i
ಗ್ರಾಪಂ, ತಾಪಂ, ಜಿಪಂಗಳಿಗೆ ಮತ್ತು ನಗರ ಸ್ಥಳೀಯ ಸಂಸ್ಥೆಗಳಿಗೆ ಓಬಿಸಿ ಪಟ್ಟಿ ವಿತರಣೆ- ಆಯೋಗದ ಅಧ್ಯಕ್ಷ ಹೆಗ್ಡೆ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಪರಿಷ್ಕೃತ ಹಿಂದುಳಿದ ವರ್ಗಗಳ ಪ್ರವರ್ಗಗಳ ಮೀಸಲಾತಿ ಪಟ್ಟಿಯನ್ನು ಮುದ್ರಿಸಿ ಆಯೋಗದಿಂದಲೇ ರಾಜ್ಯದ ಎಲ್ಲ ಗ್ರಾಪಂಗಳಿಗೆ ಮತ್ತು ನಗರ ಸ್ಥಳೀಯ ಸಂಸ್ಥೆಗಳಿಗೆ ವಿತರಿಸಲು ತೀರ್ಮಾನಿಸಲಾಗಿದೆ ಎಂದು ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ.ಜಯಪ್ರಕಾಶ ಹೆಗ್ಡೆ ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಈಗಾಗಲೇ ಕೆಲವು ಜಾತಿಗಳ ಹೆಸರು ಪರಿಶಿಷ್ಟ ಜಾತಿ/ಪಂಗಡ ಹಾಗೂ ಹಿಂದುಳಿದ ವರ್ಗಗಳ ಮೀಸಲಾತಿ ಪಟ್ಟಿಯಲ್ಲಿಯೂ ಸಹ ಸೇರ್ಪಡೆಗೊಂಡಿದ್ದು, ಇದರಿಂದ ಜಾತಿ ಪ್ರಮಾಣ ಪತ್ರ ನೀಡುವಲ್ಲಿ ಅಧಿಕಾರಿಗಳು ಗೊಂದಲವುಂಟು ಮಾಡುತ್ತಿರುವುದು ಆಯೋಗದ ಗಮನಕ್ಕೆ ಬಂದಿರುತ್ತದೆ. ಇಂತಹ ಜಾತಿಗಳನ್ನು ಹಿಂದುಳಿದ ವರ್ಗಗಳ ಪಟ್ಟಿಯಿಂದ ತೆಗೆದುಹಾಕಿ ಹಾಗೂ ಕೆಲವು ಜಾತಿಗಳ ಹೆಸರುಗಳಲ್ಲಿನ ಅಗತ್ಯ ಕಾಗುಣಿತ ತಿದ್ದುಪಡಿ ಮಾಡುವಲ್ಲಿಯೂ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.
ಹಿಂದುಳಿದ ವರ್ಗಗಳ ವಿವಿಧ ಜಾತಿ ಮತ್ತು ಉಪಜಾತಿಗಳಿಗೆ ಸೇರಿದ ಸರಕಾರಿ ನೌಕರರು ಹಾಗೂ ವಿದ್ಯಾರ್ಥಿಗಳ ಮಾಹಿತಿ ಒದಗಿಸುವಂತೆ 8 ತಿಂಗಳ ಹಿಂದೆಯೇ ಕೇಳಿಕೊಳ್ಳಲಾಗಿದ್ದು,ಇದುವರೆಗೆ ಶೇ.50ರಷ್ಟು ಮಾಹಿತಿ ಮಾತ್ರ ಬಂದಿದೆ;ಇನ್ನೂಳಿದ ಮಾಹಿತಿ ಬಂದಲ್ಲಿ ಯಾವ ಜಾತಿ ಯಾವ ಪ್ರಮಾಣದಲ್ಲಿ ಸರಕಾರಿ ಸೌಲಭ್ಯ ಪಡೆದುಕೊಂಡಿದ್ದಾರೆ ಮತ್ತು ಶಿಕ್ಷಣ ಪಡೆದಿದ್ದಾರೆ ಎಂಬುದು ಗೊತ್ತಾಗಲಿದೆ ಎಂದರು.
ಈ ಸಂದರ್ಭದಲ್ಲಿ ಆಯೋಗದ ಸದಸ್ಯರಾದ ಹೆಚ್.ಎಸ್.ಕಲ್ಯಾಣಕುಮಾರ್, ಬಿ.ಎಸ್.ರಾಜಶೇಖರ್, ಕೆ.ಟಿ.ಸುವರ್ಣ, ಅರುಣಕುಮಾರ್, ಶಾರದಾ ನಾಯ್ಕ ಇದ್ದರು.