i
ಭ್ರಷ್ಟಾಚಾರ ರಹಿತ ಆಡಳಿತಕ್ಕಾಗಿ ಕಾಂಗ್ರೆಸ್ ಗೆಲ್ಲಿಸಿ- ಜೆ.ಆರ್.ಷಣ್ಮುಖಪ್ಪ…
ಚಂದ್ರವಳ್ಳಿ ನ್ಯೂಸ್, ದಾವಣಗೆರೆ:
ಭ್ರಷ್ಟಾಚಾರ ರಹಿತ ಆಡಳಿತಕ್ಕಾಗಿ ಕಾಂಗ್ರೆಸ್ ಅವಶ್ಯಕತೆಯಿದ್ದು ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸಬೇಕೆಂದು ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಜೆ.ಆರ್.ಷಣ್ಮುಖಪ್ಪ ಹೇಳಿದರು.
ಉತ್ತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬಿ.ಕಲ್ಪನಹಳ್ಳಿಯಲ್ಲಿ ಹಮ್ಮಿಕೊಂಡಿದ್ದ ಸ್ವ ಸಹಾಯ ಗುಂಪು ಮಹಿಳೆಯರ ಸಭೆಯಲ್ಲಿ ಮಾತನಾಡಿದ ಅವರು, 2018ರ ನಂತರ ದಾವಣಗೆರೆ ಉತ್ತರ ಕ್ಷೇತ್ರದ ಅಭಿವೃದ್ಧಿ ಸಂಪೂರ್ಣ ಸ್ಥಗಿತಗೊಂಡಿದೆ. ಕಾಂಗ್ರೆಸ್ ಹಿಂದಿನ ಅವಧಿಯಲ್ಲಿ ಸಿಲಿಂಡರ್ ಬೆಲೆ ಕೇವಲ 400 ರೂ.ಗಳಿಂದ 450 ರೂ.ಇತ್ತು. ಆದರೀಗ ಶ್ರೀಸಾಮಾನ್ಯ ಬದುಕದಂತೆ ಆಗಿದೆ. ಬಿಜೆಪಿ ಸರಕಾರದ ಶೇ.40 ಕಮಿಷನ್ ವಿಚಾರದಲ್ಲಿ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಯ್ಯ ಪ್ರಧಾನಮಂತ್ರಿಗಳಿಗೆ ಪತ್ರ ಬರೆದು ಅಳಲು ತೋಡಿಕೊಳ್ಳುತ್ತಾರೆ. ಇದರ ಪರಿಣಾಮ ಕೆ.ಎಸ್.ಈಶ್ವರಪ್ಪ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತಾರೆ. ಚುನಾವಣಾ ಪೂರ್ವ ಸಮೀಕ್ಷೆಗಳ ಪ್ರಕಾರ ರಾಜ್ಯದಲ್ಲಿ ಕಾಂಗ್ರೆಸ್ ಕನಿಷ್ಟ 150 ಸ್ಥಾನಗಳನ್ನು ಪಡೆಯಲಿದೆ. ಈ ಹಿನ್ನೆಲೆಯಲ್ಲಿ ಪ್ರತಿಯೊಬ್ಬರೂ ಎಸ್.ಎಸ್.ಮಲ್ಲಿಕಾರ್ಜುನ ಅವರನ್ನು ಬೆಂಬಲಿಸಿ ಎಂದು ಕರೆ ನೀಡಿದರು.
ಮಾಜಿ ಸಚಿವ ಮಲ್ಲಿಕಾರ್ಜುನ್ ಪತ್ನಿ ಡಾ.ಪ್ರಭಾ ಮಲ್ಲಿಕಾರ್ಜುನ್ ಮಾತನಾಡಿ, ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗೆ ಎಸ್.ಎಸ್.ಮಲ್ಲಿಕಾರ್ಜುನ್ ಹಾಗೂ ಡಾ.ಶಾಮನೂರು ಶಿವಶಂಕರಪ್ಪ ಅವರ ಆಯ್ಕೆ ಅನಿವಾರ್ಯವಾಗಿದೆ. 2018ರಿಂದ 23ರ ತನಕ ಉತ್ತಮ ಅಭಿವೃದ್ಧಿ ಕಾರ್ಯಗಳನ್ನು ನಡೆಸಲು ಸಮಗ್ರ ಯೋಜನೆ ರೂಪಿಸಿದ್ದರು. ಆದರೆ 4 ಸಾವಿರ ಮತಗಳ ಅಂತರದಿಂದ ಪರಾಭವಗೊಂಡರು. ಇದರೊಂದಿಗೆ ಉತ್ತರ ಕ್ಷೇತ್ರದ ಅಭಿವೃದ್ಧಿ ಕೂಡ ಕುಂಠಿತಗೊಂಡಿತು ಎಂದರು.
ನಾವು ವಿದೇಶ ಪ್ರವಾಸಕ್ಕೆ ಹೋದಾಗ ಅಲ್ಲಿನ ಮೂಲ ಸೌಲಭ್ಯ ಮತ್ತು ಮತ್ತು ಉತ್ತಮ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಮಲ್ಲಿಕಾರ್ಜುನ್ ತಿಳಿದುಕೊಳ್ಳುತ್ತಾರೆ. ಮತ್ತು ಅವುಗಳ ಪೋಟೋ ತೆಗೆದುಕೊಳ್ಳುತ್ತಾರೆ. ಅದೇ ಮಾದರಿಯಲ್ಲಿ ದಾವಣಗೆರೆಯಲ್ಲೂ ಅಭಿವೃದ್ಧಿಗೆ ಪ್ರಯತ್ನ ಮಾಡುತ್ತಾರೆ ಎಂದರು.
ಉದ್ಯಮಿ ಅಣಬೇರು ರಾಜಣ್ಣ ಸೇರಿದಂತೆ ಅನೇಕ ಮುಖಂಡರು, ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.