i
ಬೇಸಿಗೆ ರಜೆ ಇದ್ದರೂ ಮಕ್ಕಳಿಗೆ ವಿಶೇಷ ತರಗತಿ, ವರದಿ ಕೇಳಿದ ಮಕ್ಕಳ ಹಕ್ಕುಗಳ ಆಯೋಗ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೇಸಿಗೆ ರಜೆಯಲ್ಲಿ ಕೆಲವು ಖಾಸಗಿ ಶಾಲೆಗಳಲ್ಲಿ 9 ರಿಂದ 10ನೇ ತರಗತಿ ಸೇರಿದಂತೆ ಮತ್ತಿತರ ಮಕ್ಕಳಿಗೆ ವಿಶೇಷ ತರಗತಿ ಮತ್ತು ಬೇಸಿಗೆ ಶಿಬಿರದ ಮೂಲಕ ಮಕ್ಕಳ ಹಕ್ಕುಗಳಿಗೆ ಧಕ್ಕೆ ತರುತ್ತಿದ್ದು ಇದರಿಂದ ಎಚ್ಚೆತ್ತುಕೊಂಡಿರುವ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿಯಿಂದ ವರದಿ ಕೇಳಿದೆ.
ಸಿಬಿಎಸ್ಇಗೆ ಸಂಯೋಜಿತವಾದ ಕೆಲವು ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಬೇಸಿಗೆ ರಜೆಯಲ್ಲಿಯೂ 10ನೇ ತರಗತಿಗೆ ವಿದ್ಯಾರ್ಥಿಗಳಿಗೆ ತರಗತಿ ನಡೆಸುತ್ತಿರುವ ಕುರಿತು ಮಕ್ಕಳ ಹಕ್ಕುಗಳ ಕಾರ್ಯಕರ್ತರು ದೂರು ನೀಡಿದ್ದು, ಈ ಹಿನ್ನೆಲೆಯಲ್ಲಿ ಸಿಬಿಎಸ್ಇ ಪ್ರಾದೇಶಿಕ ಕಚೇರಿಗೆ ಪತ್ರ ಬರೆದ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ 7 ದಿನಗಳಲ್ಲಿ ವರದಿ ನೀಡುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದೆ.
ಬೇಸಿಗೆ ರಜೆ ಇದ್ದರೂ ತರಗತಿಗೆ ಹಾಜರಾಗುವಂತೆ ಶಾಲೆಗಳು ಮಕ್ಕಳು ಮತ್ತು ಪೋಷಕರ ಮೇಲೆ ಒತ್ತಡ ಹೇರುವ ಮೂಲಕ ಮಕ್ಕಳ ಹಕ್ಕುಗಳನ್ನು ಉಲ್ಲಂಘಿಸುತ್ತಿದ್ದು, ಈ ಬಗ್ಗೆ ಕ್ರಮಕೈಗೊಳ್ಳಬೇಕೆಂದು ಮಕ್ಕಳ ಹಕ್ಕುಗಳ ಕಾರ್ಯಕರ್ತ ವಾಸುದೇವ ಶರ್ಮಾ ಅವರು ಆಯೋಗಕ್ಕೆ ಪತ್ರ ಬರೆದು ದೂರು ಸಲ್ಲಿಸಿದ್ದನ್ನು ಸ್ಮರಿಸಬಹುದಾಗಿದೆ.