i
ನೈತಿಕ ಪೊಲೀಸ್ ಗಿರಿ ಅವಕಾಶವಿಲ್ಲ, ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ ಪರಿಶೀಲಿಸಿ ಕ್ರಮ-ಸಿಎಂ…
ಚಂದ್ರವಳ್ಳಿ ನ್ಯೂಸ್, ಉಡುಪಿ:
ಉಡುಪಿ ಕಾಲೇಜೊಂದರಲ್ಲಿ ಮೊಬೈಲ್ ಚಿತ್ರೀಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಸುವೋ ಮೋಟೋ ಪ್ರಕರಣವನ್ನು ದಾಖಲಿಸಿಕೊಂಡಿದ್ದು ಎಫ್.ಐ.ಆರ್ ರಿಜಿಸ್ಟರ್ ಆಗಿದೆ. ತನಿಖೆಯನ್ನು ಡಿ.ವೈ.ಎಸ್.ಪಿ ಮಟ್ಟದ ಅಧಿಕಾರಿ ಮಾಡುತ್ತಿದ್ದು, ಪ್ರಕರಣವನ್ನು ಎಸ್.ಐ.ಟಿಗೆ ವಹಿಸುವ ಪ್ರಶ್ನೆ ಉದ್ಭವವಾಗುವುದಿಲ್ಲ. ತನಿಖೆಯಾಗಿ ವರದಿ ಬಂದ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಅವರು ಉಡುಪಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ನಂತರ ಸರಣಿ ಟ್ವೀಟ್ ಮಾಡಿ ಮಾಹಿತಿ ನೀಡಿ ರಾಜ್ಯದಲ್ಲಿ ನೈತಿಕ ಪೊಲೀಸ್ ಗಿರಿ ಯಾರೇ ಮಾಡಿದರೂ ಅಂಥವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ತೆಗೆದುಕೊಳ್ಳಲಾಗುವುದು. ಯಾರೊಬ್ಬರೂ ಕಾನೂನನ್ನು ಕೈಗೆ ತೆಗೆದುಕೊಳ್ಳುವಂತಿಲ್ಲ ಎಂದು ಪೊಲೀಸರಿಗೆ ಸೂಚಿಸಿದ್ದೇನೆ.ನಾಡಿನ ಜನರಿಗೆ ಸುರಕ್ಷಿತ, ನೆಮ್ಮದಿಯ ವಾತಾವರಣ ಕಲ್ಪಿಸುವುದು ನಮ್ಮ ಕರ್ತವ್ಯ. ಇದಕ್ಕೆ ಅಡ್ಡಿಪಡಿಸುವವರು ಕಠಿಣ ಕಾನೂನು ಕ್ರಮ ಎದುರಿಸಬೇಕಾಗುತ್ತದೆ ಎಂದು ಸಿಎಂ ಎಚ್ಚರಿಸಿದ್ದಾರೆ.ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಸಿಬಿಐ ನ್ಯಾಯಾಲಯದಲ್ಲಿ ಇತ್ಯರ್ಥವಾಗಿದೆ. ಅವರ ಪೋಷಕರು ಹಾಗೂ ಸಾಮಾಜಿಕ ಹೋರಾಟಗಾರರು ಈ ಪ್ರಕರಣದ ಮರುತನಿಖೆಗೆ ಒತ್ತಾಯಿಸಿದ್ದಾರೆ. ಕಾನೂನಿನ ಪ್ರಕಾರ ಏನು ಕ್ರಮ ಕೈಗೊಳ್ಳಬಹುದೆಂದು ಚರ್ಚಿಸಿ ತೀರ್ಮಾನ ಮಾಡುತ್ತೇವೆ. ನ್ಯಾಯಾಲಯದ ತೀರ್ಪನ್ನು ಓದಿ, ನಂತರ ಮೇಲ್ಮನವಿ ಸಲ್ಲಿಸಲು ಅವಕಾಶವಿದ್ದರೆ ಸಲ್ಲಿಸಲಾಗುವುದು ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.ಸಾಮಾಜಿಕ ಜಾಲತಾಣಗಳಲ್ಲಿ ಸರ್ಕಾರದ ವಿರುದ್ಧ ಅಥವಾ ಯಾವುದೇ ವ್ಯಕ್ತಿಯ ವಿರುದ್ಧ ಅನಗತ್ಯವಾಗಿ ಸುಳ್ಳು ಸುದ್ದಿಗಳನ್ನು ಹಬ್ಬಿಸಿದರೆ ಅವರ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುವುದು. ರಚನಾತ್ಮಕ ಟೀಕೆ, ಟಿಪ್ಪಣಿಗಳಿಗೆ ನಾವು ಮುಕ್ತರಿದ್ದೇವೆ, ಆದರೆ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ದುರುಪಯೋಗ ಪಡಿಸಿಕೊಂಡು ಒಬ್ಬ ವ್ಯಕ್ತಿಯ ಅಥವಾ ಆತನ ಕುಟುಂಬದವರ ಮೇಲೆ ಸುಳ್ಳು ಸುದ್ದಿ ಹಬ್ಬಿಸುವುದು, ವೈಯಕ್ತಿಕವಾಗಿ ತೇಜೋವಧೆ ಮಾಡುವುದು ಇಂತದ್ದನ್ನು ಸಹಿಸುವುದಿಲ್ಲ ಎಂದು ಮುಖ್ಯಮಂತ್ರಿಗಳು ಎಚ್ಚರಿಸಿದ್ದಾರೆ.