i
ಭ್ರಷ್ಟ ಬಿಜೆಪಿ ತೊಲಗಿಸಲು ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಸನ್ನದ್ಧರಾಗಬೇಕು- ಉಮಾಪತಿ…
ಚಂದ್ರವಳ್ಳಿ ನ್ಯೂಸ್, ಹೊಳಲ್ಕೆರೆ:
ಭ್ರಷ್ಟ ಬಿಜೆಪಿ ತೊಲಗಿಸಲು ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಸನ್ನದ್ಧರಾಗಬೇಕಿದೆ ಎಂದು ಮಾಜಿ ಶಾಸಕ ಎ.ವಿ.ಉಮಾಪತಿ ಹೇಳಿದರು. ಪಟ್ಟಣದ ಪ್ರಸನ್ನ ಗಣಪತಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಸಹಸ್ರಾರು ಅಭಿಮಾನಿಗಳು ಹಾಗೂ ಕಾರ್ಯಕರ್ತರೊಡನೆ ಮೆರವಣಿಗೆ ನಡೆಸಿ ಮಾತನಾಡಿ ಅವರು, ಶಾಸಕ ಎಂ.ಚಂದ್ರಪ್ಪ ಮಾಡಿರುವ ಅಭಿವೃದ್ದಿ ಕೆಲಸಗಳು ಒಂದೂ ಕಣ್ಣಿಗೆ ಕಾಣುತ್ತಿಲ್ಲ. ರಾಜ್ಯ ಮತ್ತು ಕೇಂದ್ರದಲ್ಲಿ ಅಧಿಕಾರ ನಡೆಸುತ್ತಿರುವ ಭ್ರಷ್ಟ ಬಿಜೆಪಿ ಸರ್ಕಾರವನ್ನು ಕಿತ್ತೊಗೆಯಬೇಕಿದೆ ಎಂದು ಕರೆ ನೀಡಿದರು.
ಡಿ.ದೇವರಾಜ ಅರಸು, ಎಸ್.ಎಂ.ಕೃಷ್ಣ, ಸಿದ್ದರಾಮಯ್ಯ ಇವರುಗಳು ಮುಖ್ಯಮಂತ್ರಿಯಾಗಿದ್ದಾಗ ನೀಡಿದಂತ ಮಹತ್ತರ ಕೊಡುಗೆಗಳನ್ನು ಯಾರಿಂದಲೂ ನೀಡಲು ಸಾಧ್ಯವಿಲ್ಲ. ನಮ್ಮ ಪಕ್ಷ ಅಧಿಕಾರದಲ್ಲಿದ್ದಾಗ ಹೊಳಲ್ಕೆರೆ ತಾಲ್ಲೂಕಿನಾದ್ಯಂತ ತಾ.ಪಂ. ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನಗಳನ್ನು ಗೆದ್ದುಕೊಂಡಿದ್ದೆವು. ಹೆಚ್.ಆಂಜನೇಯರವರು ನಾಮಪತ್ರ ಸಲ್ಲಿಸುವ ದಿನದಂದು ಲಕ್ಷಾಂತರ ಸಂಖ್ಯೆಯಲ್ಲಿ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಭಾಗವಹಿಸಿ ಬೆಂಬಲಿಸುವಂತೆ ವಿನಂತಿಸಿದರು.
ಹೊಳಲ್ಕೆರೆ ಕ್ಷೇತ್ರದ ಅಭಿವೃದ್ಧಿಗೆ ಎಚ್.ಆಂಜನೇಯ ಸಚಿವರಾದಾಗ ಸಾವಿರಾರು ಕೋಟಿ ಅನುದಾನ ತಂದು ಸರ್ಕಾರಿ ಕಟ್ಟಡ, ವಸತಿ ಶಾಲೆಗಳು, ಆಸ್ಪತ್ರೆಗಳ ನಿರ್ಮಾಣ ಸೇರಿದಂತೆ ಅಗತ್ಯ ಸೌಕರ್ಯಗಳನ್ನು ಒದಗಿಸಿದರು. ಈಗಿನ ಶಾಸಕರು ಅಭಿವೃದ್ಧಿ ಕಾರ್ಯ ಮಾಡಿಲ್ಲ, ಇದನ್ನು ಕ್ಷೇತ್ರದ ಮತದಾರರಿಗೆ ತಿಳಿಯಪಡಿಸಬೇಕು. ಕಳೆದ ಬಾರಿ ನಮ್ಮಗಳ ಸ್ವಯಂಕೃತ ಅಪರಾಧದಿಂದ ಸೋಲಬೇಕಾಯಿತು. ಈ ಬಾರಿ ದಾಖಲೆ ಮತಗಳ ಅಂತದಿಂದ ಎಚ್.ಆಂಜನೇಯ ಅವರನ್ನು ಗೆಲ್ಲಿಸಬೇಕೆಂದು ಮನವಿ ಮಾಡಿದರು.
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಸಂಘಟಿತ ಕಾರ್ಮಿಕ ವಿಭಾಗದ ರಾಜ್ಯಾಧ್ಯಕ್ಷ ಜಿ.ಎಸ್.ಮಂಜುನಾಥ್ ಮಾತನಾಡಿ, ಶೋಷಿತರು, ದೀನ ದಲಿತರು, ಬಡವರು, ಹಿಂದುಳಿದವರು, ಅಲ್ಪಸಂಖ್ಯಾತರು ದೇಶದಲ್ಲಿ ನೆಮ್ಮದಿಯಾಗಿ ಬದುಕಬೇಕಾಗಿರುವುದರಿಂದ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಬೇಕು. ಅದಕ್ಕಾಗಿ ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಎಂ.ಚಂದ್ರಪ್ಪರನ್ನು ಸೋಲಿಸಿ ಹೆಚ್.ಆಂಜನೇಯವರನ್ನು ಗೆಲ್ಲಿಸಿ ಮತ್ತೊಮ್ಮೆ ಮಂತ್ರಿಯನ್ನಾಗಿ ಮಾಡುವ ಸಂಕಲ್ಪ ಮಾಡಬೇಕೆಂದರು.
ಕಾಂಗ್ರೆಸ್ ಪಕ್ಷದ ಜನಪರ ಯೋಜನೆಗಳನ್ನು ಬಿಜೆಪಿ ಅಳಿಸಿ ಹಾಕುತ್ತಿದೆ. ಯಾವುದೇ ಕಾರಣಕ್ಕೂ ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ಬಿಡಬಾರದು. ನಮ್ಮ ಪಕ್ಷದ ಸಾಧನೆಗಳನ್ನು ಪ್ರತಿ ಮನೆ ಮನೆಗೆ ಮುಟ್ಟಿಸಬೇಕು. ನಾನು ಕೂಡ ಟಿಕೇಟ್ ಆಕಾಂಕ್ಷಿಯಾಗಿದ್ದೆ. ಆದರೆ ಹೈಕಮಾಂಡ್ ತೆಗೆದುಕೊಂಡಿರುವ ನಿರ್ಧಾರವನ್ನು ಗೌರವಿಸಿ ಭಿನ್ನಾಭಿಪ್ರಾಯ ಬದಿಗೊತ್ತಿ ಎಲ್ಲರೂ ಒಗ್ಗಟ್ಟಾಗಿ ಅಭ್ಯರ್ಥಿ ಹೆಚ್.ಆಂಜನೇಯರವರನ್ನು ಗೆಲ್ಲಿಸಿಕೊಳ್ಳಲೇಬೇಕು. ಚುನಾವಣೆ ಮುಗಿಯುವತನಕ ಹಗಲು-ರಾತ್ರಿ ಜೊತೆಗಿದ್ದು, ಗೆಲುವಿಗಾಗಿ ಶ್ರಮಿಸುತ್ತೇನೆಂದು ಭರವಸೆ ನೀಡಿದರು.
ಮಾಜಿ ಸಚಿವ ಕಾಂಗ್ರೆಸ್ ಅಭ್ಯರ್ಥಿ ಎಚ್.ಆಂಜನೇಯ ಮಾತನಾಡಿ, ಹೊಳಲ್ಕೆರೆ ವಿಧಾನಸಭಾ ಕ್ಷೇತ್ರದ ಶಾಸಕ ಎಂ.ಚಂದ್ರಪ್ಪ ಕೆರೆಕಟ್ಟೆ, ಚೆಕ್ಡ್ಯಾಂಗಳನ್ನು ಕಟ್ಟಿಸಿದ್ದೇನೆಂದು ಹೇಳಿ ಕೋಟಿಗಟ್ಟಲೆ ಹಣ ಲೂಟಿ ಹೊಡೆದಿರುವುದೇ ಐದು ವರ್ಷದ ಸಾಧನೆ. ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿದ್ದಾಗ ಅನ್ನಭಾಗ್ಯ ಸೇರಿದಂತೆ ಅನೇಕ ಮಹತ್ವಾಕಾಂಕ್ಷಿ ಯೋಜನೆಯಗಳನ್ನು ಜಾರಿಗೆ ತಂದರು. ಈ ಕ್ಷೇತ್ರದ ಶಾಸಕ ಎಂ.ಚಂದ್ರಪ್ಪ ಮುನ್ನೂರು ಕೆರೆ ಕಟ್ಟೆಗಳನ್ನು ಕಟ್ಟಿಸಿದ್ದೇನೆಂದು ಕ್ಷೇತ್ರದ ಜನರಿಗೆ ಸುಳ್ಳು ಹೇಳುವುದನ್ನು ನಿಲ್ಲಿಸಿ ಮೊದಲು ಯಾವ ಊರಲ್ಲಿ ಕೆರೆ ನಿರ್ಮಿಸಲಾಗಿದೆ, ಎಷ್ಟು ಕೋಟಿ ಅನುದಾನದಲ್ಲಿ ಕೆರೆ ನಿರ್ಮಿಸಲಾಗಿದೆ ಎಂದು ಶ್ವೇತ ಪತ್ರ ಹೊರಡಿಸಲಿ ಎಂದು ಅವರು ಸವಾಲ್ ಹಾಕಿದರು.
ಬಡವರಿಗೆ ಮನೆ ಕೊಟ್ಟಿದ್ದಲ್ಲದೆ ರೈತರ ಸಾಲ ಮನ್ನ ಮಾಡಿದ್ದು, ಕಾಂಗ್ರೆಸ್ ಪಕ್ಷ. ಗುಣಮಟ್ಟದ ರಸ್ತೆಗಳನ್ನು ನಿರ್ಮಿಸಿ ಶಾಲಾ-ಕಾಲೇಜು, ಆಸ್ಪತ್ರೆಗಳನ್ನು ಕಟ್ಟಿಸಿದ್ದು, ನನ್ನ ಅಧಿಕಾರವಧಿಯಲ್ಲಿ ಎನ್ನುವುದನ್ನು ಕ್ಷೇತ್ರದ ಜನ ಮರೆಯಬಾರದು ಎಂದು ಆಂಜನೇಯ ಹೇಳಿದರು.
ಶಾಸಕ ಎಂ.ಚಂದ್ರಪ್ಪ ಕ್ಷೇತ್ರದಲ್ಲಿ ಎಲ್ಲಿಯೂ ಕೊಳವೆಬಾವಿ ಕೊರೆಯಿಸಲು ಮುಂದಾಗಿಲ್ಲ. ಕಾರಣ ಇದರಲ್ಲಿ ಹಣ ಲಪಟಾಯಿಸಲು ಆಗುವುದಿಲ್ಲವೆಂದು ರಸ್ತೆ, ಕೆರೆಕಟ್ಟೆಗಳಲ್ಲಿ ಕಮೀಷನ್ ತಿಂದು ತೇಗಿರುವುದು ಸಾಕು. ಹಾಗಾಗಿ ಮುಂದಿನ ತಿಂಗಳು ನಡೆಯುವ ಚುನಾವಣೆಯಲ್ಲಿ ನನ್ನನ್ನು ಬೆಂಬಲಿಸಿ ಆಶೀರ್ವದಿಸಿ ಎಂದು ಮನವಿ ಮಾಡಿದರು.
ಪಿ.ಎಲ್.ಡಿ.ಬ್ಯಾಂಕ್ ಅಧ್ಯಕ್ಷ ಶಿವಕುಮಾರ್, ಲಿಂಗವ್ವನಾಗತಿಹಳ್ಳಿ ತಿಪ್ಪೇಸ್ವಾಮಿ, ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಆರ್.ಕೃಷ್ಣಮೂರ್ತಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಟಿ.ಹನುಮಂತಪ್ಪ, ಎಂ.ಪ್ರಕಾಶ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರುಗಳಾದ ಶಿವಮೂರ್ತಿ, ಆರ್.ನರಸಿಂಹರಾಜ, ಲೋಹಿತ್ಕುಮಾರ್, ತಿಪ್ಪೇಸ್ವಾಮಿ, ರಂಗಸ್ವಾಮಿ, ಇಂದಿರಾ ಕಿರಣ್ಕುಮಾರ್ ಯಾದವ್, ನಗರ ಘಟಕದ ಅಧ್ಯಕ್ಷ ಮಜರ್ ಉಲ್ಲಾಖಾನ್, ಮಹಿಳಾ ಘಟಕದ ಅಧ್ಯಕ್ಷೆ ಅಂಬಿಕಾ, ಯೂತ್ ಕಾಂಗ್ರೆಸ್ ಅಧ್ಯಕ್ಷ ರಂಗಸ್ವಾಮಿ, ಮುಖಂಡರಾದ ಭಾರತಿ ಕಲ್ಲೇಶ್, ಗಿರಿಜಮ್ಮ ಬಸವರಾಜ್, ಚಿತ್ತಯ್ಯ, ಮಧುಪಾಲೇಗೌಡ ಉಪಸ್ಥಿತರಿದ್ದರು.