i
ಪ್ರಧಾನ ಮಂತ್ರಿ ನರೇಂದ್ರ ಮೋದಿ ಏ.9 ರಂದು ರಾಜ್ಯಕ್ಕೆ ಆಗಮನ…
ಚಂದ್ರವಳ್ಳಿ ನ್ಯೂಸ್, ಗುಂಡ್ಲುಪೇಟೆ:
ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇದೇ ತಿಂಗಳ ಏ.9ರಂದು ಮೈಸೂರಿನಲ್ಲಿ ನಡೆಯಲಿರುವ ಪ್ರಾಜೆಕ್ಟ್ ಟೈಗರ್ ಸುವರ್ಣ ಮಹೋತ್ಸವದ ಸಮಾರಂಭದ ಬಳಿಕ ಪ್ರಸಿದ್ಧ ಬಂಡೀಪುರಕ್ಕೆ ಭೇಟಿ ನೀಡಲಿದ್ದಾರೆ.
ಮೈಸೂರಿನಿಂದ ಕಾರ್ಯಕ್ರಮ ಮುಗಿಸಿದ ಬಳಿಕ ಹೆಲಿಕಾಪ್ಟರ್ನಲ್ಲಿ ನೇರವಾಗಿ ಬಂಡೀಪುರಕ್ಕೆ ಪ್ರಧಾನಿ ಮೋದಿ ಬರಲಿದ್ದು ಬಂಡೀಪುರ ಅರಣ್ಯದಲ್ಲಿ ಸಫಾರಿ ನಡೆಸಲಿದ್ದಾರೆ. ಅರಣ್ಯ ಇಲಾಖೆ ಸಾಕಷ್ಟು ತಯಾರಿ ನಡೆಸುತ್ತಿದ್ದು ಬಂಡೀಪುರಕ್ಕೆ ಹೋಗುವ ಮಾರ್ಗದ ಮೇಲುಕಾಮನಹಳ್ಳಿ ಬಳಿಯ ಸಫಾರಿ ಕೇಂದ್ರದ ಬಳಿ ಹೆಲಿಪ್ಯಾಡ್ ಮಾಡಲಾಗುತ್ತಿದೆ. ಜೊತೆಗೆ ಹೆದ್ದಾರಿ ದುರಸ್ತಿ ಮಾಡಲಾಗುತ್ತಿದೆ ಎಂದು ಬಂಡೀಪುರ ಅರಣ್ಯ ಸಂರಕ್ಷಣಾಧಿಕಾರಿ ಡಾ.ಪಿ.ರಮೇಶ್ಕುಮಾರ್ ತಿಳಿಸಿದ್ದಾರೆ.
ಪ್ರಧಾನಿ ಮೋದಿ ಅವರು ಬಂಡೀಪುರಕ್ಕೆ ಭೇಟಿ ಕೊಡುವ ಸಾಧ್ಯತೆ ಇದ್ದು ಅರಣ್ಯ ಇಲಾಖೆ ಸಾಕಷ್ಟು ತಯಾರಿ ನಡೆಸಿದೆ ಎಂದು ತಿಳಿಸಿದ್ದಾರೆ.
ಐಜಿಪಿ ಪರಿಶೀಲನೆ: ಪ್ರಧಾನಿ ನರೇಂದ್ರ ಮೋದಿ ಅವರು ಬಂಡೀಪುರ ಭೇಟಿ ನೀಡಲಿರುವ ಹಿನ್ನಲೆಯಲ್ಲಿ ದಕ್ಷಿಣ ವಲಯದ ಐಜಿಪಿ ಮಧುಕರ್ ಪ್ರವೀಣ್ ಪವಾರ್ ಹೆಲಿಪ್ಯಾಡ್, ಕೆಕ್ಕನಹಳ್ಳಿ ಗಡಿ ಹಾಗೂ ಬೋಳುಗುಡ್ಡ ವೀಕ್ಷಣೆ ಮಾಡಿದರು. ಚಾಮರಾಜನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪದ್ಮಿನಿ ಸಾಹೂ ಅವರೊಂದಿಗೆ ಹೆಲಿಪ್ಯಾಡ್, ಕೆಕ್ಕನಹಳ್ಳಿ ಗಡಿ ಹಾಗೂ ಬಂಡೀಪುರ ವಲಯದ ಬೋಳುಗುಡ್ಡ ಖುದ್ದು ಸ್ಥಳ ಪರಿಶೀಲನೆ ನಡೆಸಿದರು. ಈ ಸಮಯದಲ್ಲಿ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉದೇಶ, ಡಿವೈಎಸ್ಪಿ ಪ್ರಿಯದರ್ಶಿನಿ ಸಾಣೆಕೊಪ್ಪ ಹಾಗೂ ಪೊಲೀಸ್ ಸಿಬ್ಬಂದಿ ಇದ್ದರು.