i
ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಬಿ.ಕೆ.ರಹಮತ್ವುಲ್ಲಾ ಸ್ಪರ್ಧೆ ಖಚಿತ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಮಧ್ಯಕರ್ನಾಟಕದ ಬಯಲು ಸೀಮೆ ಅಭಿವೃದ್ದಿಯಲ್ಲಿ ತೀರ ಹಿಂದುಳಿದಿರುವ ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಅಭಿವೃದ್ದಿಗಾಗಿ ಹಿರಿಯ ನ್ಯಾಯವಾದಿ ಬಿ.ಕೆ.ರಹಮತ್ವುಲ್ಲಾರವರನ್ನು ಈ ಬಾರಿಯ ಚಿತ್ರದುರ್ಗ ವಿಧಾನಸಭಾ ಕ್ಷೇತ್ರದಿಂದ ಅಭ್ಯರ್ಥಿಯಾಗಿ ಚುನಾವಣಾ ಕಣಕ್ಕಿಳಿಸಲು ಕರ್ನಾಟಕ ಕೊಳಗೇರಿ ನಿವಾಸಿಗಳ ಸಂಯುಕ್ತ ಸಂಘಟನೆ ಸಭೆಯಲ್ಲಿ ಸರ್ವಾನುಮತದಿಂದ ತೀರ್ಮಾನಿಸಲಾಯಿತು.
ಕಳೆದ 38 ವರ್ಷಗಳಿಂದಲೂ ವಕೀಲ ವೃತ್ತಿಯಲ್ಲಿ ತೊಡಗಿರುವ ಬಿ.ಕೆ.ರಹಮತ್ವುಲ್ಲಾ ಸಮಾಜ ಸೇವೆಯಲ್ಲಿಯೂ ತಮ್ಮನ್ನು ತಾವು ತೊಡಗಿಸಿಕೊಂಡು ಬಡವರು, ಶೋಷಿತರು, ನಿರ್ಗತಿಕರು, ಕೊಳಗೇರಿಗಳು, ಅಲೆಮಾರಿ, ಅರೆಅಲೆಮಾರಿಗಳ ಪರವಾಗಿ ಅನೇಕ ಹೋರಾಟಗಳನ್ನು ನಡೆಸಿ ಸರ್ಕಾರ ಹಾಗೂ ಜಿಲ್ಲಾಡಳಿತದ ಗಮನ ಸೆಳೆದಿದ್ದಾರೆ. ಚಿತ್ರದುರ್ಗಕ್ಕೆ ಮೆಡಿಕಲ್ ಕಾಲೇಜು ಮಂಜೂರಾಗಿ ಹದಿಮೂರು ವರ್ಷಗಳಾಗಿದ್ದರೂ ೧೫೦ ಎಂ.ಬಿ.ಬಿ.ಎಸ್. ಸೀಟುಗಳ ದಾಖಲಾತಿ ಇನ್ನು ಆರಂಭವಾಗಿಲ್ಲ. ಕೊರೋನಾ ಸಂದರ್ಭದಲ್ಲಿ ಇಲ್ಲಿನ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್, ವೆಂಟಿಲೇಟರ್ ಇಲ್ಲದೆ ಅನೇಕರು ತಮ್ಮ ಪ್ರಾಣ ಬಲಿಕೊಡಬೇಕಾಯಿತು. ಭದ್ರಾಮೇಲ್ದಂಡೆ, ಚಿತ್ರದುರ್ಗ-ತುಮಕೂರು-ದಾವಣಗೆರೆ ನೇರ ರೈಲು ಮಾರ್ಗ ಯೋಜನೆ ಸೇರಿದಂತೆ ಜಿಲ್ಲೆಗೆ ಅನೇಕ ಮಹತ್ವಾಕಾಂಕ್ಷಿ ಯೋಜನೆಗಳಿಗಾಗಿ ಸಾಕಷ್ಟು ಹೋರಾಟ ನಡೆಸಬೇಕಾಗಿರುವುದರಿಂದ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಚಿತ್ರದುರ್ಗ ಕ್ಷೇತ್ರದಿಂದ ಅಭ್ಯರ್ಥಿಯಾಗಿ ಸ್ಪರ್ಧಿಸಲಿರುವ ಬಿ.ಕೆ.ರಹಮತ್ವುಲ್ಲಾರವರನ್ನು ಬೆಂಬಲಿಸುವಂತೆ ಕರ್ನಾಟಕ ಕೊಳಗೇರಿ ನಿವಾಸಿಗಳ ಸಂಯುಕ್ತ ಸಂಘಟನೆ ಜಿಲ್ಲಾ ಸಮಿತಿ ಅಧ್ಯಕ್ಷ ಗಣೇಶ್ ಕ್ಷೇತ್ರದ ಮತದಾರರಲ್ಲಿ ಮನವಿ ಮಾಡಿದ್ದಾರೆ.
ಕೊಳಗೇರಿ ನಿವಾಸಿಗಳು, ಅಲೆಮಾರಿ, ಅರೆಅಲೆಮಾರಿ ಸಮುದಾಯಗಳು ಸೇರಿದಂತೆ ಮೂಲಭೂತ ಸೌಲಭ್ಯಗಳಿಂದ ವಂಚಿತವಾಗಿರುವ ಸುಮಾರು ಹದಿನೇಳು ಸಾವಿರ ಕುಟುಂಬಗಳು ಚಿತ್ರದುರ್ಗ ವಿಧಾನಸಭಾ ಕ್ಷೇತ್ರದಲ್ಲಿದ್ದು, ಎಲ್ಲರ ಹಿತವನ್ನು ಗಮನದಲ್ಲಿಟ್ಟುಕೊಂಡು ಕರ್ನಾಟಕ ಕೊಳಗೇರಿ ನಿವಾಸಿಗಳ ಸಂಯುಕ್ತ ಸಂಘಟನೆ ಗೌರವಾಧ್ಯಕ್ಷರು ಆಗಿರುವ ಬಿ.ಕೆ.ರಹಮತ್ವುಲ್ಲಾರವರನ್ನು ಅಭ್ಯರ್ಥಿಯನ್ನಾಗಿ ಚುನಾವಣಾ ಕಣಕ್ಕಿಳಿಸುವ ನಿರ್ಧಾರ ಕೈಗೊಂಡಿದ್ದು, ಕ್ಷೇತ್ರದಲ್ಲಿ ರಾಜಕೀಯ ಬದಲಾವಣೆ ತರಬೇಕಾಗಿರುವುದು ನಮ್ಮ ಉದ್ದೇಶವಾಗಿದೆ.
ನಾಗರೀಕರ ಹಿತರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರು, ಚಿತ್ರದುರ್ಗ ವಕೀಲರ ಸಂಘದ ಮಾಜಿ ಅಧ್ಯಕ್ಷರು, ಜಿಲ್ಲಾ ವಕ್ಫ್ಬೋರ್ಡ್ ಮಾಜಿ ಚೇರ್ಮನ್, ಜಿಲ್ಲಾ ಮುಸ್ಲಿಂ ಹಾಸ್ಟೆಲ್ ಮಾಜಿ ಅಧ್ಯಕ್ಷ, ಜಿಲ್ಲಾ ಜಾಮಿಯಾ ಮಸೀದಿ ಮಾಜಿ ಆಡಳಿತಾಧಿಕಾರಿ, ಚಿತ್ರದುರ್ಗ ನಗರದ ಬಾರ್ಲೈನ್ ಮಸೀದಿ ಹಾಲಿ ಅಧ್ಯಕ್ಷರಾಗಿರುವ ಬಿ.ಕೆ.ರಹಮತ್ವುಲ್ಲಾರವರು ಯಾವುದೇ ಜಾತಿ ಧರ್ಮದ ತಾರತಮ್ಯವಿಲ್ಲದೆ ಎಲ್ಲಾ ವರ್ಗದವರ ಪ್ರೀತಿ ವಿಶ್ವಾಸ ಗಳಿಸಿದ್ದಾರೆ. ಕಳೆದ ವರ್ಷ ಜಿಲ್ಲಾಡಳಿತ ಇವರ ಸಮಾಜ ಸೇವೆಯನ್ನು ಗುರುತಿಸಿ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಹಾಗಾಗಿ ಚಿತ್ರದುರ್ಗ ವಿಧಾನಸಭಾ ಕ್ಷೇತ್ರದಿಂದ ಅಭ್ಯರ್ಥಿಯಾಗಿ ಸ್ಪರ್ಧಿಸಲು ಸಮರ್ಥರಿರುವುದರಿಂದ ಪ್ರಾದೇಶಿಕ ಇಲ್ಲವೇ ರಾಷ್ಟ್ರೀಯ ಪಕ್ಷಗಳು ಟಿಕೇzಟ್ ನೀಡಿ ಸ್ಪರ್ಧೆಗೆ ಅವಕಾಶ ಮಾಡಿಕೊಟ್ಟಲ್ಲಿ ಗೆಲುವಿಗೆ ಶ್ರಮಿಸುವುದಾಗಿ ಗಣೇಶ್ ತಮ್ಮ ಅನಿಸಿಕೆ ವ್ಯಕ್ತಪಡಿಸಿದ್ದಾರೆ.