i
ಕೋಟೆ ನಾಡಿನ ಕಾಂಗ್ರೆಸ್ ಟಿಕೆಟ್ ಘೋಷಣೆ ಬೆನ್ನಲ್ಲೇ ಬಂಡಾಯದ ಹೊಗೆ…
ವರದಿ ಹೆಚ್.ಸಿ.ಗಿರೀಶ್, ಹರಿಯಬ್ಬೆ
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: congress candidate
ಕಾಂಗ್ರೆಸ್ ಚುನಾವಣಾ ಸಮಿತಿ ಅಳೆದು ತೂಗಿ 2 ನೇ ಪಟ್ಟಿ ಬಿಡುಗಡೆ ಮಾಡಿದ್ದು ಆ ಪಟ್ಟಿಯಲ್ಲಿ ಕೋಟೆ ನಾಡಿನ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ. ಆದರೆ ಘೋಷಣೆ ಮಾಡಿದ ಬೆನ್ನಲ್ಲೇ ಬಂಡಾಯದ ಹೊಗೆ ಕಾಣಿಸಿಕೊಂಡಿದ್ದು ಮೂರು ವಿಧಾನಸಭಾ ಕ್ಷೇತ್ರಗಳಲ್ಲೂ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದೆ.
ಕಾಂಗ್ರೆಸ್ ಮೊದಲ ಪಟ್ಟಿಯಲ್ಲಿ ಹಿರಿಯೂರು ಡಿ.ಸುಧಾಕರ್, ಚಳ್ಳಕೆರೆ ಟಿ.ರಘುಮೂರ್ತಿ, ಹೊಸದುರ್ಗ ಕ್ಷೇತ್ರಕ್ಕೆ ಬಿ.ಜಿ.ಗೋವಿಂದಪ್ಪ ಇವರುಗಳಿಗೆ ಕಾಂಗ್ರೆಸ್ ಚುನಾವಣಾ ಸಮಿತಿ ಟಿಕೆಟ್ ಘೋಷಣೆ ಮಾಡಿತ್ತು. ಆದರೆ ಹೊಳಲ್ಕೆರೆ, ಮೊಳಕಾಲ್ಮೂರು ಮತ್ತು ಚಿತ್ರದುರ್ಗ ವಿಧಾನಸಭಾ ಕ್ಷೇತ್ರಗಳಲ್ಲಿ ಟಿಕೆಟ್ ಗಾಗಿ ತೀವ್ರ ಪೈಪೋಟಿ ಎದುರಾಗಿದ್ದರಿಂದಾಗಿ ಕಾಂಗ್ರೆಸ್ ವರಿಷ್ಠರು ಅಳೆದು ತೂಗಿ ಎಚ್ಚರಿಕೆಯಿಂದ ಟಿಕೆಟ್ ಘೋಷಣೆ ಮಾಡಲಾಗಿದೆ.
ಚಿತ್ರದುರ್ಗ ಕ್ಷೇತ್ರ-
ಚಿತ್ರದುರ್ಗ ವಿಧಾನಸಭಾ ಕ್ಷೇತ್ರಕ್ಕೆ ಉದ್ಯಮಿ ವೀರೇಂದ್ರ ಪಪ್ಪಿಗೆ ಟಿಕೆಟ್ ಘೋಷಣೆ ಮಾಡಲಾಗಿದೆ. ತೀವ್ರ ಪೈಪೋಟಿ ನೀಡಿದ್ದ ಮಾಜಿ ವಿಧಾನ ಪರಿಷತ್ ಸದಸ್ಯ ರಘು ಆಚಾರ್ ಅವರಿಗೆ ಕೊನೆ ಕ್ಷಣದಲ್ಲಿ ಕಾಂಗ್ರೆಸ್ ಟಿಕೆಟ್ ಕೈ ತಪ್ಪಿದೆ. ಇದಲ್ಲದೆ ಮಾಜಿ ಶಾಸಕ ಎಸ್.ಕೆ.ಬಸವರಾಜನ್ ಕೂಡಾ ತೀವ್ರ ಪ್ರಯತ್ನ ಮಾಡಿದ್ದರೂ ಅವರಿಗೆ ಕಾಂಗ್ರೆಸ್ ವರಿಷ್ಠರು ಮಣೆ ಹಾಕಿಲ್ಲ. ಆದರೆ ಅವರ ನೆಡೆ ನಿಗೂಢವಾಗಿದ್ದು ಕಾರ್ಯಕರ್ತರ, ಅಭಿಮಾನಿಗಳ ಸಭೆ ಕರೆದು ತೀರ್ಮಾನ ಮಾಡುವುದಾಗಿ ಅವರು ಹೇಳುತ್ತಿದ್ದಾರೆ.
ಇತ್ತ ರಘು ಆಚಾರ್ ಮಾತ್ರ ಕಾಂಗ್ರೆಸ್ ವರಿಷ್ಠರ ವಿರುದ್ಧ ಸಿಡಿದೆದ್ದಾರೆ. ನನಗೆ ಕಾಂಗ್ರೆಸ್ ಟಿಕೆಟ್ ಕೈ ತಪ್ಪಿರುವ ಬಗ್ಗೆ ಬೇಸರವಿಲ್ಲ. ಆದರೆ ಸಣ್ಣ ಪುಟ್ಟ ಜಾತಿಗಳಿಗೆ ಕಾಂಗ್ರೆಸ್ ಸಾಮಾಜಿಕ ನ್ಯಾಯ ನೀಡುವಲ್ಲಿ ಸೋತಿದೆ. ದೇವರಾಜ ಅರಸು ಕಾಲದಲ್ಲಿ ಮಾತ್ರ ಕಾಂಗ್ರೆಸ್ ಪಕ್ಷದಿಂದ ಸಣ್ಣ, ಅತಿ ಸಣ್ಣ ಜಾತಿಗಳನ್ನು ಗುರುತಿಸಿ ಟಿಕೆಟ್ ನೀಡಿ ಗೆಲ್ಲಿಸಿಕೊಂಡು ಸಾಮಾಜಿಕ ನ್ಯಾಯ ನೀಡಲಾಗುತ್ತಿತ್ತು. ಆದರೆ ಇಂದು ಕಾಂಗ್ರೆಸ್ ಪಕ್ಷದಲ್ಲಿ ಆ ಕೆಲಸ ಆಗುತ್ತಿಲ್ಲ ಎಂದು ತೀವ್ರ ಅಸಮನಾಧಾನ ಹೊರ ಹಾಕಿದ್ದಾರೆ. ಜೊತೆಯಲ್ಲಿ ನನಗೆ ಕೈ ಟಿಕೆಟ್ ತಪ್ಪುವ ಮೂಲಕ ಕೋಟೆ ನಾಡಿನ 6 ವಿಧಾನಸಭಾ ಕ್ಷೇತ್ರಗಳು ಸೇರಿದಂತೆ ರಾಜ್ಯದ 25 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ವ್ಯತಿರಿಕ್ತ ಫಲಿತಾಂಶ ದೊರೆಯಲಿದೆ. ರಾಜ್ಯದಲ್ಲಿ 177ಕ್ಕೂ ಹೆಚ್ಚಿನ ಸಂಖ್ಯೆಯ ಸಣ್ಣ ಮತ್ತು ಅತಿ ಸಣ್ಣ ಜಾತಿಗಳು ಇದ್ದರೂ ಕಾಂಗ್ರೆಸ್ ಒಂದೇ ಒಂದು ಟಿಕೆಟ್ ಅನ್ನು ಅಂತಹ ಜಾತಿಗಳಿಗೆ ನೀಡದೆ ಅನ್ಯಾಯ ಮಾಡಿದೆ ಎಂದು ರಘು ಆಚಾರ್ ಅಸಮಾಧಾನ ಹೊರ ಹಾಕಿದರು.
ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧೆ- ಮುಂದಿನ ಎರಡು ದಿನಗಳಲ್ಲಿ ರಘು ಆಚಾರ್ ಅವರ ಮನೆ ದೇವರಾದ ತಿರುಪತಿ ತಿಮ್ಮಪ್ಪ ಸ್ವಾಮಿಗೆ ತೆರಳಿ ಪೂಜೆ ಮಾಡಿಸಿಕೊಂಡು ಬಂದ ನಂತರ ಕಾರ್ಯಕರ್ತರು, ಅಭಿಮಾನಿಗಳ ಸಭೆ ಕರೆದು ಅವರ ಅಭಿಪ್ರಾಯಗಳನ್ನು ಸಂಗ್ರಹ ಮಾಡಿ ತೀರ್ಮಾನ ಮಾಡುತ್ತೇನೆ. ಅಷ್ಟೇ ಅಲ್ಲ ಏ.17 ರಂದು ನಾನು ನಾಮಪತ್ರ ಸಲ್ಲಿಸುತ್ತೇನೆ. ಚುನಾವಣಾ ಕಣದಿಂದ ಯಾವುದೇ ಕಾರಣಕ್ಕೂ ಹಿಂದೆ ಸರಿಯುವುದಿಲ್ಲ ಎಂದು ಅವರು ಸ್ಪಷ್ಟ ಪಡಿಸಿದ್ದಾರೆ. ಇದರ ಜೊತೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳಿಂದಲೂ ಆಹ್ವಾನ ಬಂದಿದ್ದು ಅವರು ಇನ್ನೂ ಏನು ತೀರ್ಮಾನ ಮಾಡಿಲ್ಲ ಎನ್ನುವ ಮಾಹಿತಿ ಕೂಡಾ ಹರಿದಾಡುತ್ತಿದೆ. ಹೀಗಾಗಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿದರೆ ಕಾಂಗ್ರೆಸ್ ಪಕ್ಷಕ್ಕೆ ತೀವ್ರ ಹಿನ್ನಡೆಯಾಗುವ ಎಲ್ಲ ಸಾಧ್ಯತೆ ಇದೆ.
ಮೊಳಕಾಲ್ಮೂರು ಕ್ಷೇತ್ರ- ಬಿಜೆಪಿ ಪಕ್ಷ ಮತ್ತು ಶಾಸಕ ಸ್ಥಾನಕ್ಕೆ ದಿಢೀರ್ ರಾಜೀನಾಮೆ ನೀಡಿ ಸ್ವಂತ ಮನೆಗೆ ಮರಳಿರುವ ಎನ್.ವೈ.ಗೋಪಾಲಕೃಷ್ಣ ಇವರಿಗೆ ಮೊಳಕಾಲ್ಮೂರು ಕ್ಷೇತ್ರಕ್ಕೆ ಕಾಂಗ್ರೆಸ್ ಟಿಕೆಟ್ ಘೋಷಣೆ ಮಾಡಲಾಗಿದೆ. ಆದರೆ ಟಿಕೆಟ್ ಸಿಗುತ್ತದೆ ಎನ್ನುವ ಆಸೆಯಲ್ಲಿದ್ದ ಡಾ.ಯೋಗೇಶ್ ಬಾಬುಗೆ ಇದರಿಂದ ತೀವ್ರ ನಿರಾಸೆ ಆಗಿರುವುದಲ್ಲದೆ ಅವರ ನಡೆ ಕೂಡಾ ನಿಗೂಢವಾಗಿದೆ.
2018ರ ವಿಧಾನಸಭಾ ಚುನಾವಣೆಯಲ್ಲಿ ಸೋಲು ಕಂಡಿದ್ದ ಯೋಗೇಶ್ ಬಾಬು ಅಂದಿನಿಂದಲೂ ಕ್ಷೇತ್ರದ ಕಾರ್ಯಕರ್ತರೊಂದಿಗೆ ನಿಕಟ ಸಂಪರ್ಕ ಇಟ್ಟುಕೊಂಡು ಕಾಂಗ್ರೆಸ್ ಪಕ್ಷವನ್ನು ತಳ ಮಟ್ಟದಿಂದ ಕಟ್ಟಿದ್ದರು. ಆದರೆ ಕೊನೆ ಕ್ಷಣದಲ್ಲಿ ಅವರಿಗೆ ಕಾಂಗ್ರೆಸ್ ಟಿಕೆಟ್ ಕೈ ತಪ್ಪಿದ್ದು ಅವರು ಕೂಡಾ ಕಾರ್ಯಕರ್ತರು, ಅಭಿಮಾನಿಗಳ ಸಭೆ ಕರೆದು ಒಂದೆರಡು ದಿನಗಳಲ್ಲಿ ತಮ್ಮ ಅಭಿಪ್ರಾಯನ್ನು ಹಂಚಿಕೊಳ್ಳಲಿದ್ದಾರೆ ಎನ್ನುವ ಮಾತುಗಳು ಕೇಳಿ ಬರುತ್ತಿವೆ. ಈ ಕ್ಷೇತ್ರದಲ್ಲೂ ಬಂಡಾಯವಾಗಿ ಸ್ಪರ್ಧಿಸುವ ಸಾಧ್ಯತೆಯನ್ನೂ ತಳ್ಳಿ ಹಾಕುವಂತಿಲ್ಲ. ಕಾಂಗ್ರೆಸ್ ಪಕ್ಷ ಟಿಕೆಟ್ ಘೋಷಣೆ ಮಾಡುವ ಸಂದರ್ಭದಲ್ಲೇ ಅರ್ಧ ಕಾಂಗ್ರೆಸ್ ಸೋತಿರುತ್ತದೆ. ಘೋಷಣೆ ಮಾಡಿದ ನಂತರ ಸಂಪೂರ್ಣ ಸೋಲುತ್ತದೆ ಎನ್ನುವ ಮಾತುಗಳು ಕ್ಷೇತ್ರದಲ್ಲಿ ಕೇಳಿ ಬರುತ್ತಿರುವುದು ಗುಟ್ಟಾಗಿ ಉಳಿದಿಲ್ಲ.
ಹೊಳಲ್ಕೆರೆ ಕ್ಷೇತ್ರ- ಮಾಜಿ ಸಚಿವ ಹೆಚ್.ಆಂಜನೇಯ ಅವರಿಗೆ ಕಾಂಗ್ರೆಸ್ ಅಳೆದು ತೂಗಿ ಟಿಕೆಟ್ ಘೋಷಣೆ ಮಾಡಿದೆ. ಆಂಜನೇಯ ಅವರ ಅನುಭವ ಮತ್ತು ಖ್ಯಾತಿಗೆ 2ನೇ ಪಟ್ಟಿಯಲ್ಲಿ ಟಿಕೆಟ್ ಘೋಷಣೆ ಮಾಡಿದ್ದು ಮಾತ್ರ ವಿಪರ್ಯಾಸ ಎನ್ನಬಹುದಾಗಿದೆ.
ಇನ್ನೂ ಈ ಕ್ಷೇತ್ರದಲ್ಲಿ ಸವಿತಾ ರಘು ಅವರು ಸಾಕಷ್ಟು ಓಡಾಡಿ ಪಕ್ಷ ಸಂಘಟನೆ ಮಾಡಿದ್ದರು. ಅವರಿಗೆ ಯುವ ಕೋಟಾ ಮತ್ತು ಮಹಿಳಾ ಕೋಟಾದಡಿ ನೂರಷ್ಟು ಸಿಗಲಿದೆ ಎನ್ನುವ ವಿಶ್ವಾಸ ಇತ್ತು. ಆದರೆ ಕೊನೆ ಕ್ಷಣದಲ್ಲಿ ಪಕ್ಷ ಅವರಿಗೆ ಟಿಕೆಟ್ ನೀಡಿಲ್ಲ. ಹೀಗಾಗಿ ಸವಿತಾ ರಘು ಅವರು ಕೂಡಾ ಏ.7 ರಂದು ತಮ್ಮ ಅಭಿಮಾನಿಗಳ ಮತ್ತು ಕಾರ್ಯಕರ್ತರ ಸಭೆಯನ್ನು ಕರೆದಿದ್ದು ಕಾರ್ಯಕರ್ತರು, ಅಭಿಮಾನಿಗಳ ತೀರ್ಮಾನದಂತೆ ನಡೆದುಕೊಳ್ಳುವುದಾಗಿ ಅವರು ಸ್ಪಷ್ಟ ಪಡಿಸಿದ್ದಾರೆ. ಇದರ ಮಧ್ಯ ಜೆಡಿಎಸ್ ಪಕ್ಷದಿಂದ ಟಿಕೆಟ್ ತಂದು ಸ್ಪರ್ಧಿಸುವಂತೆ ಕೆಲ ಆಪ್ತರು ಅವರಿಗೆ ಒತ್ತಾಯಿಸುತ್ತಿದ್ದಾರೆ ಎನ್ನುವ ಮಾತು ಕೇಳಿ ಬಂದಿದೆ.
ಆದರೆ ಸಭೆಯ ನಂತರ ಅವರ ನಿಲುವೇನು ಎನ್ನುವುದು ಸ್ಪಷ್ಟವಾಗಲಿದೆ. ಒಟ್ಟಾರೆ ಕಾಂಗ್ರೆಸ್ ಪಕ್ಷ 2ನೇ ಪಟ್ಟಿ ಬಿಡುಗಡೆ ಮಾಡುತ್ತಿದ್ದಂತೆ ಟಿಕೆಟ್ ಆಕಾಂಕ್ಷಿಗಳ ನಡೆ ನಿಗೂಢವಾಗಿದ್ದು ಯಾವುದೇ ಸಂದರ್ಭದಲ್ಲಿ ಸ್ಫೋಟಗೊಳ್ಳುವ ಸಾಧ್ಯತೆ ತಳ್ಳಿ ಹಾಕುವಂತಿಲ್ಲ. ಒಂದು ವೇಳೆ ಬಂಡಾಯವಾಗಿ ಸ್ಪರ್ಧಿಸಿದರೆ ಇಡೀ ಜಿಲ್ಲೆಯ ಆರು ಕ್ಷೇತ್ರಗಳಲ್ಲಿ ಯಾರು ಗೆಲ್ಲುತ್ತಾರೆ, ಯಾರು ಸೋಲುತ್ತಾರೆ ಎನ್ನುವುದನ್ನು ಹೇಳಲು ಯಾರಿಂದಲೂ ಸಾಧ್ಯವಿಲ್ಲ.
ಆರು ಕ್ಷೇತ್ರಗಳಲ್ಲಿ ಚಳ್ಳಕೆರೆ ಕ್ಷೇತ್ರ ಹೊರೆತು ಪಡಿಸಿದರೆ ಉಳಿದ ಐದು ಕ್ಷೇತ್ರಗಳಲ್ಲಿ ಟಿಕೆಟ್ ಆಕಾಂಕ್ಷಿಗಳು ಹೆಚ್ಚಿನ ಸಂಖ್ಯೆಯಲ್ಲಿದ್ದರು. ಟಿಕೆಟ್ ಆಕಾಂಕ್ಷಿಗಳು ಯಾವ ತೀರ್ಮಾನ ತೆಗೆದುಕೊಳ್ಳುತ್ತಾರೆ ಎನ್ನುವುದರ ಮೇಲೆ ಕಾಂಗ್ರೆಸ್ ಅಭ್ಯರ್ಥಿಗಳ ಭವಿಷ್ಯ ನಿಂತಿದೆ.
ನಾನು ಕಾಂಗ್ರೆಸ್ ಪಕ್ಷದ ಟಿಕೆಟ್ ಪಡೆಯಲು ಬಯಸಿ ಆ ನಿಟ್ಟಿನಲ್ಲಿ ಪಕ್ಷದ ವರಿಷ್ಟರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದೆ ಕಾರಣಾಂತರದಿಂದ ನಮ್ಮ ಮನವಿಯನ್ನು ಪರಿಗಣಿಸಲಿಲ್ಲ ನನ್ನ ಮುಖಂಡರು, ಬೆಂಬಲಿಗರು ಹಿತೈಷಿಗಳ ಜೊತೆ ಚರ್ಚಿಸಿ ಮುಂದಿನ ನಿರ್ಧಾರ ಕೈಗೊಳ್ಳುವೆ.
ಎಸ್ ಕೆ ಬಸವರಾಜನ್,ಮಾಜಿ ಶಾಸಕರು ಚಿತ್ರದುರ್ಗ