
ಲೋಕಾಯುಕ್ತ ಬಲೆಗೆ ಬಿದ್ದಿದ್ದ ಇಂಜಿನಿಯರ್ ಗೆ 4 ವರ್ಷ ಜೈಲು ಶಿಕ್ಷೆ, 26 ಲಕ್ಷ ದಂಡ…
ಚಂದ್ರವಳ್ಳಿ ನ್ಯೂಸ್, ಮಂಗಳೂರು:
ಮಂಗಳೂರು ಸಮೀಪದ ಮುಲ್ಕಿ ನಗರ ಪಂಚಾಯತ್ ಜೂನಿಯರ್ ಇಂಜಿನಿಯರ್ ಆದಾಯಕ್ಕಿಂತ ಹೆಚ್ಚಿನ ಪ್ರಮಾಣದ ಆಸ್ತಿ ಹೊಂದಿರುವ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ದಂಡ ಸಹಿತ ಶಿಕ್ಷೆ ವಿಧಿಸಿ ಮಂಗಳೂರಿನ ನ್ಯಾಯಾಲಯ ಮಹತ್ವದ ಆದೇಶ ಹೊರಡಿಸಿ.
ಅಪರಾಧಿ ಜೂ.ಇಂಜಿನಿಯರ್ ಪದ್ಮನಾಭ ಅವರಿಗೆ 4 ವರ್ಷ ಸಾದಾ ಸಜೆ ಹಾಗೂ 26,50,000 ರೂ. ದಂಡ ವಿಧಿಸಿ ತೀರ್ಪು ನೀಡಿದೆ.
ಜೂ.ಇಂಜಿನಿಯರ್ ಪದ್ಮನಾಭ.ಎನ್.ಕೆ ಶಿಕ್ಷೆಗೊಳಗಾದವರು. ಅಪರಾಧಿಯ ಮನೆ, ಕಚೇರಿ ಮೇಲೆ ಲೋಕಾಯುಕ್ತ ಪೊಲೀಸರು 2015ರ ಫೆಬ್ರವರಿ ತಿಂಗಳಲ್ಲಿ ದಾಳಿ ನಡೆಸಿ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿರುವ ಕುರಿತು ಪ್ರಕರಣ ದಾಖಲಿಸಿ ತನಿಖೆ ನಡೆಸಿದ್ದರು.
ಪೊಲೀಸ್ ನಿರೀಕ್ಷಕ ನವೀನ್ ಚಂದ್ರ ಜೋಗಿ ಪ್ರಕರಣದ ತನಿಖೆ ಪೂರ್ಣಗೊಳಿಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿಯ ವರದಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ಕೈಗೆತ್ತಿಕೊಂಡ ಮಂಗಳೂರಿನ 3ನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯದ ನ್ಯಾಯಾಧೀಶೆ ಬಿ.ಬಿ.ಜಕಾತಿ, ಪದ್ಮನಾಭ ಮೇಲಿನ ಆರೋಪ ಸಾಬೀತಾಗಿದೆ ಎಂದು ತೀರ್ಪು ನೀಡಿ ಆದೇಶಿಸಿದರು.
ಅಪರಾಧಿ ಅಧಿಕಾರಿ ಪದ್ಮನಾಭಗೆ 4 ವರ್ಷ ಸಾದಾ ಸಜೆ ಹಾಗೂ ದಂಡ ವಿಧಿಸಿದ್ದಾರೆ. ದಂಡ ತೆರಲು ವಿಫಲನಾದಲ್ಲಿ ಮತ್ತೆ 6 ತಿಂಗಳ ಕಾಲ ಸಾದಾ ಸಜೆ ವಿಧಿಸಿ ಅಂತಿಮ ತೀರ್ಪು ಪ್ರಕಟಿಸಿದ್ದಾರೆ. ಸರ್ಕಾರದ ಪರ ಕರ್ನಾಟಕ ಲೋಕಾಯುಕ್ತ ಮಂಗಳೂರಿನ ವಿಶೇಷ ಸಾರ್ವಜನಿಕ ಅಭಿಯೋಜಕ ರವೀಂದ್ರ ಮುನ್ನಿಪಾಡಿ ವಾದ ಮಂಡಿಸಿದರು.