i
ಕಾಪರಹಳ್ಳಿ ಸರ್ಕಾರಿ ಶಾಲೆಯ ಹೆಚ್ಚುವರಿ ಕೊಠಡಿ ನಿರ್ಮಾಣಕ್ಕೆ ಚಾಲನೆ ನೀಡಿದ ಶಾಸಕ ರಘುಮೂರ್ತಿ…
ಚಂದ್ರವಳ್ಳಿ ನ್ಯೂಸ್, ಚಳ್ಳಕೆರೆ:
ಇತ್ತೀಚಿನ ವರ್ಷಗಳಲ್ಲಿ ಗ್ರಾಮೀಣ ಪ್ರದೇಶದ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಶೈಕ್ಷಣಿಕ ಕ್ಷೇತ್ರದಲ್ಲಿ ತಮ್ಮದೆಯಾದ ಮುನ್ನಡೆ ಸಾಧಿಸುವಲ್ಲಿ ಸಫಲರಾಗಿದ್ದಾರೆ. ಅನೇಕ ಕೊರತೆಗಳ ನಡುವೆಯೂ ಸಹ ತಮ್ಮ ಭವಿಷ್ಯದ ಬದುಕನ್ನು ಉತ್ತಮ ಪಡಿಸಿಕೊಳ್ಳಲು ಶಿಕ್ಷಣದತ್ತ ಗಮನಹರಿಸುತ್ತಿರುವುದು ಉತ್ತಮ ಬೆಳವಣಿಗೆ. ಗ್ರಾಮೀಣ ಭಾಗದ ಶೈಕ್ಷಣಿಕ ಬೆಳವಣಿಗೆಗೆ ಸರ್ಕಾರದೊಂದಿಗೆ ಖಾಸಗಿ ಸಂಸ್ಥೆಗಳು ಸಹ ಕೈಜೋಡಿಸವ ಮೂಲಕ ವಿದ್ಯಾರ್ಥಿಗಳ ಕಲಿಕೆಗೆ ಪೂರಕ ವಾತಾವಣ ನಿರ್ಮಿಸುತ್ತಿರುವುದು ಹೆಚ್ಚು ಸಂತಸ ತಂದಿದೆ ಎಂದು ಕ್ಷೇತ್ರದ ಶಾಸಕ ಟಿ.ರಘುಮೂರ್ತಿ ತಿಳಿಸಿದರು. ಅವರು, ಶನಿವಾರ ಸಾಣೀಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಪರಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಸುಮಾರು ೨೫ ಲಕ್ಷ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಿರುವ ಎರಡು ಕೊಠಡಿಗಳಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು. ಕಳೆದ ಸುಮಾರು ವರ್ಷಗಳಿಂದ ಹೆಗ್ಗೆರೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರಕಾಶ್ ಸ್ಪಾಂಜ್ ಐರನ್ ಪ್ರೈವೇಟ್ ಲಿಮಿಟೆಡ್ ಕಂಪನಿಯವರು ಎರಡು ಕೊಠಡಿಗಳ ನಿರ್ಮಾಣಕ್ಕೆ ಹಣ ನೀಡುತ್ತಿದ್ದು, ಶಾಸಕರು ಕಂಪನಿಯ ಸಹಕಾರಕ್ಕೆ ಸರ್ಕಾರದ ಪರವಾಗಿ ಅಭಿನಂದನೆ ಸಲ್ಲಿಸಿದರು.
ಗ್ರಾಮೀಣ ಪ್ರದೇಶದಲ್ಲಿ ಹಲವಾರು ಶಾಲೆಗಳಲ್ಲಿ ಹೆಚ್ಚುವರಿ ಕೊಠಡಿಗಳ ಅವಶ್ಯಕತೆ ಇದ್ದು, ದಾನಿಗಳು ಮುಂದೆ ಬಂದು ಮಕ್ಕಳ ವಿದ್ಯಾಬ್ಯಾಸದ ದೃಷ್ಠಿಯಿಂದ ನೆರವು ನೀಡಬೇಕು ಎಂದು ತಿಳಿಸಿದ ಶಾಸಕರು, ತಾಲ್ಲೂಕಿನಾದ್ಯಂತ ಹೆಚ್ಚುವರಿ ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಸಂಬಂದಪಟ್ಟ ಶಿಕ್ಷಣ ಸಚಿವರೊಂದಿಗೆ ಚರ್ಚಿಸಿರುವುದಾಗಿ ತಿಳಿಸಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಎಸ್.ಸುರೇಶ್ ಮಾತನಾಡಿ, ತಾಲ್ಲೂಕಿನ ಸುಮಾರು ೯೦ ಶಾಲೆಗಳಲ್ಲಿ ಹೆಚ್ಚುವರಿ ಕೊಠಡಿಗಳ ನಿರ್ಮಾಣಕ್ಕೆ ಸರ್ಕಾರಕ್ಕೆ ವರದಿ ನೀಡಲಾಗಿದೆ. ಸರ್ಕಾರದಿಂದ ಆದೇಶ ಬಂದಕೂಡಲೇ ಕೊಠಡಿಗಳ ದುರಸ್ಥಿ ಹಾಗೂ ನಿರ್ಮಾಣ ಕಾರ್ಯ ಪ್ರಾರಂಭವಾಗಲಿದೆ. ಗ್ರಾಮದಲ್ಲಿ ಪ್ರಕಾಶ್ ಸ್ಪಾಂಜ್ ಕಂಪನಿಯವರು ಸ್ವಯಂ ಪ್ರೇರಿತವಾಗಿ ಕೊಠಡಿಗಳ ನಿರ್ಮಾಣಕ್ಕೆ ಆರ್ಥಿಕ ನೆರವು ನೀಡಿತ್ತಿದ್ದು ಶಿಕ್ಷಣ ಇಲಾಖೆ ಪರವಾಗಿ ಕಂಪನಿ ವ್ಯವಸ್ಥಾಪಕರನ್ನು ಅಭಿನಂದಿಸುವುದಾಗಿ ತಿಳಿಸಿದರು.
ಕಂಪನಿ ವ್ಯವಸ್ಥಾಪಕ ನಿರ್ದೇಶಕ ರುದ್ರಪ್ಪ, ಇಂಜಿನಿಯರ್ ಮಂಜುನಾಥ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶ್ರುತಿ, ಸದಸ್ಯರಾದ ಕರಿಯಮ್ಮ, ಲಿಂಗರಾಜು, ಸಿದ್ದಮ್ಮ, ರಂಗಸ್ವಾಮಿ, ತಿಪ್ಪೇಸ್ವಾಮಿ, ಲಿಂಗಣ್ಣ, ನೂತನ್, ಮಂಜುನಾಥ, ಮುಖ್ಯ ಶಿಕ್ಷಕಿ ವಿ.ರಂಗಮ್ಮ, ಎಂ.ಎಸ್.ವೀರಾರಾಧ್ಯ, ಎಂ.ಬಿ.ನಾಗರಾಜು, ಎನ್.ಎಸ್.ಶಿವರಾಜ್, ಕೆ.ಟಿ.ಸತೀಶ್ ಮುಂತಾದವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.