i
ಬಿಜೆಪಿ ಶಾಸಕ ಎನ್.ವೈ.ಗೋಪಾಲಕೃಷ್ಣ ರಾಜೀನಾಮೆ, ಕಾಂಗ್ರೆಸ್ನತ್ತ ಚಿತ್ತ…
ಚಂದ್ರವಳ್ಳಿ ನ್ಯೂಸ್, ಕೂಡ್ಲಿಗಿ:
ವಿಜಯನಗರ ಜಿಲ್ಲೆಯ ಕೂಡ್ಲಿಗಿ ಎಸ್ಟಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಎನ್.ವೈ. ಗೋಪಾಲಕೃಷ್ಣ ಅವರು ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ಸಿರ್ಸಿಯ ಗೃಹ ಕಚೇರಿಯಲ್ಲಿ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ, ಕಾಂಗ್ರೆಸ್ ಸೇರುವ ಅನೇಕ ಕುತೂಹಲಗಳಿಗೆ-ಊಹಾಪೋಹಗಳಿಗೆ ಅವಕಾಶ ನೀಡಿದ್ದಾರೆ.
ಮೂಲತಃ ಕಾಂಗ್ರೆಸ್ಸಿಗರಾಗಿರುವ ಎನ್.ವೈ.ಗೋಪಾಲಕೃಷ್ಣ ಅವರು ಮೊಳಕಾಲ್ಮುರು ಕ್ಷೇತ್ರದಿಂದ ನಾಲ್ಕು ಬಾರಿ, ಬಳ್ಳಾರಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ಸಿನಿಂದ ಸ್ಪರ್ಧಿಸಿ, ಗೆಲುವು ಸಾಧಿಸಿದ್ದರು.
ಬಿ. ನಾಗೇಂದ್ರ ಅವರು ಬಳ್ಳಾರಿ ಗ್ರಾಮೀಣ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದ ಕಾರಣ, ಜಿ. ಜನಾರ್ಧನರೆಡ್ಡಿ ಮತ್ತು ಬಿ. ಶ್ರೀರಾಮುಲು ಅವರ ಮಧ್ಯಸ್ಥಿಕೆಯಲ್ಲಿ ಬಿಜೆಪಿ ಸೇರಿ, ಕೂಡ್ಲಿಗಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಎನ್ವೈಕೆ ಶಾಸಕರಾಗಿದ್ದರು.
ವಯಸ್ಸಿನ ಕಾರಣ ಬಿಜೆಪಿ 2023ರ ವಿಧಾನಸಭಾ ಚುನಾವಣೆಯಲ್ಲಿ ತಮಗೆ ಟಿಕೆಟ್ ಸಿಗುವುದಿಲ್ಲ ಎಂದು ಮಾಹಿತಿ ಪಡೆದಿರುವ ಅವರು, ಸಿದ್ದರಾಮಯ್ಯ – ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ ಕಾಂಗ್ರೆಸ್ ಸೇರುವ ಕುರಿತು ಮಾತುಕತೆ ನಡೆಸಿದ್ದರು.
ಅಲ್ಲದೆ ಕಳೆದೊಂದು ತಿಂಗಳಿಂದ ಎನ್.ವೈ. ಗೋಪಾಲಕೃಷ್ಣ ಅವರು ಕಾಂಗ್ರೆಸ್ ಸೇರುವ ಕುರಿತು ವಿಜಯನಗರ ಜಿಲ್ಲೆಯಲ್ಲಿ ವ್ಯಾಪಕ ಚರ್ಚೆ ನಡೆದಿತ್ತು. ಆದರೆ, ಎನ್.ವೈ. ಗೋಪಾಲಕೃಷ್ಣ ಅವರು, ‘ನಾನು ಸಧ್ಯಕ್ಕೆ ಕಾಂಗ್ರೆಸ್ ಸೇರುವುದಿಲ್ಲ, ಯಾವ ಚುನಾವಣೆಯಲ್ಲೂ ಸ್ಪರ್ಧಿಸುವುದಿಲ್ಲ ಎಂದು ಸುದ್ದಿಗಾರರಿಗೆ ತಿಳಿಸಿದ್ದಾರೆ. ಮೊಳಕಾಲ್ಮೂರು ಎಸ್ಟಿ ಮೀಸಲು ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಎನ್.ವೈ. ಗೋಪಾಲಕೃಷ್ಣ ಅಥವಾ ಅವರ ಪುತ್ರ ಸ್ಪರ್ಧೆ ಮಾಡಲಿದ್ದರೆ ಎಂದು ಕಾಂಗ್ರೆಸ್ ಮೂಲಗಳು ಖಚಿತಪಡಿಸಿವೆ.
ಮಾಜಿ ಶಾಸಕ, ದಿವಂಗತ ಎನ್.ಟಿ. ಬೊಮ್ಮಣ್ಣ ಮತ್ತು ಲೋಕೇಶ್ ಅವರ ಮಧ್ಯೆ ಕೂಡ್ಲಿಗಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ಗಾಗಿ ತೀವ್ರ ಪೈಪೋಟಿ ನಡೆದಿದೆ.
ಡಾ. ಟಿ. ಶ್ರೀನಿವಾಸ್ ಅವರು ನೇತ್ರತಜ್ಞರಾಗಿದ್ದು, ತಂದೆಯ ನಿಧನದ ನಂತರ ಸಕ್ರಿಯ ರಾಜಕಾರಣಕ್ಕೆ ಬಂದು, ಕಾಂಗ್ರೆಸ್ ಟಿಕೆಟ್ಗಾಗಿ ಪ್ರಯತ್ನಿಸುತ್ತಿದ್ದಾರೆ. ಲೋಕೇಶ್ ಅವರು ಕೆಲ ವರ್ಷಗಳಿಂದ ಚುನಾವಣೆಯ ಗೀಳು ಅಂಟಿಸಿಕೊಂಡು ಕ್ಷೇತ್ರವನ್ನು ಸುತ್ತಾಡಿದ್ದಾರೆ.