i
ಭೀಕರ ಅಪಘಾತ ಶಾಲಾ ಮಕ್ಕಳಿಬ್ಬರ ದುರ್ಮರಣ, ಮೂರು ಮಕ್ಕಳು ಸ್ಥಿತಿ ಗಂಭೀರ…
ಚಂದ್ರವಳ್ಳಿ ನ್ಯೂಸ್, ರಾಮನಗರ:
ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಗೊಲ್ಲರದೊಡ್ಡಿ ಗ್ರಾಮದ ಮಕ್ಕಳಿಬ್ಬರು ಮನೆ ಪಾಠ ಮುಗಿಸಿಕೊಂಡು ಮನೆಗೆ ನಡೆದುಕೊಂಡು ವಾಪಸ್ ಬರುತ್ತಿದ್ದಾಗ ವೇಗವಾಗಿ ಅಜಾಗರೂಕತೆಯಿಂದ ಚಲಿಸುತ್ತಿದ್ದ ಸರಕು ವಾಹನದ ಅಪಘಾತಕ್ಕೆ ಸಿಲುಕಿ ದುರ್ಮರಣಕ್ಕೀಡಾಗಿರುವುದು ಅತೀವ ದುಃಖ, ಆಘಾತವನ್ನು ಉಂಟು ಮಾಡಿದೆ ಎಂದು ಜೆಡಿಎಸ್ ನಾಯಕ ಹೆಚ್.ಡಿ.ಕುಮಾರಸ್ವಾಮಿ ಕಂಬನಿ ಮಿಡಿದಿದ್ದಾರೆ.
ಚಾಲಕನ ನಿರ್ಲಕ್ಷ್ಯದಿಂದಲೇ ಈ ದುರಂತ ಸಂಭವಿಸಿದೆ. ಜೀವ ಕಳೆದುಕೊಂಡ ರೋಹಿತ್(5), ಶಾಲಿನಿ(8) ಕಂದಮ್ಮಗಳಿಗೆ ಕುಮಾರಸ್ವಾಮಿ ಭಾವಪೂರ್ಣ ಶ್ರದ್ಧಾಂಜಲಿ ಅರ್ಪಿಸಿ ಮಕ್ಕಳ ಆತ್ಮಕ್ಕೆ ಚಿರಶಾಂತಿ ಸಿಗಲಿ, ಈ ದುಃಖ ಭರಿಸುವ ಶಕ್ತಿಯನ್ನು ಭಗವಂತ ಆ ಕುಟುಂಬಗಳಿಗೆ ನೀಡಲಿ. ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ಮಕ್ಕಳಾದ ಸುಚಿತ್, ಗೌತಮಿ, ಲೇಖನಾ ಶೀಘ್ರ ಗುಣಮುಖರಾಗಲಿ ಎಂದು ದೇವರಲ್ಲಿ ಕುಮಾರಸ್ವಾಮಿ ಪ್ರಾರ್ಥಿಸಿದ್ದಾರೆ.
ರಾಜ್ಯ ಸರ್ಕಾರವು ಮೃತ ಮಕ್ಕಳ ಕುಟುಂಬಗಳಿಗೆ ಸೂಕ್ತ ಪರಿಹಾರ ನೀಡಬೇಕು ಹಾಗೂ ಗಾಯಾಳು ಮಕ್ಕಳ ಚಿಕಿತ್ಸೆಯ ವೆಚ್ಚ ಭರಿಸಬೇಕು. ರಸ್ತೆಗಳಲ್ಲಿ ಅತಿವೇಗ ಮತ್ತೂ ಅಜಾಗರೂಕತೆಯಿಂದ ವಾಹನಗಳನ್ನು ಚಲಾಯಿಸುವ ಚಾಲಕರ ವಿರುದ್ಧ ಪೊಲೀಸರು ನಿಗಾ ವಹಿಸಿ ಕಠಿಣ ಕ್ರಮ ಜರುಗಿಸಬೇಕು. ಅದರಲ್ಲೂ ಶಾಲಾ ಮಕ್ಕಳ ಸುರಕ್ಷತೆಯ ಕಡೆಗೆ ಹೆಚ್ಚು ಒತ್ತು ನೀಡಬೇಕು ಎಂದು ಪೊಲೀಸರಿಗೆ ಕುಮಾರಸ್ವಾಮಿ ಕಿವಿ ಮಾತು ಹೇಳಿದ್ದಾರೆ.