂ ಚುನಾವಣೆಗೆ ವಿಳಂಬ ನೀತಿ ಅನುಸರಿಸಲಾಗುತ್ತಿದೆ ಎಂದು ಹೈಕೋರ್ಟ್ ವಿಧಿಸಿದ್ದ 5 ಲಕ್ಷ ದಂಡದಲ್ಲಿ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ 2 ಲಕ್ಷ ಹಾಗೂ ಬೆಂಗಳೂರು ವಕೀಲರ ಸಂಘಕ್ಕೆ 2 ಲಕ್ಷ ಪಾವತಿಸಲಾಗಿದೆ. ಉಳಿದ 1 ಲಕ್ಷ ಮೊತ್ತವನ್ನು ರಾಜ್ಯ ವಕೀಲರ ಗುಮಾಸ್ತರ ಕ್ಷೇಮಾಭಿವೃದ್ಧಿ ಸಂಘಕ್ಕೆ ಪಾವತಿಸಲಾಗಿದೆ ಎಂದು ಸರ್ಕಾರದ ಪರ ವಕೀಲರು ಹಣ ಪಾವತಿಯ ರಸೀದಿಗಳನ್ನು ನ್ಯಾಯಪೀಠಕ್ಕೆ ಸಲ್ಲಿಸಿದರು. ಸರ್ಕಾರದ ಪರ ಹಾಗೂ ರಾಜ್ಯ ಚುನಾವಣಾ ಆಯೋಗದ ಪರ ವಕೀಲರ ಕೋರಿಕೆಯಂತೆ ಮಾರ್ಚ್-2ಕ್ಕೆ ಅಂದರೆ ಗುರುವಾರಕ್ಕೆ ವಿಚಾರಣೆ ಮುಂದೂಡಿ ಹೈಕೋರ್ಟ್ ಆದೇಶಿಸಿದೆ.