i
ಮಾಜಿ ಎಂಎಲ್ಸಿ ರಘು ಆಚಾರ್, ಡಾ.ಯೋಗೇಶ್ ಬಾಬು, ಆನಂದಪ್ಪ, ಎಚ್.ಆರ್ ತಿಮ್ಮಯ್ಯ ಹಲವರು ಜೆಡಿಎಸ್ ಸೇರ್ಪಡೆ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕೋಟೆ ನಾಡಿನ ಬಿಜೆಪಿ ಕಾಂಗ್ರೆಸ್ ಮುಖಂಡರುಗಳು ಮಾಜಿ ವಿಧಾನ ಪರಿಷತ್ ಸದಸ್ಯರು ಸೇರಿ ಇಂದು ಬೆಂಗಳೂರಿನ ಜೆಡಿಎಸ್ ಕಚೇರಿಯ ಜೆಪಿ ಸಭಾಂಗಣದಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ ಇಬ್ರಾಹಿಂ, ವಿಧಾನ ಪರಿಷತ್ ಸದಸ್ಯ ಶರವಣ ಮತ್ತಿತರ ಸಮ್ಮುಖದಲ್ಲಿ ಅಪಾರ ಬೆಂಬಲಿಗರೊಂದಿಗೆ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾದರು.
ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿ ಅರ್ಜಿ ಸಲ್ಲಿಸಿದ್ದ, ಎರಡು ಸಲ ಚಿತ್ರದುರ್ಗ-ದಾವಣಗೆರೆ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ ಗೆ ಆಯ್ಕೆಯಾಗಿದ್ದ ಮಾಜಿ ವಿಧಾನ ಪರಿಷತ್ ಸದಸ್ಯ ಜಿ.ರಘು ಆಚಾರ್ ಅವರು ತಮ್ಮ ಅಪಾರ ಬೆಂಬಲಿಗರೊಂದಿಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ ಇಬ್ರಾಹಿಂ, ವಿಧಾನ ಪರಿಷತ್ ಸದಸ್ಯ ಶರವಣ ಮತ್ತಿತರ ಸಮ್ಮುಖದಲ್ಲಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾದರು.
ಇವರುಗಳಿಗೆ ಜೆಡಿಎಸ್ ಭಾವುಟ ನೀಡಿ, ಜೆಡಿಎಸ್ ಶಾಲು ಹೊದಿಸಿ ಪಕ್ಷಕ್ಕೆ ಕುಮಾರಸ್ವಾಮಿ, ಸಿಎಂ ಇಂಬ್ರಾಹಿಂ ಅವರು ಬರ ಮಾಡಿಕೊಂಡರು.
ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಡಾ.ಯೋಗೇಶ್ ಬಾಬು ತಮ್ಮ ಅಪಾರ ಬೆಂಬಲಿಗರೊಂದಿಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ ಇಬ್ರಾಹಿಂ, ವಿಧಾನ ಪರಿಷತ್ ಸದಸ್ಯ ಶರವಣ ಮತ್ತಿತರ ಸಮ್ಮುಖದಲ್ಲಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾದರು.
ಇತ್ತೀಚೆಗೆ ಬಿಜೆಪಿ ಶಾಸಕ ಎನ್.ವೈ.ಗೋಪಾಲಕೃಷ್ಣ ಅವರು ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷ ಸೇರಿದ್ದರು. ಪಕ್ಷ ಸೇರಿದ ಬೆನ್ನಲ್ಲೇ ಕಾಂಗ್ರೆಸ್ ಹೈ ಕಮಾಂಡ್ ಅವರಿಗೆ ಟಿಕೆಟ್ ಘೋಷಣೆ ಮಾಡಿತು. ಇದರಿಂದ ಮನನೊಂದಿದ್ದ ಡಾ.ಯೋಗೇಶ್ ಬಾಬು ಅವರು ಬೆಂಗಳೂರಿನಲ್ಲಿ ತಮ್ಮ ಅಪಾರ ಬೆಂಬಲಿಗರೊಂದಿಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ ಇಬ್ರಾಹಿಂ, ವಿಧಾನ ಪರಿಷತ್ ಸದಸ್ಯ ಶರವಣ ಮತ್ತಿತರ ಸಮ್ಮುಖದಲ್ಲಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗಲು ಆಗಮಿಸಿದ್ದರು. ಆದರೆ ಸಕಾಲದಲ್ಲಿ ಅಭ್ಯರ್ಥಿ ಯೋಗೇಶ್ ಬಾಬು ಕಾರ್ಯಕ್ರಮಕ್ಕೆ ಸೇರ್ಪಡೆಯಾಗಲು ಆಗಮಿಸದಿದ್ದಾಗ ಅವರ ಬೆಂಬಲಿಗರಾಗಿ ಬಂದಿದ್ದ ನಾಗೀರೆಡ್ಡಿ, ಯತ್ನಟ್ಟಿ ಗೌಡ ಮತ್ತಿತರರು ಜೆಡಿಎಸ್ ಸೇರ್ಪಡೆಯಾಗಲಿದ್ದಾರೆ ಎಂದು ತಿಳಿಸಿದ್ದಾರೆಂದು ಅವರು ಹೇಳಿದರು.
ಡಾ.ಯೋಗೇಶ್ ಬಾಬು ಅವರು ಜೆಡಿಎಸ್ ಪಕ್ಷ ಸೇರ್ಪಡೆಗೂ ಮುನ್ನ ರಘು ಆಚಾರ್ ಅವರೊಂದಿಗೆ ಸಾಕಷ್ಟು ಚರ್ಚಿಸಿದ ನಂತರ ಜೆಡಿಎಸ್ ನಾಯಕ ಕುಮಾರಸ್ವಾಮಿ ಸಂಪರ್ಕಿಸಿ ಮಾತುಕತೆ ನಡೆಸಿ ಅಂತಿಮವಾಗಿ ಅವರು ತಮ್ಮ ಆಪ್ತ ಬೆಂಬಲಿಗರೊಂದಿಗೆ ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳಿ ಜೆಡಿಎಸ್ ಪಕ್ಷ ಸೇರ್ಪಡೆಯಾದರು.
ಇತ್ತೀಚೆಗೆ ಬಿಜೆಪಿ ಟಿಕೆಟ್ ಸಿಗಲಿದೆ ಎನ್ನುವ ಉದ್ದೇಶದಿಂದ ಜೆಡಿಎಸ್ ಪಕ್ಷದಿಂದ ಬಿಜೆಪಿ ಪಕ್ಷಕ್ಕೆ ವಲಸೆ ಹೋಗಿದ್ದ ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದ ಜೆಡಿಎಸ್ ಮುಖಂಡ ಯತ್ನಟ್ಟಿ ಗೌಡ ಮತ್ತು ಅಪಾರ ಬೆಂಬಲಿಗರೊಂದಿಗೆ ಮತ್ತೆ ಜೆಡಿಎಸ್ ಸೇರ್ಪಡೆಯಾಗುವ ಮರಳಿ ಮನೆಗೆ ವಾಪಸ್ ಆಗಿದ್ದಾರೆ.
ಹಿರಿಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಮುಖಂಡ ಹಾಗೂ ತಾಲೂಕು ಕೃಷಿಕ ಸಮಾಜದ ಅಧ್ಯಕ್ಷ ಎಚ್.ಆರ್ ತಿಮ್ಮಯ್ಯ ಅವರು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ ಇಬ್ರಾಹಿಂ, ವಿಧಾನ ಪರಿಷತ್ ಸದಸ್ಯ ಶರವಣ ಮತ್ತಿತರ ಸಮ್ಮುಖದಲ್ಲಿ ಜೆಡಿಎಸ್ ಸೇರ್ಪಡೆ ಆಗಿದ್ದಾರೆ.
ಪಕ್ಷ ಸೇರ್ಪಡೆ ಸಂದರ್ಭದಲ್ಲಿ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಡಿ.ಯಶೋಧರ, ಟೌನ್ ಸೊಸೈಟಿ ಅಧ್ಯಕ್ಷ ಎಚ್.ಎಸ್.ಹನುಮಂತರಾಯ ಕಂಪ್ಯೂಟರ್, ನಿವೃತ್ತ ಮುಖ್ಯ ಇಂಜಿನಿಯರ್ ಎಂ.ರವೀಂದ್ರಪ್ಪ ಸೇರಿದಂತೆ ಜಿಲ್ಲಾ ಜೆಡಿಎಸ್ ಮತ್ತು ಹಿರಿಯೂರು ತಾಲೂಕು ಜೆಡಿಎಸ್ ಪಕ್ಷದ ಸಮಿತಿಯ ವಿವಿಧ ಪದಾಧಿಕಾರಿಗಳು ಹಾಜರಿದ್ದರು.
ನಂತರ ಮಾತನಾಡಿದ ಎಚ್.ಆರ್.ತಿಮ್ಮಯ್ಯ, ಉತ್ತರ ಕರ್ನಾಟಕ, ಮಧ್ಯ ಕರ್ನಾಟಕ, ಉತ್ತರ ಕನ್ನಡ ಭಾಗದ ಹಲವು ಬಿಜೆಪಿ, ಕಾಂಗ್ರೆಸ್ ನಾಯಕರುಗಳು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದು ಈ ಬಿಡುವಿಲ್ಲದ ಕಾರ್ಯಕ್ರಮದಲ್ಲಿ ಕೋಟೆ ನಾಡಿನಿಂದ ರಘು ಆಚಾರ್, ಯತ್ನಟ್ಟಿ ಗೌಡ, ಡಾ.ಯೋಗೇಶ್ ಬಾಬು ಸೇರಿದಂತೆ ಮತ್ತಿತರ ಮುಖಂಡರುಗಳು ದೊಡ್ಡ ಸಂಖ್ಯೆಯಲ್ಲಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದೇವೆ. ಭವಿಷ್ಯದಲ್ಲಿ ಚಿತ್ರದುರ್ಗ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷವನ್ನು ಪುನರುಜ್ಜೀವನಗೊಳಿಸಲು ಎಲ್ಲ ರೀತಿಯಿಂದ ಶ್ರಮ ಹಾಕುವುದಾಗಿ ಹೇಳಿದರು.
ಅಲ್ಲದೆ ಹಿರಿಯೂರು ಜೆಡಿಎಸ್ ಭದ್ರಾ ಕೋಟೆಯಾಗಿದ್ದು ಈಗ ಛಿದ್ರವಾಗಿದೆ. ಈ ಕೋಟೆಯನ್ನು ಮತ್ತೆ ಪುನರುತ್ಥಾನಗೊಳಿಸಲು ಪ್ರಮಾಣಿಕವಾಗಿ ಶ್ರಮಿಸುವುದಾಗಿ ಹೇಳಿದರು.
ಇಡೀ ರಾಜ್ಯದಲ್ಲಿ ಜೆಡಿಎಸ್ ಪಕ್ಷಕ್ಕೆ ಅಪಾರದ ಅಲೆ ಇದ್ದು ಕುಮಾರಸ್ವಾಮಿ ಮುಖ್ಯಮಂತ್ರಿ ಆಗುವುದರಲ್ಲಿ ಯಾವುದೇ ಅನುಮಾನವಿಲ್ಲ. ಅದೇ ರೀತಿ ಕೋಟೆ ನಾಡಿನಿಂದಲೂ ಕುಮಾರಣ್ಣನವರ ಕೈ ಬಲ ಪಡಿಸಲು ಕೊಡುಗೆ ನೀಡುವುದಾಗಿ ಅವರು ಭರವಸೆ ನೀಡಿದರು.
ಮಾಜಿ ವಿಧಾನ ಪರಿಷತ್ ಸದಸ್ಯ ಜಿ.ರಘು ಆಚಾರ್ ಜೆಡಿಎಸ್ ಪಕ್ಷ ಸೇರ್ಪಡೆಯಾದ ನಂತರ ಚಂದ್ರವಳ್ಳಿ ಪತ್ರಿಕೆಯೊಂದಿಗೆ ಮಾತನಾಡಿ, ಚಿತ್ರದುರ್ಗ ಜಿಲ್ಲೆಯ 6 ಕ್ಷೇತ್ರಗಳಲ್ಲಿ ಜೆಡಿಎಸ್ ಗೆಲ್ಲಿಸಲಾಗುತ್ತದೆ. ಕಾಂಗ್ರೆಸ್ ಪಕ್ಷ ಧೂಳೀಪಟವಾಗಲಿದೆ. ಸಾಮಾಜಿಕ ನ್ಯಾಯದ ಅಂದಿನ ಕಾಂಗ್ರೆಸ್ ಪಕ್ಷ ಎಲ್ಲಿ, ಇಂದಿನ ಕಾಂಗ್ರೆಸ್ ಪಕ್ಷ ಎಲ್ಲಿ ಎಂದು ಪ್ರಶ್ನಿಸಿದ ಆಚಾರ್, 197 ಸಣ್ಣ ಪುಟ್ಟ ಜಾತಿಗಳಿಗೆ ಒಂದೇ ಒಂದು ಟಿಕೆಟ್ ನೀಡಿಲ್ಲ, ಸಣ್ಣಪುಟ್ಟ ಜಾತಿಗಳು ಸೇರಿದಂತೆ ಎಲ್ಲರೂ ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸಲಿದ್ದಾರೆಂದು ಹೇಳಿದರು.
ತಿಪ್ಪಾರೆಡ್ಡಿ ಆಶೀರ್ವಾದ ಪಡೆದ-ಬಿಜೆಪಿ ಶಾಸಕ ಜಿ.ಎಚ್.ತಿಪ್ಪಾರೆಡ್ಡಿ ಅವರ ಮನೆಗೆ ನಾನು ಮತ್ತು ಪತ್ನಿ ಅವರು ಭೇಟಿ ನೀಡಿ ಕಾಲಿಗೆ ನಮಸ್ಕರಿಸಿ ಆಶೀರ್ವಾದಿಸಿ ಎಂದು ಕೋರಿದ್ದೇನೆ. ಅವರು ಹಿರಿಯರು, ನಗು ನಗುತ್ತಲೇ ನಮಗೆ ಆಶೀರ್ವಾದಿಸಿದ್ದಾರೆ ಎಂದು ರಘು ಆಚಾರ್ ತಿಳಿಸಿದ್ದಾರೆ.
ಚಿತ್ರದುರ್ಗ ಜಿಲ್ಲೆಯಿಂದ ನಾಲ್ಕು ಅಭ್ಯರ್ಥಿಗಳನ್ನು ಗೆಲ್ಲಿಸಿಕೊಂಡು ಬಂದು ಜೆಡಿಎಸ್ ಸರ್ಕಾರ ರಚನೆಗೆ ಮತ್ತು ಕುಮಾರಸ್ವಾಮಿ ಅವರು ಸಿಎಂ ಆಗಲು ಕೊಡುಗೆ ನೀಡುವುದಾಗಿ ರಘು ಆಚಾರ್ ಭರವಸೆ ನೀಡಿದರು.
ದಾವಣಗೆರೆ ಮಾಯಕೊಂಡ ಕ್ಷೇತ್ರಕ್ಕೆ ಆನಂದಪ್ಪ-
ದಾವಣಗೆರೆ ಜಿಲ್ಲೆಯ ಮಾಯಕೊಂಡ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದ ಭೋವಿ ಸಮಾಜದ ಮುಖಂಡರಾದ ಆನಂದಪ್ಪ ಅವರು ತಮ್ಮ ಅಪಾರ ಬೆಂಬಲಿಗರೊಂದಿಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ ಇಬ್ರಾಹಿಂ, ವಿಧಾನ ಪರಿಷತ್ ಸದಸ್ಯ ಶರವಣ ಮತ್ತಿತರ ಸಮ್ಮುಖದಲ್ಲಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾದರು. ಅಲ್ಲದೆ ಮಾಯಕೊಂಡ ಕ್ಷೇತ್ರಕ್ಕೆ ಅವರಿಗೆ ಟಿಕೆಟ್ ನೀಡುವುದಾಗಿ ಭರವಸೆ ನೀಡಲಾಗಿದೆ ಎಂದು ಜಿಲ್ಲಾ ಜೆಡಿಎಸ್ ಅಧ್ಯಕ್ಷ ಯಶೋಧರ್ ಮಾಹಿತಿ ನೀಡಿದ್ದಾರೆ.
ದಾವಣಗೆರೆ ಜಿಲ್ಲೆಯ ಬಿಜೆಪಿ-ಕಾಂಗ್ರೆಸ್ ಪಕ್ಷಗಳ ಮುಖಂಡರಾದ ಸವಿತಾ ಬಾಯಿ, ವೈ.ರಾಮಪ್ಪ ಸೇರಿದಂತೆ ಅಪಾರ ಸಂಖ್ಯೆಯಲ್ಲಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.