i
ಏಪ್ರಿಲ್-1ರೊಳಗೆ ತಾಪಂ ಮತ್ತು ಜಿಲ್ಲಾ ಪಂಚಾಯತಿ ಕ್ಷೇತ್ರಗಳ ಮೀಸಲಾತಿ ಪ್ರಮಾಣ ಪ್ರಕಟ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ತಾಲೂಕು ಪಂಚಾಯಿತಿ ಮತ್ತು ಜಿಲ್ಲಾ ಪಂಚಾಯತಿ ಚುನಾವಣೆ ಸಂಬಂಧಿಸಿದಂತೆ ಮೀಸಲಾತಿ ಪ್ರಮಾಣವನ್ನು ಏಪ್ರಿಲ್-1ರ ಒಳಗಾಗಿ ಪ್ರಕಟಿಸುವುದಾಗಿ ರಾಜ್ಯ ಸರ್ಕಾರ ಹೈಕೋರ್ಟ್ ಪೀಠಕ್ಕೆ ಮಾಹಿತಿ ಸಲ್ಲಿಸಿದೆ. ರಾಜ್ಯ ಚುನಾವಣಾ ಆಯೋಗ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಆಶೋಕ್ ಎಸ್. ಕಿಣಗಿ ಅವರಿದ್ದ ನ್ಯಾಯಪೀಠಕ್ಕೆ ಮನವಿ ಮಾಡಿದ ಸರ್ಕಾರ ಮೀಸಲಾತಿ ಪ್ರಮಾಣದ ಪಟ್ಟಿ ಪ್ರಕಟಿಸಲು ಏಪ್ರಿಲ್-1ರ ಗಡುವು ಪಡೆದಿದೆ.
ರಾಜ್ಯ ಚುನಾವಣಾ ಆಯೋಗದಿಂದ ಜಿಪಂ ಹಾಗೂ ತಾಪಂ ಕ್ಷೇತ್ರಗಳ ಗಡಿ ನಿರ್ಣಯ ಮತ್ತು ಮೀಸಲಾತಿ ನಿಗದಿಪಡಿಸುವ ಅಧಿಕಾರವನ್ನು ಹಿಂಪಡೆದುಕೊಂಡು ಕರ್ನಾಟಕ ಪಂಚಾಯತ್ರಾಜ್ ಸೀಮಾ ನಿರ್ಣಯ ಆಯೋಗ ರಚಿಸಲು ಕರ್ನಾಟಕ ಪಂಚಾಯತ್ ರಾಜ್ ಮತ್ತು ಗ್ರಾಮ ಸ್ವರಾಜ್ ಕಾಯ್ದೆಗೆ ಸರ್ಕಾರ ತಿದ್ದುಪಡಿ ತಂದಿರುವುದಕ್ಕೆ ರಾಜ್ಯ ಚುನಾವಣಾ ಆಯೋಗ ಆಕ್ಷೇಪ ವ್ಯಕ್ತಪಡಿಸಿತ್ತು. ಕ್ಷೇತ್ರ ಪುನರ್ ವಿಂಗಡಣೆಗೆ ಸಂಬಂಧಿಸಿದಂತೆ ಮಾರ್ಚ್ 1ರಂದು ಅಧಿಸೂಚನೆ ಹೊರಡಿಸಲಾಗಿದೆ. ಬಿಬಿಎಂಪಿ ಚುನಾವಣಾ ಸಂಬಂಧ ಸುಪ್ರೀಂ ಕೋರ್ಟ್ ಏಪ್ರಿಲ್ 1ರವರೆಗೆ ಕಾಲಾವಕಾಶ ನೀಡಿದೆ. ಅಷ್ಟರ ಒಳಗಾಗಿ ಮೀಸಲಾತಿ ಪಟ್ಟಿ ಸಿದ್ಧಪಡಿಸಲಾಗುವುದು ಎಂದು ಸರ್ಕಾರದ ಪರ ಹಾಜರಿದ್ದ ಅಡ್ವೋಕೇಟ್ ಜನರಲ್ ನ್ಯಾಯಾಲಯಕ್ಕೆ ಮಾಹಿತಿ ನೀಡಿದರು. ಮುಂದಿನ ಕ್ರಮಕ್ಕಾಗಿ ರಾಜ್ಯ ಚುನಾವಣಾ ಆಯೋಗಕ್ಕೆ ಸಲ್ಲಿಸಲಾಗುವುದು ಎಂದು ಮನವಿ ಮಾಡಿದರು.