i
ಬಿಜೆಪಿ ಕಾಂಗ್ರೆಸ್ ನಡೆಗೆ ಭೋವಿ ಗುರುಪೀಠ ಕೆಂಡ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳು ಭೋವಿ ಸಮುದಾಯದ ಕೆಲ ಶಾಸಕರಿಗೆ ಟಿಕೆಟ್ ನೀಡದಿರುವ ಹಿನ್ನೆಲೆಯಲ್ಲಿ ಚಿತ್ರದುರ್ಗದಲ್ಲಿ ಭೋವಿ ಮಠದ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ತೀವ್ರ ರೀತಿ ಕಿಡಿಕಾರಿದ್ದಾರೆ.
ಚಿತ್ರದುರ್ಗದ ಗುರು ಪೀಠದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಅವರು, ಬಿಜೆಪಿ ಪಕ್ಷದ ಹಾಲಿ ಶಾಸಕರಾಗಿರುವ ಅರವಿಂದ ಲಿಂಬಾವಳಿ, ಗೂಳಿಹಟ್ಟಿ ಶೇಖರ್ ಅವರಿಗೆ ಟಿಕೆಟ್ ನೀಡದೆ ಕಡೆಗಣನೆ ಮಾಡಲಾಗಿದೆ ಎಂದು ಸ್ವಾಮೀಜಿ ಬೇಸರ ಹೊರ ಹಾಕಿದರು.
ಶಾಸಕ ಅರವಿಂದ ಲಿಂಬಾವಳಿಗೆ ಟಿಕೆಟ್ ಕೊಡಬೇಕು, ಒಂದು ವೇಳೆ ಟಿಕೆಟ್ ಕೊಡದಿದ್ದರೆ ಇಡೀ ಭೋವಿ ಸಮುದಾಯ ಬೇರೆ ರೀತಿಯ ಚಿಂತನೆ ಮಾಡಬೇಕಾಗುತ್ತದೆ ಅಲ್ಲದೆ ಸಂಪೂರ್ಣ ಬಿಜೆಪಿಯಿಂದ ದೂರ ಹೋಗಲಿದೆ ಎಂದು ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ಎಚ್ಚರಿಕೆ ನೀಡಿದರು.
ಮಹದೇವಪುರ ವಿಧಾನಸಭಾ ಕ್ಷೇತ್ರದಿಂದ ಹಾಲಿ ಶಾಸಕ ಅರವಿಂದ ಲಿಂಬಾವಳಿಗೆ ಟಿಕೆಟ್ ನೀಡಲು ಒತ್ತಾಯಿಸಿದ ಸ್ವಾಮೀಜಿ, ಕಾಂಗ್ರೆಸ್ ಪಕ್ಷದಿಂದ ಅಖಂಡ ಶ್ರೀನಿವಾಸ್ ಕಡೆಗಣನೆ ಮಾಡಲಾಗಿದೆ. ಹೆಚ್ಚಿನ ಅಂತರದಿಂದ ದಾಖಲೆಯ ಗೆಲುವು ಸಾಧಿಸಿದ್ದರೂ ಉದ್ದೇಶ ಪೂರಕವಾಗಿ ಟಿಕೆಟ್ ತಪ್ಪಿಸಲಾಗುತ್ತಿದೆ. ಎರಡೂ ರಾಷ್ಟ್ರೀಯ ಪಕ್ಷದ ವರಿಷ್ಠರಿಗೆ ಮನವಿ ಮಾಡಿದ್ದೆವು. ಈ ಹಿಂದೆ 8-10 ಜನ ಭೋವಿ ಸಮುದಾಯದವರಿಗೆ ಟಿಕೆಟ್ ನೀಡುತ್ತಿದ್ದರು. ಅರವಿಂದ ಲಿಂಬಾವಳಿ, ಗೂಳಿಹಟ್ಟಿ ಶೇಖರ್ ಗೆ ಬಿಜೆಪಿ ಟಿಕೆಟ್ ನೀಡಬೇಕು. ಅಖಂಡ ಶ್ರೀನಿವಾಸ್ ಗೆ ಕಾಂಗ್ರೆಸ್ ಟಿಕೆಟ್ ನೀಡಬೇಕು. ಸಾಮಾಜಿಕ ನ್ಯಾಯದಡಿ ಟಿಕೆಟ್ ನೀಡಬೇಕು. ಇಲ್ಲವಾದಲ್ಲಿ ಭೋವಿ ಸಮುದಾಯ ಕಡೆಗಣಿಸಿದ ಎರಡು ರಾಜಕೀಯ ಪಕ್ಷಗಳನ್ನು ಸಮುದಾಯ ಕೈಬಿಡಲಿದೆ. ಭೋವಿ ಸಮಾಜದ ಸಭೆ ನಡೆಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸ್ವಾಮೀಜಿ ಎಚ್ಚರಿಸಿದ್ದಾರೆ.
ರಾಜ್ಯದಲ್ಲಿ ಈ ಹಿಂದೆ 13 ಜನ ಮಂದಿ ಭೋವಿ ಸಮಾಜದ ಶಾಸಕರಿದ್ದರು ಈಗ ಮೂರೂ ಪಕ್ಷದಿಂದ ಅದರ ಸಂಖ್ಯೆ 9 ಕ್ಕೆ ಇಳಿದಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ 1.25 ಲಕ್ಷ ಭೋವಿ ಸಮಾಜದವರಿದ್ದಾರೆ. ಪದೇ ಪದೇ ಅನ್ಯಾಯವಾಗಿದೆ ಎಂದು ಸ್ವಾಮೀಜಿ ಬೇಸರ ವ್ಯಕ್ತ ಪಡಿಸಿದ್ದಾರೆ.