i
ಮೊದಲ ಸಂಪುಟದಲ್ಲೇ ಕಾಂಗ್ರೆಸ್ ನೀಡಿದ 5 ಗ್ಯಾರಂಟಿಗಳ ಅನುಷ್ಠಾನ-ಡಿಕೆಶಿ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ವಿಧಾನಸಭಾ ಚುನಾವಣಾ ಪೂರ್ವ ರಾಜ್ಯದ ಮತದಾರರಿಗೆ ಕಾಂಗ್ರೆಸ್ ಪಕ್ಷ ನೀಡಿದ 5 ಗ್ಯಾರಂಟಿ(ಭರವಸೆ)ಗಳನ್ನು ಈಡೇರಿಸುತ್ತೇವೆ ಎಂದು ಉಪಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಭರವಸೆ ನೀಡಿದ್ದಾರೆ.
ಬೆಂಗಳೂರಿನ ಸದಾಶಿವನಗರದ ತಮ್ಮ ನಿವಾಸದಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ಡಿ ಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿ ಮಾತನಾಡಿ, ನಮ್ಮ ಸರ್ಕಾರ ಅಸ್ತಿತ್ವಕ್ಕೆ ಬರುತ್ತಿದೆ. ನಾಳೆಯಿಂದಲೇ ನಮ್ಮ ಗ್ಯಾರಂಟಿಗಳ ಈಡೇರಿಕೆಗೆ ಪ್ರಯತ್ನ ಮಾಡುತ್ತೇವೆ ಎಂದು ಹೇಳಿದರು.
ಕೆಪಿಸಿಸಿ ಅಧ್ಯಕ್ಷನಾಗಿ ನಾಳೆಯ ಪ್ರಮಾಣ ವಚನ ಕಾರ್ಯಕ್ರಮದ ಉಸ್ತುವಾರಿ ನೋಡಿಕೊಳ್ಳುತ್ತಿದ್ದೇನೆ. ಎಐಸಿಸಿ ಅಧ್ಯಕ್ಷರು, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿಯವರು ರಾಜ್ಯದ ಗ್ಯಾರಂಟಿ ಕಾರ್ಯಕ್ರಮದ ಭರವಸೆಗಳ ಆಶ್ವಾಸನೆ ನೀಡಿದ್ದರು. ಅವರು ಸಹ ಇದರ ಭಾಗವಾಗಿರುತ್ತಾರೆ. ಕರ್ನಾಟಕ ಜನತೆ ಬಯಸಿದಂತಹ ಸರ್ಕಾರ, ಆಡಳಿತವನ್ನು ನೀಡುವ ಮೂಲಕ ಜನಮನ ಗೆಲ್ಲುತ್ತೇವೆ ಎಂದು ಡಿಕೆ ಶಿವಕುಮಾರ್ ತಿಳಿಸಿದರು.
ರಾಜ್ಯದ ಜನತೆಗೆ ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತೇವೆ, ಸಚಿವ ಸಂಪುಟದ ಮೊದಲ ಸಭೆಯಲ್ಲಿಯೇ 5 ಗ್ಯಾರಂಟಿಗಳನ್ನು ಜಾರಿಗೆ ತರುತ್ತೇವೆ ಎಂದು ಪುನರುಚ್ಛರಿಸಿದರು.
ಇದಾದ ಬಳಿಕ ಡಿ ಕೆ ಶಿವಕುಮಾರ್ ಅವರು ಮೇ-20ರಂದು ಶನಿವಾರ ಕಂಠೀರವ ಕ್ರೀಡಾಂಗಣದಲ್ಲಿ ನಡೆಯಲಿರುವ ನೂತನ ಸಿಎಂ, ಡಿಸಿಎಂ ಮತ್ತು ಸಚಿವರ ಪ್ರಮಾಣ ವಚನ ಕಾರ್ಯಕ್ರಮದ ಸಿದ್ಧತೆ ಪರಿಶೀಲನೆ ನಡೆಸಿದರು.
ದೇಶಾದ್ಯಂತ ಹಲವು ನಾಯಕರುಗಳಿಗೆ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಆಗಮಿಸುವಂತೆ ಆಹ್ವಾನ ನೀಡಿದ್ದೇವೆ. ಎಲ್ಲರೂ ಕಾರ್ಯಕ್ರಮದಲ್ಲಿ ಭಾಗಿಯಾಗಬೇಕೆಂದು ನಾನು ಮನವಿ ಮಾಡಿದ್ದೇನೆ ಎಂದು ಹೇಳಿದರು.
ಉಚಿತ 200 ಯುನಿಟ್ ವಿದ್ಯುತ್, ಮನೆ ಯಜಮಾನಿಗೆ 2 ಸಾವಿರ ರೂ. ನೀಡಿಕೆ, ಪದವೀಧರರಿಗೆ 3000 ರೂ., ಡಿಪ್ಲೋಮಾ ಪದವೀಧರರಿಗೆ 1500 ರೂ., ಪ್ರತಿ ಮನೆಯ ತಲಾ ಒಬ್ಬರಿಗೆ 10 ಕೆಜಿ ಅಕ್ಕಿ ನೀಡಿಕೆ, ಮಹಿಳೆಯರಿಗೆ ಉಚಿತ ಬಸ್ ಪಾಸ್ ಗ್ಯಾರಂಟಿಗಳನ್ನು ಕಾಂಗ್ರೆಸ್ ಸರ್ಕಾರ ಜಾರಿಗೆ ತರಬೇಕಾಗಿದೆ.