i
ರುದ್ರಪ್ಪ ಲಮಾಣಿಗೆ ಸಮಾಜ ಕಲ್ಯಾಣ ಖಾತೆ ನೀಡುವಂತೆ ಆಗ್ರಹ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಹಾವೇರಿ ಮೀಸಲು ಕ್ಷೇತ್ರದಿಂದ ಆಯ್ಕೆಯಾಗಿರುವ ಬಂಜಾರ ಸಮಾಜದ ಹಿರಿಯ ನಾಯಕರು ಹಾಗೂ ಮಾಜಿ ಸಚಿವ ರುದ್ರಪ್ಪ ಲಮಾಣಿಯವರಿಗೆ ಸಮಾಜ ಕಲ್ಯಾಣ ಖಾತೆ ನೀಡಬೇಕು ಅಥವಾ ಜನರ ಬಳಿ ಹೆಚ್ಚು ಸಂಪರ್ಕ ಮತ್ತು ಸಹಾಯ ಮಾಡಲಾಗುವ ಪ್ರಬಲ ಖಾತೆ ನೀಡಬೇಕು ಎಂದು ಜಿಲ್ಲಾ ಬಂಜಾರ ವಿಧ್ಯಾರ್ಥಿ ಸಂಘದ ಜಿಲ್ಲಾಧ್ಯಕ್ಷ ಪ್ರಕಾಶ್ ರಾಮಾನಾಯ್ಕ್ ಆಗ್ರಹ ಮಾಡಿದ್ದಾರೆ.
ಅವರು ಪತ್ರಿಕಾ ಹೇಳಿಕೆ ನೀಡಿ, ರಾಜ್ಯದಲ್ಲಿ ಬಂಜಾರ ಸಮುದಾಯದ ಏಳು ಜನರು ಆಯ್ಕೆಯಾಗಿದ್ದಾರೆ. ಬಿಜೆಪಿಯಿಂದ ನಾಲ್ಕು ಜನ, ಜೆಡಿಎಸ್ ನಿಂದ ಇಬ್ಬರು ಮತ್ತು ಕಾಂಗ್ರೆಸ್ನಿಂದ ಒಬ್ಬರು ಶಾಸಕಾರಾಗಿದ್ದಾರೆ.
ಕಳೆದ ಬಾರಿ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಸಿದ್ಧರಾಮಯ್ಯ ಅವರ ಸಂಪುಟದಲ್ಲಿ ರುದ್ರಪ್ಪ ಲಮಾಣಿಯವರಿಗೆ ಮುಜರಾಯಿ ಮತ್ತು ಜವಳಿ ಇಲಾಖೆಯ ಖಾತೆ ನೀಡಿದ್ದರು. ಅದನ್ನು ಸಮರ್ಪಕವಾಗಿ ನಿಭಾಯಿಸಿ ರಾಜ್ಯದ ಜನರ ಪ್ರೀತಿ ವಿಶ್ವಾಸಕ್ಕೆ ಪಾತ್ರರಾಗಿದ್ದರು ಎಂದು ತಿಳಿಸಿದ್ದಾರೆ.
ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಆಯ್ಕೆಯಾಗಿರುವ ಏಕೈಕ ಬಂಜಾರ ಸಮಾಜದ ಶಾಸಕಗೆ ಸಮಾಜ ಕಲ್ಯಾಣ ಖಾತೆ ನೀಡಬೇಕೆಂದು ಮನವಿ ಮಾಡಿದರು.
ಸಂತ ಸೇವಾಲಾಲ್ ಮಹಾರಾಜರ ಜನ್ಮಸ್ಥಳ ಸೂರಗೊಂಡನಕೊಪ್ಪದ ಮಹಾಮಠ ಸಮಿತಿಯ ಅಧ್ಯಕ್ಷರಾಗಿ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗಾಗಿ ಪ್ರಾಮಾಣಿಕವಾಗಿ ಶ್ರಮಿಸಿದ್ದು, ಅವರ ಪ್ರಾಮಾಣಿಕತೆ ಹಾಗೂ ಸಾಮಾಜಿಕ ಕಳಕಳಿ ಮೆಚ್ಚುವಂತಹದ್ದು. ಸಾಮಾಜಿಕ ನ್ಯಾಯದ ಅಡಿಯಲ್ಲಿ ರುದ್ರಪ್ಪ ಲಮಾಣಿಯವರಿಗೆ ಕ್ಯಾಬಿನೆಟ್ ದರ್ಜೆಯ ಸಚಿವ ಸ್ಥಾನಮಾನ ನೀಡಿದ್ದಲ್ಲಿ ಮುಂಬರುವ ದಿನಗಳಲ್ಲಿ ಬಂಜಾರ ಸಮಾಜ ಕಾಂಗ್ರೆಸ್ ಪಕ್ಷಕ್ಕೆ ಸಂಪೂರ್ಣ ಬೆಂಬಲ ನೀಡಲಿದೆ.
ಕಾಂಗ್ರೆಸ್ ಪಕ್ಷದ ಗೆಲುವಿಗೆ ಬಂಜಾರ ಸಮಾಜದ ಕೊಡುಗೆ ಬಹಳಷ್ಟಿದ್ದು,
ಬಿಜೆಪಿಯವರಂತೆ ಕಾಂಗ್ರೆಸ್ ನವರು ಮೀಸಲಾತಿ ವಿಚಾರದಲ್ಲಿ ತಪ್ಪು ನಿರ್ಧಾರ ಕೈಗೊಳ್ಳಬಾರದು, ಅದನ್ನು ಬಂಜಾರ ಸಮಾಜ ಸಹಿಸುವುದಿಲ್ಲ ಎಂದು ಜಿಲ್ಲಾ ಬಂಜಾರ ವಿಧ್ಯಾರ್ಥಿ ಸಂಘದ ಜಿಲ್ಲಾಧ್ಯಕ್ಷ ಪ್ರಕಾಶ್ ರಾಮಾನಾಯ್ಕ್ ಎಚ್ಚರಿಸಿದ್ದಾರೆ.