i
ಮೈಸೂರಿನಲ್ಲಿ ಮಾ.18ಕ್ಕೆ ಕೆಯುಡಬ್ಲ್ಯೂಜೆ ದತ್ತಿ ಪ್ರಶಸ್ತಿ ಪ್ರದಾನ…
ಚಂದ್ರವಳ್ಳಿ ನ್ಯೂಸ್, ಮೈಸೂರು:
ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದಿಂದ ಕೊಡಮಾಡುವ ಕೆಯುಡಬ್ಲ್ಯೂಜೆ ದತ್ತಿ ಪ್ರಶಸ್ತಿ ಪ್ರದಾನ ಸಮಾರಂಭ ಮಾ.18 ರಂದು ಶನಿವಾರ ಬೆಳಿಗ್ಗೆ 10.35ಕ್ಕೆ ಮೈಸೂರು ರಾಜೇಂದ್ರ ಕಲಾ ಮಂದಿರದಲ್ಲಿನಡೆಯಲಿದೆ.
ಪ್ರಶಸ್ತಿ ಪ್ರದಾನ ಸಮಾರಂಭದ ಪೂರ್ವಸಿದ್ಧತೆ ಪರಿಶೀಲಿಸಿದ ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಡೆಸಬೇಕು ಎಂದು ಸೂಚಿಸಿದರು.
ಕಾರ್ಯಕ್ರಮ ನಡೆಯುವ ರಾಜೇಂದ್ರ ಕಲಾ ಭವನಕ್ಕೂ ಭೇಟಿ ನೀಡಿದ್ದ ಅವರು ಅಲ್ಲಿ ಆಗಬೇಕಾಗಿರುವ ಸಿದ್ಧತೆಗಳನ್ನು ಮೈಸೂರು ಜಿಲ್ಲಾ ಸಂಘದ ಪದಾಧಿಕಾರಿಗಳ ಗಮನಕ್ಕೆ ತಂದರು.
ವಸತಿ ವ್ಯವಸ್ಥೆ: ದತ್ತಿ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಆಗಮಿಸುವವರಿಗೆ ವಸತಿ ವ್ಯವಸ್ಥೆ ಕಲ್ಪಿಸುವುದು ಮುಖ್ಯ. ಇದಕ್ಕಾಗಿ ಜಿಲ್ಲಾ ಸಂಘ ಜವಾಬ್ದಾರಿಯಿಂದ ಕಾರ್ಯನಿರ್ವಹಣೆ ಮಾಡಬೇಕು ಎಂದರು.
ಇದೇ ಸಂದರ್ಭದಲ್ಲಿ ರಾಜ್ಯ ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ನಾರಾಯಣಗೌಡ ಅವರನ್ನು ಭೇಟಿ ಮಾಡಿ ಅವರ ಸಹಕಾರವನ್ನು ಕೋರಲಾಯಿತು. ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ನೀಡಿದ ಸಹಕಾರ ಮಾದರಿಯಲ್ಲಿ ಈ ಬಾರಿಯೂ ಸಹಕಾರ ಕೊಡಲಾಗುವುದು ಎಂದು ಅವರು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಮೈಸೂರು ಜಿಲ್ಲಾಧ್ಯಕ್ಷ ಎಸ್.ಟಿ.ರವಿಕುಮಾರ್, ಉಪಾಧ್ಯಕ್ಷ ಧರ್ಮಾಪುರ ನಾರಾಯಣ, ಪ್ರಧಾನ ಕಾರ್ಯದರ್ಶಿ ಎಂ.ಸುಬ್ರಮಣ್ಯ, ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ರಾಘವೇಂದ್ರ ಮತ್ತಿತರರು ಹಾಜರಿದ್ದರು.
ಕೃಷ್ಣಪ್ರಸಾದ್ ಅವರಿಗೆ ಆಹ್ವಾನ: ಇಂಡಿಯನ್ ಎಕ್ಸ್ಪ್ರೆಸ್, ಸಂಡೆ ಅಬ್ಸರ್ವರ್, ಟೈಮ್ಸ್ ಆಫ್ ಇಂಡಿಯಾ, ಬೆಂಗಳೂರು ಮಿರರ್ ಸೇರಿದಂತೆ ಹಲವು ಮಾಧ್ಯಮದಲ್ಲಿ ಸೇವೆ ಸಲ್ಲಿಸಿದ್ದಲ್ಲದೆ, ಒಬ್ಬ ಕನ್ನಡದ ಪತ್ರಕರ್ತನಾಗಿದ್ದು ದೆಹಲಿಯಲ್ಲಿ ಔಟ್ ಲುಕ್ ಪತ್ರಿಕೆಯ ಸಂಪಾದಕರಾಗಿ ಕಾರ್ಯನಿರ್ವಹಿಸಿದ ಹೆಗ್ಗಳಿಕೆ ಕೃಷ್ಣಪ್ರಸಾದ್ ಅವರದು. ಮೈಸೂರಿನಲ್ಲಿ ಅವರನ್ನು ಭೇಟಿ ಮಾಡಿದ ಕೆಯುಡಬ್ಲ್ಯೂಜೆ ಅಧ್ಯಕ್ಷ ಶಿವಾನಂದ ತಗಡೂರು ಅವರು, ಪ್ರಶಸ್ತಿ ಪ್ರದಾನ ಕಾರ್ಯಕ್ರಮಕ್ಕೆ ಆಹ್ವಾನಿಸಿದರು.
ಈ ಸಂದರ್ಭದಲ್ಲಿ ಮೈಸೂರು ಜಿಲ್ಲಾಧ್ಯಕ್ಷ ಎಸ್.ಟಿ.ರವಿಕುಮಾರ್, ಉಪಾಧ್ಯಕ್ಷ ಧರ್ಮಾಪುರ ನಾರಾಯಣ, ಪ್ರಧಾನ ಕಾರ್ಯದರ್ಶಿ ಎಂ.ಸುಬ್ರಮಣ್ಯ, ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ರಾಘವೇಂದ್ರ ಮತ್ತಿತರರು ಹಾಜರಿದ್ದರು.