i
ಕುಂಚಿಟಿಗ ಸಮಾಜಕ್ಕೆ ಕಾಂಗ್ರೆಸ್ ಪಕ್ಷದಿಂದ ಅನ್ಯಾಯ, ಜಯಚಂದ್ರಗೆ ಮಂತ್ರಿಗಿರಿ ಕೊಡದಿದ್ದರೆ ಕಾಂಗ್ರೆಸ್ ವಿರುದ್ಧ ಅಭಿಯಾನ….
ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಕಾಂಗ್ರೆಸ್ ಪಕ್ಷ ಕುಂಚಿಟಿಗ ಸಮಾಜಕ್ಕೆ ತೀವ್ರ ಅನ್ಯಾಯ ಮಾಡಿದೆ. ಇಡೀ ರಾಜ್ಯದಲ್ಲಿ ಕುಂಚಿಟಿಗ ಸಮಾಜದಿಂದ ಗೆದ್ದಿದ್ದ ಏಕೈಕ ಶಾಸಕ ಟಿ.ಬಿ.ಜಯಚಂದ್ರ ಅವರಿಗೆ ಸಚಿವ ಸ್ಥಾನ ನೀಡದೆ ಸಾಮಾಜಿಕ ನ್ಯಾಯದಿಂದ ವಂಚಿಸಲಾಗಿದೆ. ಆದ್ದರಿಂದ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕುಂಚಿಟಿಗ ಸಮಾಜ ಇಡೀ ರಾಜ್ಯ ಪ್ರವಾಸ ಮಾಡಿ ಕಾಂಗ್ರೆಸ್ ವಿರುದ್ಧ ಅಭಿಮಾನ ಮಾಡಲಾಗುತ್ತದೆ ಎಂದು ಕರ್ನಾಟಕ ರಾಜ್ಯ ಕುಂಚಿಟಿಗರ ಒಕ್ಕೂಟದ ಮುಖಂಡ ಎಸ್. ವಿ. ರಂಗನಾಥ್ ಎಚ್ಚರಿಸಿದ್ದಾರೆ.
ಅವರು ಪತ್ರಿಕಾ ಹೇಳಿಕೆ ನೀಡಿದ್ದು ಕುಂಚಿಟಿಗರ ಏಕೈಕ ಶಾಸಕ ಕಾನೂನು ಪದವೀಧರರು, ಸಂಸದೀಯ ಪಟು, ಸರಳ ಸಜ್ಜನಿಕೆಯ ಹಿರಿಯ ಮುತ್ಸದ್ಧಿ ರಾಜಕಾರಣಿ ಟಿ ಬಿ ಜಯಚಂದ್ರ ರವರಿಗೆ ಕುಂಚಿಟಿಗರ ಕೋಟಾದಲ್ಲಿ ಮಂತ್ರಿ ಸ್ಥಾನ ಕೊಡಬೇಕು, ಇಲ್ಲದಿದ್ದರೆ ಮುಂದಿನ ವರ್ಷ ನಡೆಯಲಿರುವ ಪಾರ್ಲಿಮೆಂಟ್ ಚುನಾವಣೆಯಲ್ಲಿ ಕುಂಚಿಟಿಗರು ಇದಕ್ಕೆ ತಕ್ಕ ಉತ್ತರ ನೀಡಲಿದ್ದಾರೆ, ಒಕ್ಕಲಿಗ ಅಥವಾ ಲಿಂಗಾಯಿತ ಕೋಟಾದಲ್ಲಿ ಒಬ್ಬರಿಗೆ ಕಡಿಮೆ ಮಾಡಿ ಜಾತಿ ಸಮೀಕರಣ ಮತ್ತು ಸಾಮಾಜಿಕ ನ್ಯಾಯದಡಿ ಕುಂಚಿಟಿಗರಿಗೆ ಒಂದು ಸಚಿವ ಸ್ಥಾನ ಕೊಡಲು ಮುಖ್ಯಮಂತ್ರಿ ಸಿದ್ಧರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ತುರ್ತು ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹ ಪೂರ್ವಕ ಒತ್ತಾಯ ಮಾಡಿದ್ದಾರೆ.
ಚಿತ್ರದುರ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ತುಮಕೂರು ಜಿಲ್ಲೆಯ ಶಿರಾ, ಪಾವಗಡ ಕ್ಷೇತ್ರಗಳು ಬರಲಿವೆ. ಅಲ್ಲದೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ, ಹಿರಿಯೂರು, ಚಿತ್ರದುರ್ಗ, ಹೊಸದುರ್ಗ, ಹೊಳಲ್ಕೆರೆ ವಿಧಾನಸಭಾ ಕ್ಷೇತ್ರದಲ್ಲಿ ಕುಂಚಿಟಿಗರು 2 ಲಕ್ಷಕ್ಕೂ ಅಧಿಕ ಸಂಖ್ಯೆಯಲ್ಲಿದ್ದು ನಿರ್ಣಾಯಕ ಮತದಾರರಿದ್ದಾರೆ. ಇಡೀ ಚಿತ್ರದುರ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯ 8 ವಿಧಾನಸಭಾ ಕ್ಷೇತ್ರಗಳಲ್ಲಿ ಕುಂಚಿಟಿಗರು ಸುಮಾರು 3.50 ಲಕ್ಷ ಮತದಾರರಿದ್ದು ಕಾಂಗ್ರೆಸ್ ಪಕ್ಷದ ವಿರುದ್ಧ ಅಭಿಯಾನ ಆರಂಭಿಸಲಾಗುತ್ತದೆ. ಅಷ್ಟೇ ಅಲ್ಲ ಕರ್ನಾಟಕ ರಾಜ್ಯದ 17 ಜಿಲ್ಲೆಗಳ ಸುಮಾರು 8 ಲೋಕಸಭಾ ಕ್ಷೇತ್ರದಲ್ಲಿ ಕುಂಚಿಟಿಗ ಸಮಾಜದ ಮತಗಳು ನಿರ್ಣಯಕವಾಗಿದ್ದು ಪ್ರತಿ ಊರುಗಳಿಗೆ ಭೇಟಿ ನೀಡಿ ಕಾಂಗ್ರೆಸ್ ಪಕ್ಷ ಮಾಡಿರುವ ಅನ್ಯಾಯದ ವಿರುದ್ಧ ಮತ ಚಲಾಯಿಸುವಂತೆ ಕುಂಚಿಟಿಗ ಸಮಾಜಕ್ಕೆ ಜಾಗೃತಿ ಮೂಡಿಸಲಾಗುತ್ತದೆ ಎಂದು ಕರ್ನಾಟಕ ರಾಜ್ಯ ಕುಂಚಿಟಿಗರ ಒಕ್ಕೂಟದ ಮುಖಂಡ ಎಸ್. ವಿ. ರಂಗನಾಥ್ ಎಚ್ಚರಿಸಿದ್ದಾರೆ.