i
ಶಾಲಾ ಕಾಲೇಜ್ ಗಳಲ್ಲಿ ಏನಾದರೂ ಕೊರತೆಯಾದರೆ ಸಚಿವ ಸುಧಾಕರ್ ಅವರನ್ನು ಭೇಟಿ ಮಾಡಿ:ಪ್ರೇಮ್ ಕುಮಾರ್…
ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ವಿದ್ಯಾರ್ಥಿಗಳಿಗೆ ಜೀವನದಲ್ಲಿ ಗುರಿ ಮುಟ್ಟಲು ಸರಿಯಾದ ಸಿದ್ಧತೆ ಹಾಗೂ ಬದ್ಧತೆ ಇರಬೇಕು, ಆಗ ಮಾತ್ರ ಉತ್ತಮ ಗುಣಮಟ್ಟದ ಶಿಕ್ಷಣ ಪಡೆಯಲು ಸಾಧ್ಯವಾಗುತ್ತದೆ ಎಂದು ಕಾಂಗ್ರೆಸ್ ಮುಖಂಡ ಹಾಗೂ ನಗರಸಭೆ ಮಾಜಿ ಸದಸ್ಯ ಪ್ರೇಮ್ ಕುಮಾರ್ ಹೇಳಿದರು.
ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢ ಶಾಲಾ ವಿಭಾಗದಲ್ಲಿ ೨೦೨೩-೨೪ ನೇ ಸಾಲಿನ ಶಾಲಾ ಪ್ರಾರಂಭೋತ್ಸವ ಹಾಗೂ ದಾಖಲಾತಿ ಆಂದೋಲನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಸರ್ಕಾರಿ ಶಾಲೆಗಳ ಮಕ್ಕಳಿಗೆ ಅಗತ್ಯವಾದ ಶೈಕ್ಷಣಿಕ ಪರಿಕರಗಳನ್ನು ಕೊಡಿಸಲು ನಾನು ಬದ್ಧವಾಗಿದ್ದೇವೆ. ಅಲ್ಲದೆ ಸರ್ಕಾರಿ ಅನುದಾನದಲ್ಲಿ ಕೋಟ್ಯಂತರ ರೂ.ಗಳನ್ನು ಸುಧಾಕರ್ ಕೊಡಿಸಿದ್ದಾರೆ. ಯಾವುದೇ ಕೊರತೆಗಳಿದ್ದರೂ ನನ್ನ ಅಥವಾ ಸುಧಾಕರ್ ಅವರನ್ನು ನೇರವಾಗಿ ಭೇಟಿಯಾಗಿ ಸಮಸ್ಯೆ ಹೇಳಿಕೊಳ್ಳಬಹುದು ಎಂದು ತಿಳಿಸಿದರು.
ನಗರಸಭೆ ಮಾಜಿ ಉಪಾಧ್ಯಕ್ಷ ರವಿಚಂದ್ರನಾಯ್ಕ ಮಾತನಾಡಿ, ವಿದ್ಯಾರ್ಥಿಗಳಿಗೆ ಬೋಧಿಸುವ ಶಿಕ್ಷಕರಿಗೆ ವೃತ್ತಿ ಪ್ರಾವೀಣ್ಯತೆ, ಪ್ರಾಮಾಣಿಕತೆ ಮತ್ತು ಕರ್ತವ್ಯಪ್ರಜ್ಞೆ ಇರಬೇಕು, ಆಗಮಾತ್ರ ವಿದ್ಯಾರ್ಥಿಗಳು ಉತ್ತಮ ಮಟ್ಟದ ಸಾಧನೆ ಮಾಡಲು ಸಾಧ್ಯ ಎಂಬುದಾಗಿ ಹೇಳಿದರು.
ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಗುಲಾಬಿ ಹೂ ನೀಡುವ ಮೂಲಕ ಶಾಲೆಗೆ ಮಕ್ಕಳನ್ನು ಸ್ವಾಗತಿಸಿ, ಬರಮಾಡಿಕೊಳ್ಳುವುದರ ಜೊತೆಗೆ ಮಕ್ಕಳಿಗೆ ಉಚಿತ ಪಠ್ಯಪುಸ್ತಕ ಮತ್ತು ಸಮವಸ್ತ್ರಗಳನ್ನು ವಿತರಿಸಲಾಯಿತು.
ನಗರಸಭೆ ಸದಸ್ಯ ಜಗದೀಶ್ ಕಾರ್ಯಕ್ರಮ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಮುಖಂಡರಾದ ಫಕ್ರುದ್ದೀನ್, ಸಾದತ್ ಉಲ್ಲಾ, ಕೆ.ರಾಮಚಂದ್ರಪ್ಪ ಹಾಗೂ ಎಸ್.ಡಿ.ಎಂ.ಸಿ ಅಧ್ಯಕ್ಷರು, ಪದಾಧಿಕಾರಿಗಳು, ಸದಸ್ಯರು, ಪೋಷಕರು ಹಾಗೂ ಶಾಲಾ ಸಿಬ್ಬಂದಿವರ್ಗದವರು ಭಾಗವಹಿಸಿದ್ದರು.