i
ಸ್ವಾತಂತ್ರ್ಯ ಹೋರಾಟಗಾರ ಎ.ಭೀಮಪ್ಪ ಗೆ ಸನ್ಮಾನ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಕ್ವೀಟ್ ಇಂಡಿಯಾ ಚಳುವಳಿಯ ನೆನಪು ಹಾಗೂ ಭಾರತ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಜಿಲ್ಲಾಡಳಿತದ ವತಿಯಿಂದ ಬುಧವಾರ ಸ್ವಾತಂತ್ರ್ಯ ಹೋರಾಟಗಾರರ ಮನೆ ಬಾಗಿಲಿಗೆ ಹೋಗಿ ಸ್ವಾತಂತ್ರ್ಯ ಹೋರಾಟಗಾರರಿಗೆ ಆತ್ಮೀಯವಾಗಿ ಸನ್ಮಾನಿಸಿ ಗೌರವ ಸಮರ್ಪಿಸಲಾಯಿತು.
ಇದೇ ಆಗಸ್ಟ್ 15ರಂದು ನಡೆಯಲಿರುವ ಸ್ವಾತಂತ್ರ್ಯ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಗುತ್ತಿದ್ದು, ಕ್ವಿಟ್ ಇಂಡಿಯಾ ಚಳುವಳಿಯ ಸ್ಮರಣಾರ್ಥ ಹಾಗೂ ಸ್ವಾತಂತ್ರ್ಯ ದಿನಾಚರಣೆಗೂ ಮುನ್ನ ಸ್ವಾತಂತ್ರ್ಯ ಹೋರಾಟಗಾರರ ಮನೆಗೇ ತೆರಳಿ ಸನ್ಮಾನಿಸಬೇಕು ಎಂಬುದಾಗಿ ಸರ್ಕಾರದ ನಿರ್ದೇಶನವಿದ್ದು, ಅದರನ್ವಯ ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ಅವರು ಚಿತ್ರದುರ್ಗ ತಾಲ್ಲೂಕಿನ ಕೂನಬೇವು ಗ್ರಾಮಕ್ಕೆ ತೆರಳಿ ಸ್ವಾತಂತ್ರ್ಯ ಹೋರಾಟಗಾರ ಎ. ಭೀಮಪ್ಪ ಅವರಿಗೆ ಜಿಲ್ಲಾಡಳಿತದ ವತಿಯಿಂದ ಸನ್ಮಾನಿಸಿದರು.
ಚಿತ್ರದುರ್ಗ ತಾಲ್ಲೂಕಿನ ತುರುವನೂರು ಹೋಬಳಿ ಕೂನಬೇವು ಗ್ರಾಮದ ಸ್ವಾತಂತ್ರ್ಯ ಹೋರಾಟಗಾರ ಎ.ಭೀಮಪ್ಪ ಅವರು ಸನ್ಮಾನ ಸ್ವೀಕರಿಸಿ ಮಾತನಾಡಿ, ನಾನು ಬಾಲ್ಯದಲ್ಲಿ ತುರುವನೂರು ಪ್ರಾಥಮಿಕ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವಾಗ ಆ ಸಂದರ್ಭದದಲ್ಲಿ ಎಸ್.ನಿಜಲಿಂಗಪ್ಪ ಅವರು ಆಗಮಿಸಿ, ಗ್ರಾಮದ ಆಂಜನೇಯ ದೇಗುಲದಲ್ಲಿ ಜನರನ್ನು ಸೇರಿಸಿ ಭಾಷಣ ಮಾಡುತ್ತಿದ್ದರು. ಅವರ ಭಾಷಣದಿಂದ ಮನಸ್ಸು ಪರಿವರ್ತನೆಯಾಯಿತು. ದೇಶ ಯಾವ ಸ್ಥಿತಿಯಲ್ಲಿ ಇದೆ. ನಾವು ಏನಾಗಿದ್ದೇವೆ. ಪರಕೀಯರ ಅಧಿಕಾರಕ್ಕೆ ಒಳಪಟ್ಟಿದ್ದೇವೆ. ನಮಗೆ ಸ್ವಾತಂತ್ರ್ಯವಿಲ್ಲ ಎಂಬ ವಿಷಯ ಅರಿತು ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಬೇಕು ಎಂದು ತೀರ್ಮಾನಿಸಿ ಸ್ನೇಹಿತರ ಜೊತೆಗೆ ಎಸ್.ನಿಜಲಿಂಗಪ್ಪ ಅವರ ಅನುಯಾಯಿಗಳಾಗಿ ಸ್ವಾತಂತ್ರ್ಯ ಹೋರಾಟದಲ್ಲಿ ತೊಡಗಿಸಿಕೊಂಡೆವು ಎಂದು ಸ್ಮರಿಸಿದರು.
ಈಚಲು ಮರದ ಸತ್ಯಾಗ್ರಹದಲ್ಲಿ ಭಾಗಹಿಸಿ, ಈಚಲು ಮರಗಳನ್ನು ನಾಶ ಮಾಡಲಾಯಿತು. ಇದಕ್ಕಾಗಿ ಕೆಲವು ದಿನಗಳ ಕಾಲ ಬಂಧನದಲ್ಲಿಟ್ಟು, ಗಡಿಪಾರು ಮಾಡಲಾಯಿತು. ಆದಾಗ್ಯೂ ಎಸ್.ನಿಜಲಿಂಗಪ್ಪ ಅವರ ಅನುಯಾಯಿಗಳಾಗಿ ಭಾರತ ಸ್ವಾತಂತ್ರ್ಯಕ್ಕಾಗಿ ಹೋರಾಟದಲ್ಲಿ ಭಾಗವಹಿಸಿ, ಬ್ರಿಟೀಷರ ವಿರುದ್ಧ ಹೋರಾಟ ನಡೆಸಿ, ಸ್ವಾತಂತ್ರ್ಯ ಪಡೆಯಲಾಯಿತು ಎಂದು ತಮ್ಮ ಅನುಭವ ಹಂಚಿಕೊಂಡರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ, ಚಿತ್ರದುರ್ಗ ತಹಶೀಲ್ದಾರ್ ಡಾ.ನಾಗವೇಣಿ, ಉಪ ತಹಶೀಲ್ದಾರ್ ಪ್ರಕಾಶ್, ರಾಜಸ್ವ ನಿರೀಕ್ಷಕ ಎಂ.ಎಸ್.ಸ್ವಾಮಿ, ಗ್ರಾಮ ಆಡಳಿತಾಧಿಕಾರಿ ಶೋಭಾ ಉಪಸ್ಥಿತರಿದ್ದರು.
ಫೋಟೋ ವಿವರ: ಕ್ವಿಟ್ ಚಳುವಳಿಯ ನೆನಪು ಹಾಗೂ ಭಾರತ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಬುಧವಾರ ಜಿಲ್ಲಾಡಳಿತದ ವತಿಯಿಂದ ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ಅವರು ಸ್ವಾತಂತ್ರ್ಯ ಹೋರಾಟಗಾರ ಎ.ಭೀಮಪ್ಪ ಅವರಿಗೆ ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಿದರು.