i
ಎಸ್ಸಿ, ಎಸ್ಟಿ ಸಮುದಾಯಗಳಿಗೆ ನೀಡುವ ಸೌಲಭ್ಯಗಳನ್ನು ಅಲೆಮಾರಿಗಳಿಗೂ ವಿಸ್ತರಿಸಿ-ಮೀಸೆ ಮಹಾಲಿಂಗಪ್ಪ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಮಕ್ಕಳಿಗೆ ನೀಡುವ ಎಲ್ಲ ರೀತಿಯ ಸೌಲಭ್ಯಗಳನ್ನು ಅಲೆಮಾರಿ ಮತ್ತು ಅರೆ ಅಲೆಮಾರಿ ಜನಾಂಗದ ಮಕ್ಕಳ ಶಿಕ್ಷಣ, ಹಾಸ್ಟೆಲ್ ಹಾಗೂ ಇತರೆ ಮೂಲಭೂತ ಸೌಲಭ್ಯಗಳ ವಿಸ್ತರಿಸಲಿ ಎಂದು ಕರ್ನಾಟಕ ರಾಜ್ಯ ಅಲೆಮಾರಿ ಮತ್ತು ಅರೆಅಲೆಮಾರಿ ಜನಾಂಗಗಳ ಒಕ್ಕೂಟದ ಗೌರವಾಧ್ಯಕ್ಷ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಮಹಾಲಿಂಗಪ್ಪ ಹೇಳಿದರು.ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಲೆಮಾರಿ ಜನಾಂಗವನ್ನು ಸರ್ಕಾರ ಸಂಪೂರ್ಣ ನಿರ್ಲಕ್ಷ್ಯ ಮಾಡಿದೆ. ಕೇವಲ 100 ಕೋಟಿ ರೂ.ಗಳನ್ನು ಸರ್ಕಾರ ಅಲೆಮಾರಿ ಸಮುದಾಯಗಳಿಗೆ ನೀಡುತ್ತದೆ. ಆದರೆ ಅದು ಸದ್ಬಳಕೆ ಆಗುವುದಿಲ್ಲ, ಜನಪ್ರತಿನಿಧಿಗಳು ಕಮೀಷನ್ ಗಾಗಿ ಆ ಅನುದಾನ ಬಳಕೆ ಮಾಡುತ್ತಿರುವುದು ನೋವಿನ ಸಂಗತಿ ಎಂದು ಅವರು ಬೇಸರ ವ್ಯಕ್ತ ಪಡಿಸಿದರು.
ಸರ್ಕಾರದ ಸೌಲಭ್ಯಗಳ ಸದ್ಬಳಕೆಗಾಗಿ ಮತ್ತು ಅಲೆಮಾರಿ ಸಮುದಾಯಗಳ ಮೂಲ ಕಸುಬು, ಸಂಸ್ಕೃತಿ ಆಚಾರ ವಿಚಾರ ಪರಿಯಿಸುವ ಉದ್ದೇಶದಿಂದ ಜಿಲ್ಲಾ ಅಲೆಮಾರಿ ಮತ್ತು ಅರೆಅಲೆಮಾರಿ ಜನಾಂಗದ ಜಿಲ್ಲಾ ಮಟ್ಟದ ಶಿಕ್ಷಣ, ಸಾಹಿತ್ಯ, ಸಾಂಸ್ಕೃತಿಕ ಕಲೋತ್ಸವವನ್ನು ಜು.೩೦ ರಂದು ಬೆಳಿಗ್ಗೆ ೧೦-೩೦ ಕ್ಕೆ ಕ್ರೀಡಾ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಅವರು ತಿಳಿಸಿದರು. ತಳಸಮುದಾಯಕ್ಕೆ ಸೇರಬೇಕಾಗಿರುವ ಹಣದಲ್ಲಿ ರಾಜಕಾರಣಿಗಳು ಸಿ.ಸಿ.ರಸ್ತೆಗೆ ಹಾಕಿ ಕಮೀಷನ್ ಹೊಡೆಯುವುದರಲ್ಲಿ ಕಾಲ ಕಳೆದರೆ ವಿನಃ ಅಲೆಮಾರಿ ಮತ್ತು ಅರೆಅಲೆಮಾರಿ ಜನಾಂಗದ ಮಕ್ಕಳ ಶಿಕ್ಷಣ ಹಾಗೂ ಹಾಸ್ಟೆಲ್ ಸೌಲಭ್ಯಕ್ಕೆ ಒತ್ತು ಕೊಡಲಿಲ್ಲ. ಆಗ ನಾನು ಹೋರಾಡಿದ ಫಲವಾಗಿ ಚಿತ್ರದುರ್ಗಕ್ಕೆ ಮೂರು ಹಾಸ್ಟೆಲ್ಗಳನ್ನು ನೀಡಲಾಗಿದೆ. ಹಾಗಾಗಿ ಈ ಸಮ್ಮೇಳನದ ಮೂಲಕ ಅಲೆಮಾರಿ ಮತ್ತು ಅರೆಅಲೆಮಾರಿ ಜನಾಂಗದವರಲ್ಲಿ ಉತ್ತೇಜನ ತುಂಬಲಾಗುವುದು ಎಂದು ಹೇಳಿದರು.ಅಲೆಮಾರಿ ಮತ್ತು ಅರೆ ಅಲೆಮಾರಿ ಜನಾಂಗಗಳ ಒಕ್ಕೂಟದ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರತಾಪ್ ಜೋಗಿ ಮಾತನಾಡಿ, ಅಲೆಮಾರಿ, ಅರೆ ಅಲೆಮಾರಿ ಸಮುದಾಯಗಳಿಗೆ ಸೇರಿದ ಎಸ್ಎಸ್ಎಲ್ ಸಿ, ಪಿಯುಸಿಯಲ್ಲಿ ಶೇ.90ಕ್ಕಿಂತ ಹೆಚ್ಚು ಅಂಕ ಪಡೆದ 29 ವಿದ್ಯಾರ್ಥಿಗಳು, ವಿವಿಧ ವಿಷಯಗಳ ಮೇಲೆ ಪಿಹೆಚ್ ಡಿ ಪದವಿ ಪಡೆದಿರುವ 11 ಸಾಧಕರು, ರಾಷ್ಟ್ರೀಯ ಅಂತರರಾಷ್ಟ್ರೀಯ ಮಟ್ಟದ ಕ್ರೀಡೆಗಳಲ್ಲಿ ಸಾಧನೆ ಮಾಡಿರುವಂತ ಇಬ್ಬರು ಕ್ರೀಡಾಪಟುಗಳನ್ನು ಆತ್ಮೀಯವಾಗಿ ಸನ್ಮಾನಿಸಲಾಗುತ್ತದೆ ಎಂದು ಅವರು ತಿಳಿಸಿದರು.
ಅಲೆಮಾರಿ, ಅರೆ ಅಲೆಮಾರಿ ಸಮುದಾಯಗಳ ಮೂಲ ಕಸುಬು, ಸಂಸ್ಕೃತಿ ಆಚಾರ ವಿಚಾರ ಪರಿಯಿಸುವ ಉದ್ದೇಶದಿಂದ ಜಿಲ್ಲೆಯಲ್ಲಿ ಪ್ರಪ್ರಥಮವಾಗಿ ಅಲೆಮಾರಿ ಮತ್ತು ಅರೆಅಲೆಮಾರಿ ಜನಾಂಗದ ಶಿಕ್ಷಣ, ಸಾಹಿತ್ಯ, ಸಾಂಸ್ಕೃತಿಕ ಕಲೋತ್ಸವವನ್ನು ನಗರದಲ್ಲಿ ಅಂದು ಏರ್ಪಡಿಸಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಉದ್ಘಾಟಿಸಲಿದ್ದಾರೆ ಎಂದು ಪ್ರತಾಪ್ ಜೋಗಿ ತಿಳಿಸಿದರು.
ಅಲೆಮಾರಿ ಸಮುದಾಯಗಳು ಸರ್ಕಾರದಿಂದ ಏನನ್ನೂ ಬೇಡುವುದಿಲ್ಲ, ಅಲೆಮಾರಿ ಸಮುದಾಯಗಳಿಗೆ ಸರ್ಕಾರ ಶಕ್ತಿ ತುಂಬವ ಕಾರ್ಯ ಮಾಡಬೇಕಿದೆ. ಸರ್ಕಾರದ ಸೌಲಭ್ಯಗಳು ಅಲೆಮಾರಿ ಸಮುದಾಯಗಳಿಗೆ ಮುಟ್ಟಬೇಕಿದೆ ಎಂದು ಅವರು ಪ್ರತಾಪ್ ಜೋಗಿ ತಿಳಿಸಿದರು.ಮುರುಘಾಮಠದ ಬಸವಪ್ರಭು ಸ್ವಾಮೀಜಿ ಸಾನಿಧ್ಯ ವಹಿಸಲಿದ್ದು, ಕೇಂದ್ರ ಮಂತ್ರಿ ಎ.ನಾರಾಯಣಸ್ವಾಮಿ, ಶಾಸಕರುಗಳಾದ ಎನ್.ವೈ.ಗೋಪಾಲಕೃಷ್ಣ, ಟಿ.ರಘುಮೂರ್ತಿ, ಎಂ.ಚಂದ್ರಪ್ಪ, ಬಿ.ಜಿ.ಗೋವಿಂದಪ್ಪ, ಕೆ.ಸಿ.ವೀರೇಂದ್ರಪಪ್ಪಿ, ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ. ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಕರ್ನಾಟಕ ರಾಜ್ಯ ಅಲೆಮಾರಿ ಮತ್ತು ಅರೆಅಲೆಮಾರಿ ಜನಾಂಗದ ಒಕ್ಕೂಟದ ಅಧ್ಯಕ್ಷ ತುಕಾರಾಮ ನಾಗಪ್ಪ ವಾಪರ ಇನ್ನು ಅನೇಕು ಆಗಮಿಸಲಿದ್ದಾರೆ. ಎಸ್.ಎಸ್.ಎಲ್.ಸಿ. ಹಾಗೂ ದ್ವಿತೀಯ ಪಿ.ಯು.ಸಿ.ಯಲ್ಲಿ ಶೇ.೯೦ ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದಿರುವ ವಿದ್ಯಾರ್ಥಿಗಳು, ಕಲೆ ಸಾಂಸ್ಕೃತಿಕ ಸಮಾಜಸೇವೆ, ಅಂತರಾಷ್ಟ್ರೀಯ ಕ್ರೀಡೆಯಲ್ಲಿ ಭಾಗವಹಿಸಿ ವಿಜೇತರಾದವರನ್ನು ಕಲೋತ್ಸವದಲ್ಲಿ ಸನ್ಮಾನಿಸಲಾಗುವುದು. ಗೋಸಾಯಿಗಳು, ಚಿಂದಿ ಆರಿಸುವವರು, ಕಿನ್ನರಿಜೋಗಿಗಳು, ದಾಸರು ಹೀಗೆ ಅಲೆಮಾರಿ ಮತ್ತು ಅರೆಅಲೆಮಾರಿ ಜನಾಂಗದವರು ತಮ್ಮ ತಮ್ಮ ಕುಲಕಸುಬನ್ನು ಸೂಚಿಸುವ ವೇಷಗಳನ್ನು ಧರಿಸಿ ಕಲೋತ್ಸವದಲ್ಲಿ ಪಾಲ್ಗೊಳ್ಳಲಿದ್ದಾರೆಂದು ತಿಳಿಸಿದರು.
ಅಲೆಮಾರಿ ಸಂಘದ ಜಿಲ್ಲಾ ಗೌರವಾಧ್ಯಕ್ಷ ಎ.ರಾಮು ಗೋಸಾಯಿ ಮಾತನಾಡಿ, ಸಾಮಾಜಿಕ, ಶೈಕ್ಷಣಿಕ, ಆರ್ಥಿಕ, ರಾಜಕೀಯವಾಗಿ ತೀರಾ ಹಿಂದುಳಿದಿರುವ ತಳ ಸಮುದಾಯಗಳಾದ ಅಲೆಮಾರಿ ಅರೆ ಅಲೆಮಾರಿ ಸಮುದಾಯಗಳ ಸಮಸ್ಯೆಗಳನ್ನು ರಾಜ್ಯ ಸರ್ಕಾರ ಗುರುತಿಸಬೇಕು, ಇಂತಹ ಸಮುದಾಯಗಳನ್ನು ಮುಖ್ಯವಾಹಿನಿಗೆ ತರುವ ಕಾರ್ಯವನ್ನು ಸರ್ಕಾರ ಮಾಡಬೇಕು ಎಂದು ಮನವಿ ಮಾಡಿದರು.
ಮಣಿಪುರದಲ್ಲಿನ ಬುಡಕಟ್ಟು ಜನಾಂಗಗಳ ಮೇಲೆ ನಡೆಯುತ್ತಿರುವ ದೌರ್ಜನ್ಯ, ಕೊತೆ, ಅತ್ಯಾಚಾರಗಳನ್ನು ಕೂಡಲೇ ಸ್ಥಗಿತಗೊಳಿಸಬೇಕು, ಬೆತ್ತಲೆಗೊಳಿಸಿರುವ ಮತ್ತು ಅತ್ಯಾಚಾರ ಎಸಗಿರುವ ದುಷ್ಟ ಶಕ್ತಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು.ಅಲೆಮಾರಿ ಮತ್ತು ಅರೆಅಲೆಮಾರಿ ಜನಾಂಗಗಳ ಒಕ್ಕೂಟದ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಜ್ಯೋತಿ, ರಾಜ್ಯ ಕಾರ್ಯಾಧ್ಯಕ್ಷೆ ಎಸ್.ಆರ್.ಇಂದಿರಾ ಗುರುಸ್ವಾಮಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕುಬೇಂದ್ರಪ್ಪ ದಾಸರ್, ತಾಲ್ಲೂಕು ಅಧ್ಯಕ್ಷ ಹೆಂಜಾರಪ್ಪ, ತಾಲ್ಲೂಕು ಸಂಘಟನಾ ಕಾರ್ಯದರ್ಶಿ ಚಿಕ್ಕಣ್ಣ, ಗೊಲ್ಲ ಸಮುದಾಯದ ಎಸ್.ಲಕ್ಷ್ಮಿಕಾಂತ್ ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.