i
ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಿದ ಶಾಸಕ ಟಿ.ರಘುಮೂರ್ತಿ…
ಚಂದ್ರವಳ್ಳಿ ನ್ಯೂಸ್, ಚಳ್ಳಕೆರೆ:
ರಾಜ್ಯದ ಜನತೆಗೆ ಕಾಂಗ್ರೆಸ್ ಪಕ್ಷ ನೀಡಿದ ಭರವಸೆಯನ್ನು ಪೂರ್ಣಮಟ್ಟದಲ್ಲಿ ಈಡೇರಿಸುವ ಜವಾಬ್ದಾರಿ ಸರ್ಕಾರದ್ದಾಗಿದ್ದು, ಈ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಈಗಾಗಲೇ ಹಲವಾರು ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ರಾಜ್ಯದ ಜನತೆಯ ವಿಶ್ವಾಸವನ್ನು ಗಳಿಸಿದೆ ಎಂದು ಶಾಸಕ ಟಿ.ರಘುಮೂರ್ತಿ ತಿಳಿಸಿದರು. ಅವರು, ಭಾನುವಾರ ತ್ಯಾಗರಾಜ ನಗರದಲ್ಲಿರುವ ಕರ್ನಾಟಕ ಒನ್ ಕೇಂದ್ರದಲ್ಲಿ ಸರ್ಕಾರದ ಮಹತ್ತರ ಯೋಜನೆಯಾದ ಗೃಹಲಕ್ಷ್ಮಿ ಯೋಜನೆಯ ಆದೇಶ ಪ್ರತಿ ವಿತರಿಸಿ ಮಾತನಾಡಿದರು. ರಾಜ್ಯದಲ್ಲಿಯೇ ಎಲ್ಲಾ ಕೇಂದ್ರಗಳಲ್ಲಿ ಮಹಿಳೆಯರು ಸ್ವಯಂ ಪ್ರೇರಣೆಯಿಂದ ಆಗಮಿಸಿ ಯೋಜನೆಯ ಪ್ರಯೋಜನವನ್ನು ಪಡೆದುಕೊಳ್ಳಲು ಮುಂದಾಗಿದ್ದಾರೆ. ಕಳೆದ ಜೂನ್೧೧ರಿಂದ ಮಹಿಳೆಯರಿಗೆ ಉಚಿತ ಬಸ್ ವ್ಯವಸ್ಥೆಯನ್ನು ಸರ್ಕಾರ ಕಲ್ಪಿಸಿದೆ, ಗೃಹಜ್ಯೋತಿ ಯೋಜನೆ ಪ್ರಗತಿಯಲ್ಲಿದೆ, ಅನ್ನಭಾಗ್ಯ ಯೋಜನೆಯ ಅಕ್ಕಿಯ ಜೊತೆಗೆ ಹಣವನ್ನೂ ಸಹ ಪಾವತಿ ಮಾಡಲಾಗುತ್ತಿದೆ. ರಾಜ್ಯದ ಜನತೆ ಹೆಚ್ಚು ನೆಮ್ಮದಿ ವಿಶ್ವಾಸ, ಸಂತೋಷದಿಂದ ಬದುಕುವ ಕಾಲವಾಗಿದೆ. ಕಾಂಗ್ರೆಸ್ ಪಕ್ಷದ ಈ ಕೊಡುಗೆ ಸಮಾಜದ ಎಲ್ಲಾ ವರ್ಗದ ಜನರಿಗೆ ತೃಪ್ತಿ ತಂದಿದೆ ಎಂದರು. ಪೌರಾಯುಕ್ತೆ ಟಿ.ಲೀಲಾವತಿ, ಕಾಂಗ್ರೆಸ್ ಮುಖಂಡ ರಾಮಪ್ಪ, ಕರ್ನಾಟಕ ಒನ್ ಸೆಂಟರ್ ಪ್ರತಿನಿಧಿ ಸಿ.ಪುರುಷೋತ್ತಮ, ಸರಸ್ವತಿ ಮುಂತಾದವರು ಉಪಸ್ಥಿತರಿದ್ದರು.