i
ಮುಖ್ಯಮಂತ್ರಿ ಹುದ್ದೆ ಹಗ್ಗ ಜಗ್ಗಾಟಕ್ಕೆ ತೆರೆ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ…
ಚಂದ್ರವಳ್ಳಿ ನ್ಯೂಸ್, ನವದೆಹಲಿ:
ಕಾಂಗ್ರೆಸ್ ನಾಯಕರಾದ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ನಡುವೆ ಮುಖ್ಯಮಂತ್ರಿ ಹುದ್ದೆಗಾಗಿ ನಡೆದಿದ್ದ ಹಗ್ಗ ಜಗ್ಗಾಟಕ್ಕೆ ಕೊನೆಗೂ ತೆರೆ ಬಿದ್ದಿದ್ದು ಎಲ್ಲವೂ ಸುಖಾಂತ್ಯವಾಗಿದೆ.
ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹೆಸರನ್ನು ವರಿಷ್ಠರು ಘೋಷಿಸಿದ್ದು, ಡಿ.ಕೆ. ಶಿವಕುಮಾರ್ ಉಪ ಮುಖ್ಯಮಂತ್ರಿಯಾಗಲಿದ್ದಾರೆ. ಇದರ ಜೊತೆಗೆ ಡಿ.ಕೆ. ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಿಯೂ ಮುಂದುವರೆಯಲಿದ್ದು, ಕೇವಲ ಒಂದು ಉಪ ಮುಖ್ಯಮಂತ್ರಿ ಹುದ್ದೆಗೆ ಮಾತ್ರ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿದೆ.
ಮುಖ್ಯಮಂತ್ರಿ ಹುದ್ದೆಯನ್ನು ಮೊದಲ ಅವಧಿಗೆ ಸಿದ್ದರಾಮಯ್ಯ ನಿರ್ವಹಿಸಲಿದ್ದು, ಎರಡು ವರ್ಷಗಳ ಬಳಿಕ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾಗಲಿದ್ದಾರೆ. ಅಷ್ಟೇ ಅಲ್ಲದೇ ಲೋಕಸಭಾ ಚುನಾವಣೆ ಮುಗಿಯುವರೆಗೂ ಕೆಪಿಸಿಸಿ ಅಧ್ಯಕ್ಷರಾಗಿ ಮುಂದುವರಿಯಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.
ಡಿಕೆ ಶಿವಕುಮಾರ್ ಡಿಸಿಎಂ ಹುದ್ದೆ ಜೊತೆಯಲ್ಲಿ ಎರಡು ಪ್ರಬಲ ಖಾತೆಗಳನ್ನು ನೀಡುವುದಾಗಿ ಹೈಕಮಾಂಡ್ ಭರವಸೆ ನೀಡಿದೆ.
ಸರಣಿ ಸಭೆಗಳು- ಬೆಂಗಳೂರಿನಲ್ಲಿ ಗುರುವಾರ ಸಂಜೆ 7ಕ್ಕೆ ಶಾಸಕಾಂಗ ಸಭೆ ಕರೆದಿದ್ದೇನೆ. ಕಾಂಗ್ರೆಸ್ ಹೈಕಮಾಂಡ್ ತೀರ್ಮಾನಕ್ಕೆ ನಾನು ಬದ್ಧನಾಗಿದ್ದೇನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.
ನವದೆಹಲಿಯ ಕೆ.ಸಿ ವೇಣುಗಾಪಾಲ್ ನಿವಾಸದಲ್ಲಿ ಬೆಳಗಿನ ಉಪಹಾರ ಸೇವಿಸಿದ ನಂತರ ಅವರು ಮಾಧ್ಯಮಗಳೊಂದಿಗೆ ಮಾತನಾಡಿದರು.
ದೆಹಲಿಯಲ್ಲಿನ ವೇಣುಗೋಪಾಲ್ ನಿವಾಸಕ್ಕೆ ಡಿಕೆ ಶಿವಕುಮಾರ್, ಸಿದ್ದರಾಮಯ್ಯ ಈ ಇಬ್ಬರಿಗೆ ವಿಶೇಷ ಆಹ್ವಾನ ನೀಡಲಾಗಿತ್ತು.
ಈ ವೇಳೆ ಮಾತನಾಡಿದಂತ ಡಿಕೆ ಶಿವಕುಮಾರ್ ಸಂಜೆ 7ಕ್ಕೆ ಕಾಂಗ್ರೆಸ್ ಪಕ್ಷದ ಶಾಸಕಾಂಗ ಸಭೆಯನ್ನು ಕರೆಯಲಾಗಿದೆ. ಹೈಕಮಾಂಡ್ ತೀರ್ಮಾನಕ್ಕೆ ನಾನು ಬದ್ಧನಾಗಿದ್ದೇನೆ ಎಂಬುದಾಗಿ ತಿಳಿಸಿದರು.
ಕಾಂಗ್ರೆಸ್ ಪಕ್ಷದ ಹಿತ ದೃಷ್ಠಿಯಿಂದ ಅಧಿಕಾರ ಹಂಚಿಕೆ ಸೂತ್ರ ಪಾಲನೆ ಮಾಡಲಾಗುತ್ತಿದೆ. ಕರ್ನಾಟಕ ಜನರ ಸೇವೆ ಮಾಡಲು ನಾನು ಕಟಿಬದ್ಧನಾಗಿದ್ದೇನೆ ಎಂದರು ತಿಳಿಸಿದ್ದಾರೆ.
ಅಲ್ಲದೆ ಸೋನಿಯಾ ಗಾಂಧಿಯಿಂದ ಬಂದಂತ ತಡ ರಾತ್ರಿಯ ಕರೆಗೆ ಡಿಕೆಶಿ ಮನವೊಲಿದಿದ್ದು, 30-30 ತಿಂಗಳ ಸೂತ್ರಕ್ಕೆ ಒಪ್ಪಿಗೆ ಸೂಚಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಹೀಗಾಗಿಯೇ ಇಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದ್ದು, ಸಿಎಲ್ ಪಿ ನಾಯಕನ ಹೆಸರು ಅಧಿಕೃತ ಘೋಷಣೆ ಮಾಡಲಿದ್ದಾರೆ.
ಯಾರಿಗೆ ಯಾವ ಹುದ್ದೆ: ಕರ್ನಾಟಕದ ಮುಂದಿನ ಮುಖ್ಯಮಂತ್ರಿಯಾಗಿ ಸಿದ್ಧರಾಮಯ್ಯ, ಉಪ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಸೇರಿದಂತೆ 7-8 ಹಿರಿಯ ಕಾಂಗ್ರೆಸ್ ಮುಖಂಡರು ಮೇ-20ರಂದು ಶನಿವಾರ ಮಧ್ಯಾಹ್ನ 12.30ಕ್ಕೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಹಿಮಾಚಲ ಪ್ರದೇಶದ ಶಿಮ್ಲಾಕ್ಕೆ ಹೋಗಿದ್ದಂತ ಸೋನಿಯಾ ಗಾಂಧಿ ಕರ್ನಾಟಕ ಸಿಎಂ ಆಯ್ಕೆ ಸಭೆಗೆ ಹಾಜರಾಗಿರಲಿಲ್ಲ. ಅವರು ಅಲ್ಲಿಂದಲೇ ಬುಧವಾರ ತಡರಾತ್ರಿ ಡಿಕೆ ಶಿವಕುಮಾರ್ ಗೆ ಕರೆ ಮಾಡಿ 2 ವರ್ಷ ಸಿದ್ಧರಾಮಯ್ಯ ಸಿಎಂ ಆಗಿರಲಿದ್ದಾರೆ. ಆ ಬಳಿಕ ಅವರಾಗಿಯೇ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂದು ಡಿ.ಕೆ.ಶಿವಕುಮಾರ್ ಅವರನ್ನು ಮನವೊಲಿಸಿದ್ದಾರೆ ಎನ್ನಲಾಗಿದೆ.
ಸಿದ್ಧರಾಮಯ್ಯ ಮುಖ್ಯಮಂತ್ರಿಯಾಗಿಯೇ ಗೌರವ ವಿದಾಯದೊಂದಿಗೆ ರಾಜಕೀಯ ನಿವೃತ್ತಿ ಬಯಸುತ್ತಿದ್ದು ಅದಕ್ಕೆ ನೀವು ಅವಕಾಶ ಮಾಡಿಕೊಡಬೇಕು. 2 ವರ್ಷದ ಬಳಿಕ ಸಿದ್ಧರಾಮಯ್ಯ ಅವರೇ ರಾಜಕೀಯ ನಿವೃತ್ತಿಯಾಗಲಿದ್ದು ನಿಮ್ಮನ್ನು ಸಿಎಂ ಮಾಡುವುದಾಗಿ ಭರವಸೆ ನೀಡಿದ್ದಾರೆ ಎನ್ನಲಾಗುತ್ತಿದೆ.