i
ಚಿತ್ರದುರ್ಗ ಜಿಲ್ಲಾ ಒಕ್ಕಲಿಗರ ಸಂಘದ ನೂತನ ಅಧ್ಯಕ್ಷರಾಗಿ ಜಿ.ಪಿ.ಚೇತನ್ ಅವಿರೋಧ ಆಯ್ಕೆ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಜಿಲ್ಲೆಯ ಎಲ್ಲ ಕುಂಚಿಟಿಗ ಒಕ್ಕಲಿಗರ ಸರ್ವತೋಮುಖ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸಲು ನಾನು ಬದ್ಧನಾಗಿದ್ದೇನೆ ಎಂದು ಜಿಲ್ಲಾ ಒಕ್ಕಲಿಗರ ಸಂಘದ ನೂತನ ಅಧ್ಯಕ್ಷ ಜಿ.ಪಿ.ಚೇತನ್ ಹೇಳಿದರು.
ಇಲ್ಲಿನ ಜಿಲ್ಲಾ ಒಕ್ಕಲಿಗರ ಸಮುದಾಯ ಭವನದಲ್ಲಿ ಭಾನುವಾರ ನಡೆದ ಕಾರ್ಯಕಾರಿ ಸಮಿತಿಯಲ್ಲಿ ಹಿಂದಿನ ಅಧ್ಯಕ್ಷರಾಗಿದ್ದ ಜಿ.ಹನುಮಂತಪ್ಪ ರಾಜೀನಾಮೆ ನೀಡಿದ್ದರಿಂದ ಕಾರ್ಯಕಾರಿ ಸಮಿತಿ ಜಿ.ಪಿ.ಚೇತನ್ ಅವರನ್ನು ಅಧ್ಯಕ್ಷರನ್ನಾಗಿ ಅವಿರೋಧವಾಗಿ ಆಯ್ಕೆ ಮಾಡಿದ ಸಂದರ್ಭದಲ್ಲಿ ಅವರು ಮಾತನಾಡಿದರು. ಚಿತ್ರದುರ್ಗ ಜಿಲ್ಲೆಯಾದ್ಯಂತ ಇರುವ ಕುಂಚಿಟಿಗ ಒಕ್ಕಲಿಗರಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿ, ಕೇಂದ್ರದ ಒಬಿಸಿ ಮೀಸಲು ಹಾಗೂ ರಾಜ್ಯದಲ್ಲಿ ಕುಲಶಾಸ್ತ್ರೀಯ ಅಧ್ಯಯನ ವರದಿಯನ್ನು ಯಥಾವತ್ ಅನುಷ್ಠಾನ ಮಾಡಲು ಪ್ರಮಾಣಿಕವಾಗಿ ಸಮಾಜದ ಹಿರಿಯರೊಂದಿಗೆ ಕೈ ಜೋಡಿಸುತ್ತೇನೆ ಎಂದು ಅಧ್ಯಕ್ಷರು ತಿಳಿಸಿದರು.
ನೆನೆಗುದಿಗೆ ಬಿದ್ದಿರುವ ಸಮಾಜದ ಸಮುದಾಯ ಭವನ ನಿರ್ಮಾಣದ ಕಾಮಗಾರಿಯನ್ನು ಸಂಪೂರ್ಣಗೊಳಿಸಲು ಪ್ರಯತ್ನಿಸುತ್ತೇನೆ. ಜಿಲ್ಲೆಯಲ್ಲಿ ಎಸ್ಸೆಸ್ಸೆಲ್ಸಿ ಮತ್ತು ಪದವಿ ಪೂರ್ವ ಕಾಲೇಜಿನಲ್ಲಿ ಅತಿ ಹೆಚ್ಚು ಅಂಕಗಳನ್ನು ಪಡೆದಿರುವ ಸಮುದಾಯದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಸಂಘದ ಅಭಿವೃದ್ಧಿಗೆ ಶ್ರಮಿಸುತ್ತೇನೆ. ಅಲ್ಲದೆ ರಾಜ್ಯ ಸಚಿವ ಸಂಪುಟದಲ್ಲಿ ಕುಂಚಿಟಿಗ ಒಕ್ಕಲಿಗ ಸಮಾಜಕ್ಕೆ ಸಚಿವ ಸ್ಥಾನ ನೀಡುವಂತೆ ರಾಜ್ಯ ಸರ್ಕಾರದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಕಾಂಗ್ರೆಸ್ ವರಿಷ್ಠರಲ್ಲಿ ಒತ್ತಾಯ ಮಾಡುವುದಾಗಿ ಅವರು ಹೇಳಿದರು.
ಸಂಘದ ನಿರ್ದೇಶಕರಾದ ಡಾ.ವಿ.ವೀರಣ್ಣ, ಕೆ.ಟಿ.ರುದ್ರಮುನಿ, ಎಸ್.ಚನ್ನಕೇಶವ, ಗುಣ್ಣಯ್ಯ ಮಾತನಾಡಿದರು.
ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಜೆ.ರಾಜು ಬೇತೂರು ಪಾಳ್ಯ ಅವರು ಈಗಾಗಲೇ ರಾಜ್ಯ ಒಕ್ಕಲಿಗರ ಸಂಘದಿಂದ ವಿದ್ಯಾರ್ಥಿನಿಯರಿಗೆ ಪಿಜಿ ಹಾಸ್ಟೆಲ್ ಮಂಜೂರಾಗಿದ್ದು ಅತಿ ಶೀಘ್ರದಲ್ಲೇ ಹಾಸ್ಟೆಲ್ ಕಟ್ಟಡ ಭೂಮಿಯನ್ನು ನರೆವೇರಿಸಲಾಗುತ್ತದೆ ಎಂದು ಭರವಸೆ ನೀಡಿರುವುದರಿಂದ ಆ ಹಾಸ್ಟೆಲ್ ನಿರ್ಮಾಣಕ್ಕೆ ಎಲ್ಲ ರೀತಿಯ ಸಹಾಯ ಮಾಡುವುದಾಗಿ ನಿರ್ದೇಶಕ ಕೆ.ಟಿ.ರುದ್ರಮುನಿ ಅವರು ತಿಳಿಸಿದರು.
ಸಭೆಯ ಅಧ್ಯಕ್ಷತೆಯನ್ನು ಒ.ಎಲ್.ಮಂಜು ಕುಮಾರ್ ವಹಿಸಿದ್ದರು. ವೇದಿಕೆಯಲ್ಲಿ ಪ್ರಧಾನ ಕಾರ್ಯದರ್ಶಿ ಎಸ್.ಜಗನ್ನಾಥ್, ನಿಕಟಪೂರ್ವ ಅಧ್ಯಕ್ಷ ಜಿ.ಹನುಮಂತಪ್ಪ, ಗೌರವಾಧ್ಯಕ್ಷ ಎನ್.ಈರಣ್ಣ, ಉಪಾಧ್ಯಕ್ಷ ಹೆಚ್.ಚಂದ್ರಯ್ಯ, ನಿಕಟಪೂರ್ವ ಗೌರವಾಧ್ಯಕ್ಷ ಎಚ್.ಆರ್.ತಿಮ್ಮಯ್ಯ, ನಿರ್ದೇಶಕರಾದ ಆರ್.ಪರಮೇಶ್ವರ, ಶಿವಣ್ಣ ಹಾರ್ಡ್ ವೇರ್, ಚಿತ್ರದುರ್ಗದ ಕೆ.ರಮೇಶ್ ಬಾಬು, ಕೆ.ಸಿ.ದಿನೇಶ್ ಸೇರಿದಂತೆ ಬಹುತೇಕ ನಿರ್ದೇಶಕರು, ಕಾರ್ಯಕಾರಿ ಸಮಿತಿ ಸದಸ್ಯರುಗಳು ಉಪಸ್ಥಿತರಿದ್ದರು.