i
ಬಿಜೆಪಿ-ಜೆಡಿಎಸ್ ಮೈತ್ರಿ ಕೇವಲ ಗಾಳಿ ಸುದ್ದಿ-ಹೆಚ್.ಡಿ.ಕುಮಾರಸ್ವಾಮಿ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಜತೆ ಜೆಡಿಎಸ್ ಮೈತ್ರಿ ಚರ್ಚೆ ವಿಚಾರ ಇದೆಲ್ಲಾ ಗಾಳಿ ಸುದ್ದಿ, ಆ ರೀತಿಯ ಯಾವುದೇ ಚರ್ಚೆ ಆಗಿಲ್ಲ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.
ಚನ್ನಪಟ್ಟಣದಲ್ಲಿ ಕೆಡಿಪಿ ಸಭೆಯಲ್ಲಿ ಭಾಗವಹಿಸುವ ಮುನ್ನ ಅವರು ಮಾಧ್ಯಮಗಳ ಜತೆ ಮಾತನಾಡಿದರು. ಲೋಕಸಭಾ ಚುನಾವಣೆ ಬಗ್ಗೆ ನಾನು ಜಿಲ್ಲಾವಾರು ಸಭೆ ನಡೆಸಿ ಗೆದ್ದ ಸೋತ ಅಭ್ಯರ್ಥಿಗಳ ಜತೆ ಮಾತನಾಡಿದ್ದೇನೆ. ಯಾವ ರೀತಿ ಚುನಾವಣೆ ಎದುರಿಸಬೇಕು ಎಂಬುದರ ಕುರಿತು ರೂಪುರೇಷೆ ಸಿದ್ಧ ಮಾಡುತ್ತಿದ್ದೇವೆ ಎಂದು ತಿಳಿಸಿದರು.
ರಾಷ್ಟ್ರ ರಾಜಕಾರಣದ ಬಗ್ಗೆ ಒಲವು ವಿಚಾರ ಹೊಂದಿದ್ದೀರಾ? ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, ರಾಷ್ಟ್ರ ರಾಜಕಾರಣದ ಮೇಲೆ ನನಗೆ ಒಲವಿಲ್ಲ. ಚುನಾವಣೆ ಎದುರಿಸುವ ಆಸಕ್ತಿ ಇರಲಿಲ್ಲ. ಆದರೆ ಕಾರ್ಯಕರ್ತರ ಒತ್ತಾಸೆಯಿಂದ ರಾಜಕಾರಣದಲ್ಲಿದ್ದೇನೆ. ನಂದುಬಿಡಿ, ಹಾಲಿ ಸಂಸದರ ಕಥೆಯೇ ಕೇಳಿ. ಭ್ರಷ್ಟಾಚಾರದ ಮಧ್ಯೆ ಚುನಾವಣೆ ಬೇಡ ಅಂತಿದ್ದಾರೆ. ಅಂತವರೇ ಚುನಾವಣೆ ಬೇಡ ಅಂತ ಹೇಳ್ತಿರುವಾಗ ನಮ್ದೆಲ್ಲ ಯಾವ ಲೆಕ್ಕ? ಎಂದು ಸಂಸದ ಡಿ.ಕೆ.ಸುರೇಶ್ ಹೆಸರು ಪ್ರಸ್ತಾಪಿಸದೇ ಹೆಚ್ಡಿಕೆ ಟಾಂಗ್ ಕೊಟ್ಟರು.
ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ, ಶಕ್ತಿ ಯೋಜನೆಗೆ ಚಾಲನೆ ನೀಡಿದ ವಿಚಾರ ಕುರಿತ ಮಾತನಾಡಿ, ಸರ್ಕಾರದ ಐದು ಗ್ಯಾರಂಟಿ ಯೋಜನೆ ಬಗ್ಗೆ ಚರ್ಚೆ ಮಾಡಲು ಇನ್ನೂ ಸಮಯ ಇದೆ. ಕೊಟ್ಟ ಮಾತನ್ನು ಉಳಿಸಿಕೊಳ್ತಿವಿ ಅಂತಿದ್ದಾರೆ. ಅದರೆ ಸೌಲಭ್ಯಗಳನ್ನು ಫಲಾನುಭವಿಗಳಿಗೆ ಹೇಗೆ ತಲುಪಿಸುತ್ತಾರೆ ಅನ್ನೋದು ಮುಖ್ಯ. ಈಗಾಗಲೇ ಬಾಡಿಗೆದಾರರಿಗೆ ಉಚಿತ ವಿದ್ಯುತ್ ಇಲ್ಲ ಅಂತಿದ್ದರು. ಆಮೇಲೆ ಕೊಡ್ತೀವಿ ಅಂದ್ರು, ಈಗ ಮನೆ ಮಾಲೀಕರು ಬಾಡಿಗೆದಾರರ ಜತೆ ಅಗ್ರಿಮೆಂಟ್ ಮಾಡಿಕೊಳ್ಳುತ್ತಿಲ್ಲ. ನಾನಾ ಸಮಸ್ಯೆಗಳು ಉದ್ಭವ ಆಗ್ತಿವೆ. ಘೋಷಣೆ ಮಾಡಿದಾಗ ನನಗೂ ಫ್ರೀ, ನಿನಗೂ ಫ್ರೀ ಅಂದರು. ಈಗ ಅದನ್ನೆಲ್ಲ ಯಾವರೀತಿ ನಿಬಾಯಿಸುತ್ತಾರೆ ಎನ್ನುವುದನ್ನ ಕಾದು ನೋಡಬೇಕು ಎಂದು ಕುಮಾರಸ್ವಾಮಿ ತಿಳಿಸಿದರು.