i
ಕಾಂಗ್ರೆಸ್ ವಿಕೆಟ್ ಪತನ, ಮಾಜಿ ಸಚಿವ ಮನೋಹರ್ ತಹಶೀಲ್ದಾರ್ ಜೆಡಿಎಸ್ ಸೇರ್ಪಡೆ…
ಚಂದ್ರವಳ್ಳಿ ನ್ಯೂಸ್, ಹಾವೇರಿ:
ಹಾವೇರಿ ಕಾಂಗ್ರೆಸ್ ಪಕ್ಷದಲ್ಲೂ ತೀವ್ರ ಅಸಮಾಧಾನ ಭುಗಿಲೆದ್ದಿದ್ದು ಕಾಂಗ್ರೆಸ್ ಪಕ್ಷದ ನಿಷ್ಠಾವಂತರಾದ ಮಾಜಿ ಸಚಿವ ಮನೋಹರ್ ತಹಶೀಲ್ದಾರ್ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿ ಜೆಡಿಎಸ್ ಪಕ್ಷ ಸೇರ್ಪಡೆಯಾಗಿದ್ದಾರೆ.
ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ನಲ್ಲೂ ಸಾಕಷ್ಟು ಅಸಮಾಧಾನ ಹೊಗೆಯಾಡುತ್ತಿದ್ದು ಚಿತ್ರದುರ್ಗ ಕ್ಷೇತ್ರಕ್ಕೆ ಕಾಂಗ್ರೆಸ್ ಟಿಕೆಟ್ ಸಿಗದ ಕಾರಣ, ಪಕ್ಷ ತೊರೆಯುವವ ಸಂಖ್ಯೆ ಹೆಚ್ಚಾಗಿದೆ. ಚಿತ್ರದುರ್ಗದ ಮಾಜಿ ಎಂಎಲ್ಸಿ ರಘು ಆಚಾರ್ ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳಿದ ಬೆನ್ನಲ್ಲೇ ಅವರು ಏ.14 ರಂದು ಜೆಡಿಎಸ್ ಸೇರ್ಪಡೆಯಾಗಲಿದ್ದಾರೆ. ಅಷ್ಟೇ ಚಿತ್ರದುರ್ಗ ವಿಧಾನಸಭಾ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ.
ಹಾವೇರಿಯಲ್ಲಿ ಮಾಜಿ ಸಚಿವ ಮನೋಹರ್ ತಹಶೀಲ್ದಾರ್ ಕೈಗೆ ಗುಡ್ ಬೈ ಹೇಳಿ, ಜೆಡಿಎಸ್ ಪಕ್ಷವನ್ನು ಸೇರ್ಪಡೆಗೊಂಡಿದ್ದಾರೆ.
ಹಾವೇರಿ ಜಿಲ್ಲೆಯ ಹಾನಗಲ್ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ವರಿಷ್ಠ ಹೆಚ್ ಡಿ ಕುಮಾರಸ್ವಾಮಿ ಸಮ್ಮುಖದಲ್ಲಿ ಕಾಂಗ್ರೆಸ್ ಮಾಜಿ ಸಚಿವ ಮನೋಹರ್ ತಹಶೀಲ್ದಾರ್ ಪಕ್ಷಕ್ಕೆ ರಾಜೀನಾಮೆ ಘೋಷಿಸಿ, ಜೆಡಿಎಸ್ ಸೇರ್ಪಡೆಗೊಂಡರು.
ಈ ವೇಳೆ ಮಾತನಾಡಿದ ಮನೋಹರ್ ತಹಶೀಲ್ದಾರ್, ಕಾಂಗ್ರೆಸ್ ಪಕ್ಷದಲ್ಲಿ 20 ವರ್ಷಗಳಿಂದ ದುಡಿದಿದ್ದೇನೆ. ನನಗೆ ಟಿಕೆಟ್ ನೀಡುತ್ತೇವೆ ಎಂದು ಹೇಳುತ್ತಲೇ ಬೇರೆಯವರಿಗೆ ಟಿಕೆಟ್ ನೀಡಿ ನನಗೆ ಅನ್ಯಾಯ ಮಾಡಿದ್ದಾರೆ. ನಾನು ಪಕ್ಷಕ್ಕಾಗಿ ತೋರಿದ ನಿಷ್ಠೆ ಮತ್ತು ನನ್ನ ಪಕ್ಷ ಸಂಘಟನೆಯ ಕೆಲಸವನ್ನು ಪಕ್ಷ ಗುರುತಿಸಲೇ ಇಲ್ಲ ಎಂದು ಬೇಸರ ವ್ಯಕ್ತ ಪಡಿಸಿದರು.
ನನಗೆ ಟಿಕೆಟ್ ನೀಡುತ್ತೇನೆ, ಅವಕಾಶ ಮಾಡಿಕೊಡುತ್ತೇನೆ ಅಂತ ಹೇಳಿ ಬೇರೆಯವರಿಗೆ ಟಿಕೆಟ್ ನೀಡಿದ್ದಾರೆ. ಹೀಗಾಗಿ ನಾನು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎನ್ನುತ್ತಲೇ ಮನೋಹರ್ ತಹಶೀಲ್ದಾರ್ ವೇದಿಕೆ ಮೇಲೆಯೇ ಬಿಕ್ಕಿ ಬಿಕ್ಕಿ ಕಣ್ಣೀರಿಟ್ಟರು.
ಮುಂದುವರೆದು ಮಾತನಾಡಿ ಮನೋಹರ್ ತಹಶೀಲ್ದಾರ್, ಜೆಡಿಎಸ್ ಪಕ್ಷ ನನಗೆ ರಾಜಕೀಯವಾಗಿ ಪುನರ್ಜನ್ಮ ನೀಡಿದೆ. ಈ ಹಿನ್ನಲೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ತೊರೆದು, ಜೆಡಿಎಸ್ ಸೇರ್ಪಡೆಗೊಳ್ಳುತ್ತಿದ್ದೇನೆ ಎಂದು ಭಾವುಕರಾದರು.