i
ತಮಿಳುನಾಡು ಮಾದರಿಯಲ್ಲಿ ಪ್ರಾದೇಶಿಕ ಪಕ್ಷ ಅಧಿಕಾರದಲ್ಲಿ ಇದ್ದರೆ ಮಾತ್ರ ಅಭಿವೃದ್ಧಿ ಸಾಧ್ಯ…
ಚಂದ್ರವಳ್ಳಿ ನ್ಯೂಸ್, ಶಿರಾ:
ಬಡವರ ಕಣ್ಣೀರು ಒರೆಸಲು ಕುಮಾರಸ್ವಾಮಿ ಮುಖ್ಯಮಂತ್ರಿಯಾಗಬೇಕು. ಅವರಿಗೆ ಶಕ್ತಿ ತುಂಬುವ ಕೆಲಸ ನೀವು ಮಾಡಬೇಕು ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಹೇಳಿದರು.
ಶಿರಾ ನಗರದಲ್ಲಿ ಜೆಡಿಎಸ್ ಚುನಾವಣೆ ಪ್ರಚಾರ ಸಭೆ ಉದ್ಘಾಟಿಸಿ ಮಾತನಾಡಿದರು. ತಮಿಳುನಾಡು ಮಾದರಿಯಲ್ಲಿ ಪ್ರಾದೇಶಿಕ ಪಕ್ಷ ಅಧಿಕಾರದಲ್ಲಿ ಇದ್ದರೆ ಮಾತ್ರ ಅಭಿವೃದ್ಧಿ ಸಾಧ್ಯ. ರಾಜ್ಯದಲ್ಲಿ ಜೆಡಿಎಸ್ ಬೆಳೆಸುವ ಕೆಲಸವಾಗಬೇಕು. ಭದ್ರಾ ಮೇಲ್ದಂಡೆ ಯೋಜನೆ ರೂಪಿಸಿದ ಕೀರ್ತಿ ಕುಮಾರಸ್ವಾಮಿ ಅವರಿಗೆ ಸಲ್ಲುತ್ತದೆ ಎಂದು ತಿಳಿಸಿದರು.
ಪ್ರಧಾನಿ ನರೇಂದ್ರ ಮೋದಿ ಮಹಿಳೆಯರಿಗೆ ಹೆಚ್ಚು ಗೌರವ ನೀಡುವುದಾಗಿ ಮಾತನಾಡುತ್ತಾರೆ. ಆದರೆ, ಮಹಿಳಾ ಮೀಸಲಾತಿ ನೀಡಿಲ್ಲ. ರಾಜ್ಯಸಭೆಯಲ್ಲಿ ಮಹಿಳಾ ಮೀಸಲಾತಿಗೆ ಅನುಮೋದನೆ ನೀಡಲಾಗಿದೆ. ಲೋಕಸಭೆಯಲ್ಲಿ ಅನುಮೋದನೆ ದೊರಕಿಸಿಕೊಡಲು ಪ್ರಯತ್ನ ನಡೆಸಲಾಗುವುದು ಎಂದು ಗೌಡರು ಭರವಸೆ ನೀಡಿದರು.
ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಮಾತನಾಡಿ, ಕಾಂಗ್ರೆಸ್ ಅಲ್ಪಸಂಖ್ಯಾತರು ಮತ್ತು ಹಿಂದುಳಿದವರನ್ನು ಮತ ಬ್ಯಾಂಕ್ ಮಾಡಿಕೊಂಡು ಅಧಿಕಾರ ನಡೆಸಿದರು. ಅದರೆ, ದೇವೇಗೌಡ ಅಲ್ಪಸಂಖ್ಯಾತರು ಮತ್ತು ಹಿಂದುಳಿದವರನ್ನು ಪಕ್ಕದಲ್ಲಿ ಕುಳ್ಳರಿಸಿಕೊಂಡು ಅಧಿಕಾರ ನೀಡಿದರು. ಪಕ್ಷದಲ್ಲಿ ನಿಷ್ಠೆಯಿಂದ ಕೆಲಸ ಮಾಡಿದರೆ ಪಕ್ಷ ಗುರುತಿಸಲಿದೆ ಎನ್ನುವುದಕ್ಕೆ ಉಗ್ರೇಶ್ ಸಾಕ್ಷಿ ಎಂದು ಇಬ್ರಾಹಿಂ ಹೇಳಿದರು.
ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಅವರ ಮೂಲಕ ಜೆಡಿಎಸ್ ಅಭ್ಯರ್ಥಿ ಆರ್.ಉಗ್ರೇಶ್ ಅವರಿಗೆ ಲಕ್ಕನಹಳ್ಳಿ ಮಂಜುನಾಥ್ ಅವರು 50ಸಾವಿರ ದೇಣಿಗೆ ನೀಡಿದರು.
ಪಟ್ಟನಾಯಕನಹಳ್ಳಿ ಓಂಕಾರೇಶ್ವರಸ್ವಾಮಿಗೆ ಪೂಜೆ ಸಲ್ಲಿಸಿದ ದೇವೇಗೌಡ ಅವರು, ನಂಜಾವಧೂತ ಸ್ವಾಮೀಜಿ ಆಶೀರ್ವಾದ ಪಡೆದರು.
ವಿಧಾನ ಪರಿಷತ್ ಸದಸ್ಯ ಕೆ.ಎ.ತಿಪ್ಪೇಸ್ವಾಮಿ, ಚಿಕ್ಕನಾಯಕನಹಳ್ಳಿ ಜೆಡಿಎಸ್ ಅಭ್ಯರ್ಥಿ ಸಿ.ಬಿ.ಸುರೇಶ್ ಬಾಬು, ತುಮುಲ್ ನಿರ್ದೇಶಕ ಎಸ್.ಆರ್.ಗೌಡ, ಕಲ್ಕೆರೆ ರವಿಕುಮಾರ್, ಜೆಡಿಎಸ್ ಜಿಲ್ಲಾಧ್ಯಕ್ಷ ಆರ್.ಸಿ.ಅಂಜಿನಪ್ಪ, ನಗರಸಭೆ ಅಧ್ಯಕ್ಷ ಅಂಜಿನಪ್ಪ, ಲಿಂಗದಹಳ್ಳಿ ಚೇತನ್ ಕುಮಾರ್, ಸತ್ಯಪ್ರಕಾಶ್, ಹೊನ್ನೇನಹಳ್ಳಿ ನಾಗರಾಜು, ಎಸ್.ರಾಮಕೃಷ್ಣ, ಆರ್.ರಾಘವೇಂದ್ರ, ಆರ್.ರಾಮು, ಟಿ.ಡಿ.ಮಲ್ಲೇಶ್ ಇದ್ದರು.