i
ಯಾರಿಗೂ ಲಂಚ ಕೊಡಬೇಡಿ, ನೀವು ಲಂಚ ತಗೋ ಬೇಡಿ. ಭ್ರಷ್ಟರ ಬೋರ್ಡ್ ಹಾಕಿಸಿ-ಡಿಕೆಶಿ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಭ್ರಷ್ಟಾಚಾರದ ವಿರುದ್ಧ ಸಾರ್ವಜನಿಕರು ಮಾಹಿತಿ ನೀಡಲು ಜಿಲ್ಲಾ ಪಂಚಾಯಿತಿ ಸೇರಿದಂತೆ ಸರ್ಕಾರಿ ಕಚೇರಿಯಲ್ಲಿ ಬೋರ್ಡ್ ಹಾಕಿಸಿ ಎಂದು ಡಿಸಿಎಂ ಡಿಕೆ ಶಿವಕುಮಾರ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ರಾಮನಗರ ಜಿಲ್ಲಾ ಪಂಚಾಯಿತಿ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾತನಾಡಿದ ಅವರು, ನೀವು ಯಾರಿಗೂ ಲಂಚ ಕೊಡಬೇಡಿ. ಲಂಚ ಕೊಡುವ ಅಗತ್ಯವಿಲ್ಲ, ಹಾಗೆಯೇ ನೀವು ಲಂಚ ತಗೋ ಬೇಡಿ. ನಾನು ಯಾರನ್ನು ವರ್ಗಾವಣೆ ಮಾಡಿಸೋಲ್ಲ. ನಮ್ಮನ್ನು ಜನ ಆಯ್ಕೆ ಮಾಡಿದ್ದಾರೆ. ಜನರ ಸೇವೆ ಮಾಡಲು ಅವಕಾಶ ಕೊಟ್ಟಿದ್ದಾರೆ. ಸರ್ಕಾರದ ಸೇವೆ ಮಾಡಲು ನೀವಿದ್ದಿರಿ. ರಾಜಕಾರಣಿಗಳು ಅಧಿಕಾರಿಗಳ ಬಳಿ ಜನ ಬರೋದು ಸಮಸ್ಯೆ ಬಗೆಹರಿಯದೇ ಇದ್ದಾಗ. ಆ ಸಮಸ್ಯೆ ಬಗೆಹರಿಸಬೇಕಾದ್ದು ನಮ್ಮ ಕರ್ತವ್ಯ ಎಂದು ಡಿಸಿಎಂ ಹೇಳಿದರು.
ಸಾರ್ವಜನಿಕರು ಬಿಜೆಪಿ ಆಡಳಿತ ವೈಖರಿ ನೋಡಿದ್ದಾರೆ. ಅದು ಜನರಿಗೆ ಹತ್ತಿರವಾಗುವ ಆಡಳಿತವಲ್ಲ, ಕರೆಪ್ಷನ್ ಕ್ಯಾಪಿಟಲ್ ಎಂಬ ಕಾರಣಕ್ಕೆ ಬಿಜೆಪಿ ಬದಲಾಯಿಸಿ ನಮ್ಮನ್ನು ಅಧಿಕಾರದಲ್ಲಿ ಕೂರಿಸಿದ್ದಾರೆ. ಹೀಗಾಗಿ ಲಂಚದಿಂದ ಎಲ್ಲರೂ ದೂರ ಉಳಿಯಬೇಕು ಎಂದು ಡಿಕೆಶಿ ಅವರು ಕಟ್ಟು ನಿಟ್ಟಿನ ಸೂಚನೆ ನೀಡಿದರು.
ಇಡೀ ಜಿಲ್ಲೆಗೆ ಏನೋ ರೋಗ ಬಂದಂತೆ ಕಾಣುತ್ತಿದೆ. ಅಧಿಕಾರಿಗಳು ಹಿಂದಿನ ಸರ್ಕಾರದ ಮತ್ತಲ್ಲೇ ಇರುವಂತಿದೆ. ನಿಮ್ಮ ವರ್ತನೆ ಸರಿ ಮಾಡಿಕೊಳ್ಳಬೇಕು. ಜನರ ಸಮಸ್ಯೆಯನ್ನು ಕಾನೂನು ಚೌಕಟ್ಟಿನೊಳಗೆ ಪರಿಹರಿಸಿ. ನಿಮ್ಮತ್ರ ಯಾವ ರೀತಿ ಕೆಲಸ ಮಾಡಿಸಬೇಕು ಎಂದು ಗೊತ್ತಿದೆ. ಔಟ್ ಆಫ್ ದಿ ವೇ ಹೋಗಬೇಡಿ ಎಂದು ಡಿಸಿಎಂ ಎಲ್ಲ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.
ಕೇಂದ್ರ ಸ್ಥಾನದಲ್ಲಿಯೇ ಮನೆ ಮಾಡಿ: ಎಷ್ಟು ಮಂದಿ ಹೆಡ್ ಕ್ವಾರ್ಟರ್ಸ್ನಲ್ಲಿ ಮನೆ ಮಾಡಿದ್ದೀರಿ ಎಂದು ಕೇಳಿದ ಡಿಸಿಎಂ ನಿಮಗೆ ಒಂದು ತಿಂಗಳು ಅವಕಾಶ ಕೊಡ್ತೀನಿ. ಹೆಡ್ ಕ್ವಾರ್ಟರ್ಸ್ನಲ್ಲೇ ಇದ್ದು ಕೆಲಸ ಮಾಡಬೇಕು. ಹೆಡ್ ಕ್ವಾರ್ಟರ್ಸ್ ಬಿಟ್ಟು ಹೋದರೆ ಡಿಸಿ ಅವರು ನಮಗೆ ಮಾಹಿತಿ ಕೊಡಬೇಕು. ಗ್ರಾಮ ಪಂಚಾಯ್ತಿಯಿಂದ ಜಿಲ್ಲಾಮಟ್ಟದ ಅಧಿಕಾರಿವರೆಗೆ ಎಲ್ಲರೂ ಕೇಂದ್ರಸ್ಥಾನದಲ್ಲೇ ಉಳಿದುಕೊಂಡು ಕೆಲಸ ಮಾಡಿ ಸಾರ್ವಜನಿಕರ ಸಮಸ್ಯೆ ನಿವಾರಿಸಬೇಕು ಎಂದು ಸೂಚಿಸಿದರು.
ಭ್ರಷ್ಟರ ಬೋರ್ಡ್ ಹಾಕಿಸಿ: ಜಿಲ್ಲೆಯ ಎಲ್ಲ ಇಲಾಖೆಗಳ ಎಲ್ಲ ಅಧಿಕಾರಿಗಳ ಹೆಸರು, ಫೋನ್ ನಂಬರ್, ವಿಳಾಸದ ಡೈರಿ ಮಾಡಿ, ಅವರ ಫೋಟೋ ಸಮೇತ ಪುಸ್ತಕ ಮಾಡಿ. ಒಂದು ಡಿಸ್ಟ್ರಿಕ್ಟ್ ಗ್ರೂಪ್ ಮಾಡಿ. ಕಚೇರಿಗೆ ಬಂದು ಹೋಗುವವರ ಬಗ್ಗೆ ಬಯೋಮೆಟ್ರಿಕ್ ಹಾಜರಾತಿ ಕಡ್ಡಾಯ. ನಾನೇ ಬಯೋಮೆಟ್ರಿಕ್ ಮಷೀನ್ ಕೊಡಿಸ್ತೀನಿ. ಸರ್ಕಾರಿ ಯೋಜನೆಗಳನ್ನು ಸರಿಯಾಗಿ ಜನರಿಗೆ ತಲುಪಿಸಿ. ಭ್ರಷ್ಟಾಚಾರದ ವಿರುದ್ಧ ಮಾಹಿತಿ ನೀಡಲು ಬೋರ್ಡ್ ಹಾಕಿಸಿ. ಕೆಲವರು ಆರ್ ಟಿ ಇ ಕಾರ್ಯಕರ್ತರ ಹೆಸರಲ್ಲಿ ವಂಚಕರು ಸೇರಿದ್ದಾರೆ. ಅವರಿಗೆ ಹೆದರುವ ಅವಶ್ಯಕತೆ ಇಲ್ಲ. ಯಾವುದೇ ಪ್ರೈವೇಟ್ ಕ್ಲಬ್ ಇರಬಾರದು. ಗಾಂಜಾ, ರೇವಾ ಪಾರ್ಟಿ ಯಾವುದಕ್ಕೂ ಜಿಲ್ಲೆಯಲ್ಲಿ ಅವಕಾಶವಿಲ್ಲ. ಕಾನೂನು ಸುವ್ಯವಸ್ಥೆ ಕಡೆ ಪೊಲೀಸರು ಗಮನಹರಿಸಬೇಕು ಎಂದು ಸೂಚನೆ ನೀಡಿದರು.
ಕ್ಯಾಮೆರಾ ಹಾಕಿಸಿ: ಬೆಂಗಳೂರು ಸೇರಿದಂತೆ ಮತ್ತಿತರ ಕಡೆಗಳಿಂದ ತ್ಯಾಜ್ಯ ತಂದು ರಸ್ತೆಗಳ ಪಕ್ಕ ಸುರಿಯುತ್ತಿದ್ದಾರೆ. ಅಲ್ಲಿಗೆ ಕ್ಯಾಮರಾ ಹಾಕಿ. ಬೇಕಾಬಿಟ್ಟಿ ತ್ಯಾಜ್ಯ ನಿರ್ವಹಣೆಗೆ ಕಡಿವಾಣ ಹಾಕಿ. ಮುಖ್ಯವಾಗಿ ಬೆಂಗಳೂರಿನಿಂದ ಪ್ರವೇಶ ಪಡೆಯುವ ರಾಮನಗರ, ಕನಕಪುರ, ಮಾಗಡಿ ರಸ್ತೆಗಳಿಗೆ ಕ್ಯಾಮರಾ ಹಾಕಿ. ಇದರಿಂದ ಅಪರಾಧ ಚಟುವಟಿಕೆ ತಡೆಗೂ ಸಹಕಾರಿಯಾಗುತ್ತದೆ ಎಂದು ಶಿವಕುಮಾರ್ ಸೂಚನೆ ನೀಡಿದರು.
ವಿಡಿಯೋ ಫೋಟೊ ಕಡ್ಡಾಯ: ಯಾವುದೇ ಕಾಮಗಾರಿ ಪ್ರಾರಂಭಕ್ಕೂ ಮುನ್ನಾ ಹಾಗೂ ಮುಗಿದ ನಂತರ ವಿಡಿಯೋ, ಪೋಟೋ ತೆಗೆಯಬೇಕು. ಕೆಲಸ ಪ್ರಗತಿ ಪ್ರತಿ ಹಂತದ ವಿಡಿಯೋ, ಫೋಟೋ ಇರಬೇಕು. ಕಳ್ಳಬಿಲ್ಲು, ಡಬಲ್ ಎಂಟ್ರಿಗೆ ಆಸ್ಪದ ಇಲ್ಲದಂತೆ ಎಚ್ಚರ ವಹಿಸಿ. ಎರಡು ಇಲಾಖೆ, ಎರಡು ಬಿಲ್ ಸೃಷ್ಟಿ ಮಾಡಿದರೆ ಆಕ್ಷನ್ ತಗೋತೀವಿ. ರಸ್ತೆ ಮ್ಯಾಪಿಂಗ್ ಮಾಡಿ. ಯಾವ ಇಲಾಖೆ ಅನುದಾನ, ಎಂಎಲ್ಎ, ಎಂಪಿ ಗ್ರಾಂಟ್ ಬಗೆಗಿನ ಸಂಪೂರ್ಣ ವಿವರವನ್ನು ದಾಖಲಿಸಿಕೊಳ್ಳಲು ಅಧಿಕಾರಿಗಳಿಗೆ ಡಿಸಿಎಂ ಸಲಹೆ ನೀಡಿದರು.